ಕಾಬೂಲ್ : ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ನಡುವಿನ ಗಡಿ ಸಂಘರ್ಷ ಈಗ ಭೀಕರ ಯುದ್ಧಕ್ಕೆ ತಿರುಗಿದ್ದು, ಅಫ್ಘಾನಿಸ್ತಾನದ ರಾಜಧಾನಿ ಕಾಬೂಲ್ ಮೇಲೆ ಪಾಕಿಸ್ತಾನ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 400 ಮಂದಿ ಮೃತಪಟ್ಟಿದ್ದಾರೆ. ಜತೆಗೆ 250ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಸೋಮವಾರ ರಾತ್ರಿಯ ವೇಳೆ ಕಾಬೂಲ್ನಲ್ಲಿರುವ ಓಮಿದ್ ಪುನರ್ವಸತಿ ಆಸ್ಪತ್ರೆಯನ್ನು ಗುರಿಯಾಗಿಸಿಕೊಂಡು ಪಾಕಿಸ್ತಾನ ದಾಳಿ ನಡೆಸಿದೆ ಎಂದು ಅಫ್ಘಾನ್ ಸರ್ಕಾರ ಮಾಹಿತಿ ನೀಡಿದೆ.
ಆಸ್ಪತ್ರೆ ಬಹುಭಾಗ ಧ್ವಂಸಗೊಂಡಿದ್ದು, ರಕ್ಷಣಾ ತಂಡಗಳು ಕಾರ್ಯಾಚರಣೆಯಲ್ಲಿ ಸಾಗಿವೆ. ಸಾವು-ನೋವಿನ ಸಂಖ್ಯೆ ಏರಿಕೆ ಆಗುವ ಸಾಧ್ಯತೆಯು ಇದೆ ಎಂದು ತಿಳಿಸಿದೆ.
ಆದರೆ, ಪಾಕಿಸ್ತಾನ ಈ ಆರೋಪವನ್ನು ತಳ್ಳಿಹಾಕಿದ್ದು, ನಾವು ಕೇವಲ ಮಿಲಿಟರಿ ಮತ್ತು ಉಗ್ರರ ಮೂಲಸೌಕರ್ಯಗಳನ್ನು ಮಾತ್ರ ಗುರಿಯಾಗಿಸಿಕೊಂಡಿದ್ದೇವೆ ಎಂದು ಹೇಳಿದೆ.
ಭಾರತ ಖಂಡನೆ
ಪಾಕಿಸ್ತಾನ ನಡೆಸಿದ ವೈಮಾನಿಕ ದಾಳಿಯನ್ನು ಭಾರತ ಖಂಡಿಸಿದೆ. ಇದು ಅನಾಗರಿಕ ಹಾಗೂ ಹೇಡಿತನದ ಕೃತ್ಯ ಎಂದು ಕಿಡಿಕಾರಿದೆ. ಆಸ್ಪತ್ರೆಯ ಮೇಲಿನ ದಾಳಿಯು ಪಾಕಿಸ್ತಾನದ ಘೋರ ಆಕ್ರಮಣಕಾರಿ ಕೃತ್ಯ. ಅಫ್ಘಾನಿಸ್ತಾನದ ಸಾರ್ವಭೌಮತ್ವದ ಮೇಲಿನ ದಾಳಿ. ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಗೆ ಬೆದರಿಕೆ ಎಂದು ವಿದೇಶಾಂಗ ಸಚಿವಾಲಯ ಆಕ್ರೋಶ ಹೊರಹಾಕಿದೆ.





