ನವದೆಹಲಿ: ಕೇಂದ್ರ ಸರ್ಕಾರ, ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿ ಮಾಡಿರುವುದನ್ನು ಪ್ರಶ್ನಿಸಿ ಕಾಂಗ್ರೆಸ್ ನಾಯಕ ಜೈರಾಮ್ ರಮೇಶ್ ಅವರು ಸುಪ್ರೀಂಕೋರ್ಟ್ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ಜನವರಿ.15 ರಂದು ವಿಚಾರಣೆ ನಡೆಸಲಿದೆ ಎಂದು ಹೇಳಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಅಧಿಕೃತ ವೆಬ್ಸೈಟ್ನಲ್ಲಿ ಮಾಹಿತಿ ನೀಡಿದ ಪ್ರಕಾರ, ಈ ಅರ್ಜಿಯನ್ನು ಸುಪ್ರೀಂಕೋರ್ಟ್ನ ಮುಖ್ಯ ನ್ಯಾಯಮೂರ್ತಿ ಸಂಜೀವ ಖನ್ನಾ ಅವರ ನೇತೃತ್ವದ ಪೀಠವೂ ಜನವರಿ.15ರಂದು ವಿಚಾರಣೆ ನಡೆಸಲಿದೆ ಎಂದು ಮಾಹಿತಿ ನೀಡಿದೆ.
ಏನಿದು ಪ್ರಕರಣ?
ಕೇಂದ್ರ ಸರ್ಕಾರ, ಚುನಾವಣಾ ನಿಯಮದಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್ಕಾಸ್ಟಿಂಗ್ ದೃಶ್ಯಾವಳಿಗಳು ಹಾಗೂ ಅಭ್ಯರ್ಥಿಗಳ ವೀಡಿಯೋ ರೆಕಾರ್ಡಿಂಗ್ಗಳಂತಹ ಕೆಲ ಎಲೆಕ್ಟ್ರಾನಿಕ್ ದಾಖಲೆಗಳು ಸಾರ್ವಜನಿಕರಿಗೆ ಲಭ್ಯವಾಗುವುದನ್ನು ತಡೆಯಲು ಚುನಾವಣಾ ನಿಯಮ ಹಾಗೂ ನಡಾವಳಿಗಳು-1961ಕ್ಕೆ ತಿದ್ದುಪಡಿಯನ್ನು ಮಾಡಿತ್ತು. ಆದರೆ ಈ ತಿದ್ದುಪಡಿಗೆ ವಿರೋಧ ವ್ಯಕ್ತಪಡಿಸಿ ಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಸುಪ್ರೀಂಕೋರ್ಟ್ ಮಾಹಿತಿಗೆ ಜೈರಾಮ್ ಪ್ರತಿಕ್ರಿಯೆ
ಎಐಸಿಸಿ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಲ್ಲಿಸಿರುವ ರಿಟ್ ಅರ್ಜಿಯ ಬಗ್ಗೆ ಸುಪ್ರೀಂಕೋರ್ಟ್ ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಮಾಹಿತಿ ನೀಡಿದೆ. ಅದಕ್ಕೆ ಜೈರಾಮ್ ಅವರು ಪ್ರತಿಕ್ರಿಯೆ ನೀಡಿ ಚುನಾವಣಾ ಪ್ರಕ್ರಿಯೆಯ ಸಮಗ್ರತೆ ವೇಗವಾಗಿ ನಾಶವಾಗುತ್ತಿದೆ. ಅದನ್ನು ಪುನರ್ ಸ್ಥಾಪಿಸಲು ಸುಪ್ರೀಂಕೋರ್ಟ್ ಸಹಾಯ ಮಾಡುತ್ತದೆ ಎಂದು ನಾನು ಭಾವಿಸುತ್ತೇನೆ ಎಂದು ತಿಳಿಸಿದ್ದಾರೆ.
ದೇಶದಲ್ಲಿ ಸಾಂವಿಧಾನಿಕ ಸಂಸ್ಥೆಯಾಗಿರುವ ಚುನಾವಣಾ ಆಯೋಗವೂ ಮುಕ್ತ ಮತ್ತು ನ್ಯಾಯಸಮ್ಮತ ಚುನಾವಣೆಗಳನ್ನು ನಡೆಸಬೇಕು. ಅಲ್ಲದೇ ಏಕ ಪಕ್ಷೀಯವಾಗಿ ಹಾಗೂ ಸಾರ್ವಜನಿಕರ ಸಮಾಲೋಚನೆಯಿಲ್ಲದೆ ಇಂತಹ ಪ್ರಮುಖ ಕಾನೂನುಗಳನ್ನು ಲಜ್ಜೆಗೆಟ್ಟ ರೀತಿಯಲ್ಲಿ ತಿದ್ದುಪಡಿ ಮಾಡಲು ಅನುಮತಿಸುವುದಿಲ್ಲ. ಒಂದು ವೇಳೆ ಸಾರ್ವಜನಿಕರಿಗೆ ಅಗತ್ಯವಾದ ರೀತಿಯಲ್ಲಿ ಮಾಹಿತಿ ನೀಡಿ ಚುನಾವಣಾ ಪ್ರಕ್ರಿಯೆಯನ್ನು ಇನ್ನಷ್ಟು ಪಾರದರ್ಶಕ ಮತ್ತು ಜವಾಬ್ದಾರಿಯಿಂದ ನಡೆಸಿದ್ದರೆ, ಆಗ ಇದಕ್ಜೆ ಅರ್ಥ ಇರುತ್ತಿತ್ತು ಎಂದು ಹೇಳಿದ್ದಾರೆ.