Mysore
26
few clouds

Social Media

ಸೋಮವಾರ, 02 ಫೆಬ್ರವರಿ 2026
Light
Dark

ಬಡತನ ಪ್ರಮಾಣ ಗಣನೀಯ ಇಳಿಕೆ: ನಿರ್ಮಲಾ

ಹೊಸದಿಲ್ಲಿ: ಕಳೆದ 12 ವರ್ಷಗಳಿಂದ ಪ್ರಧಾನಿ ನರೇಂದ್ರ ಮೋದಿ ನಾಯಕತ್ವದಲ್ಲಿ ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ನಡೆಯುತ್ತಿರುವುದರಿಂದ ಭಾರತದ ಜಿಡಿಪಿ ದರ ಶೇ.7.2 ರಷ್ಟು ಬೆಳವಣಿಗೆ ಸಾಧಿಸಿದೆ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಪ್ರಶಂಸಿಸಿದ್ದಾರೆ.

ಸಂಸತ್‌ನಲ್ಲಿ 2026-2027 ನೇ ಸಾಲಿನ ಬಜೆಟ್ ಮಂಡನೆಯಲ್ಲಿ ಮಾತನಾಡಿದ ಅವರು, ಭಾರತ ಇಂದು ಜಾಗತಿಕ ಮಟ್ಟದಲ್ಲಿ ಎಲ್ಲಾ ಕ್ಷೇತ್ರಗಳಲ್ಲಿಯೂ ಮುಂಚೂಣಿಯಲ್ಲಿದೆ. 12 ವರ್ಷಗಳಿಂದ ಮೋದಿ ನಾಯಕತ್ವದಲ್ಲಿ ದೇಶದ ಆರ್ಥಿಕತೆ ಪ್ರಗತಿಯಲ್ಲಿದೆ. ಜಿಡಿಪಿ ದರ-7.2ರಷ್ಟು ಏರಿಕೆಯಾಗುವ ಮೂಲಕ ವಿಶ್ವಮಟ್ಟದಲ್ಲಿ ನಂ.1 ಸ್ಥಾನಕ್ಕೆ ಕೊಂಡೊಯ್ಯುತ್ತಿದೆ ಎಂದು ಹೇಳಿದರು.

ಮಾಘ ಹುಣ್ಣಿಮೆ ಹಾಗೂ ರವಿದಾಸ್ ಅವರ ಜನ್ಮದಿನಾಚರಣೆಯಂದು ಸಂಸತ್ ಬಜೆಟ್ ಮಂಡನೆ ಮಾಡುತ್ತಿರುವುದು ನನಗೆ ಅತ್ಯಂತ ಹೆಮ್ಮೆಯ ಕ್ಷಣವಾಗಿದೆ. ಪರಿಶಿಷ್ಟ ಜಾತಿ,ಪರಿಶಿಷ್ಟ ಪಂಗಡ, ಬಡವರು, ಆದಿವಾಸಿಗಳು ಸೇರಿದಂತೆ ಎಲ್ಲಾ ಸಮುದಾಯಗಳ ಅಭಿವೃದ್ಧಿಗೆ ಸರ್ಕಾರ ಪಣ ತೊಟ್ಟಿದೆ ಎಂದರು.

ಜಿಡಿಪಿ ದರ ಹೆಚ್ಚಳವಾಗುತ್ತಿರುವುದರಿಂದ ದೇಶದಲ್ಲಿ ಬಡತನದ ಪ್ರಮಾಣ ಗಣನೀಯವಾಗಿ ಇಳಿಕೆಯಾಗುತ್ತದೆ. ಶಿಸ್ತುಬದ್ಧ ಆರ್ಥಿಕ ನಿರ್ವಹಣೆ ಮತ್ತು ಜನರ ಬಗ್ಗೆ ನಮ್ಮ ಸರ್ಕಾರ ಇಟ್ಟುಕೊಂಡ ಬದ್ಧತೆಯೇ ಇದಕ್ಕೆ ಪ್ರಮುಖ ಕಾರಣ ಎಂದರು.

ಜಾಗತಿಕ ಮಟ್ಟದಲ್ಲಿ ಭಾರತ ಪ್ರಮುಖ ರಫ್ತುದಾರ ರಾಷ್ಟ್ರವಾಗಿ ಹೊರಹೊಮ್ಮಿದೆ. ಉತ್ಪಾದನಾ ವಲಯದಲ್ಲೂ ಬೇರೆ ದೇಶಗಳಿಗೆ ಹೋಲಿಸಿದರೆ ನಾವು ಮೊದಲ ಸ್ಥಾನದಲ್ಲಿದ್ದೇವೆ. ಆತ್ಮನಿರ್ಭರ ಪ್ರಗತಿಯು ಎಲ್ಲಾ ಕ್ಷೇತ್ರಗಳಲ್ಲಿಯೂ ಕಾಣುತ್ತಿದೆ. ಉದ್ಯೋಗ ಸೃಷ್ಟಿಗೂ ನಮ್ಮ ಸರ್ಕಾರ ಹೆಚ್ಚಿನ ಗಮನ ಹರಿಸಿದೆ ಎಂದು ತಿಳಿಸಿದರು.

ವರ್ಷದಿಂದ ವರ್ಷಕ್ಕೆ ಸುಧಾರಣಾ ಕ್ರಮಗಳನ್ನು ತೆಗೆದುಕೊಂಡ ಪರಿಣಾಮ ಭಾರತ ಯಾವುದೇ ಮುಂದುವರಿದ ರಾಷ್ಟ್ರಗಳಿಗಿಂತ ಕಡಿಮೆ ಇಲ್ಲದೇ ಪ್ರಗತಿ ಸಾಧಿಸುತ್ತಿದೆ. ನಮ್ಮ ಆರ್ಥಿಕ ನಿರ್ವಹಣೆ ಉತ್ತಮ ಸ್ಥಿತಿಯಲ್ಲಿರುವುದರಿಂದ ಪ್ರಗತಿಯ ಬಗ್ಗೆ ಯಾರಿಗೂ ಆತಂಕ ಬೇಡ ಎಂದು ನಿರ್ಮಲಾ ಸೀತಾರಾಮನ್ ದೇಶದ ಜನತೆಗೆ ಆಶ್ವಾಸನೆ ನೀಡಿದರು.

Tags:
error: Content is protected !!