ಹೊಸದಿಲ್ಲಿ : 2017ರ ಉನ್ನಾವೋ ಅತ್ಯಾಚಾರ ಪ್ರಕರಣದ ಪ್ರಮುಖ ಆರೋಪಿ ಕುಲದೀಪ್ ಸಿಂಗ್ ಸೆಂಗಾರ್ಗೆ ಜಾಮೀನು ದೊರೆತಿರುವುದನ್ನು ವಿರೋಧಿಸಿ ಸಂತ್ರಸ್ತೆ ತಾಯಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಅವರ ಮೇಲೆ ಸಿಆರ್ ಪಿಎಫ್ ಪೊಲೀಸರು ಹಲ್ಲೆ ನಡೆಸಿ, ಅವರ ಸುದ್ದಿಗೋಷ್ಠಿಯನ್ನೂ ತಡೆದಿದ್ದಾರೆ.
ಬುಧವಾರ ದಿಲ್ಲಿಯ ಭದ್ರತಾ ಸಿಬ್ಬಂದಿ ಉನ್ನಾವ್ ಅತ್ಯಾಚಾರ ಸಂತ್ರಸ್ತೆ ಮತ್ತು ಆಕೆಯ ತಾಯಿ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡದಂತೆ ತಡೆದರು. ಆಕೆಯ ವೃದ್ಧ ತಾಯಿಯನ್ನು ಚಲಿಸುವ ಬಸ್ಸಿನಿಂದ ಇಳಿಯುವಂತೆ ಒತ್ತಾಯಿಸಿದರು ಎನ್ನಲಾಗಿದೆ.
2017 ರ ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಅಮಾನತುಗೊಳಿಸಿದ ಒಂದು ದಿನದ ನಂತರ ಈ ಘಟನೆ ಸಂಭವಿಸಿದೆ.
ಸೆಂಗಾರ್ ಅವರ ಮೇಲ್ಮನವಿ ಇತ್ಯರ್ಥವಾಗುವವರೆಗೆ ನ್ಯಾಯಾಲಯವು ಶಿಕ್ಷೆಯನ್ನು ಕೆಲವು ಷರತ್ತುಗಳಿಗೆ ಒಳಪಟ್ಟು ಅಮಾನತುಗೊಳಿಸಿದೆ ಎನ್ನಲಾಗಿದೆ.
ಸಂತ್ರಸ್ಥೆ ತಾಯಿ ಹೇಳಿದ್ದೇನು?
ಪ್ರತಿಭಟನೆ ವೇಳೆ ಮಾತನಾಡಿದ ಸಂತ್ರಸ್ತೆ, ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿಯೇ ಸೆಂಗಾರ್ ಗೆ ಜಾಮೀನು ನೀಡಲಾಗಿದೆ ಎಂದು ಆರೋಪಿಸಿದರು. ಅತ್ಯಾಚಾರ ಆರೋಪಿ ಹೊರಗಿರುವುದು ತಮ್ಮ ಹಾಗೂ ಕುಟುಂಬದ ಸುರಕ್ಷತೆಗೆ ಅಪಾಯಕಾರಿಯಾಗಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು. ಜಾಮೀನು ಆದೇಶ ರದ್ದುಗೊಳಿಸಬೇಕು ಎಂದು ಒತ್ತಾಯಿಸಿದ ಅವರು, ನ್ಯಾಯಕ್ಕಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿ ತಿಳಿಸಿದರು.
ಇದನ್ನೂ ಓದಿ:-ರೈತರಿಗೆ ಅಗತ್ಯವಿರುವ ಸೌಲಭ್ಯ ಒದಗಿಸಲು ಸರ್ಕಾರ ಬದ್ದ : ಸಚಿವ ಕೆ.ವೆಂಕಟೇಶ್
ಅಷ್ಟೇ ಅಲ್ಲದೇ, “ನಮಗೆ ನ್ಯಾಯ ಸಿಗಲಿಲ್ಲ. ಅವರು ನನ್ನ ಮಗಳನ್ನು ಸೆರೆಯಾಳುಗಳಂತೆ ಕರೆದುಕೊಂಡು ಹೋಗುತ್ತಿದ್ದಾರೆ. ಈ ಭದ್ರತಾ ಸಿಬ್ಬಂದಿ ನಮ್ಮೆಲ್ಲರನ್ನೂ ಕೊಲ್ಲಲು ಬಯಸುತ್ತಾರೆ. ಕುಲದೀಪ್ ಸೆಂಗಾರ್ ಅವರ ಜಾಮೀನು ರದ್ದುಗೊಳಿಸಬೇಕು. ಇಲ್ಲದಿದ್ದರೆ, ನಾವು ನಮ್ಮ ಪ್ರಾಣವನ್ನೇ ತ್ಯಜಿಸುತ್ತೇವೆ. ನಾವು ಸುರಕ್ಷಿತವಾಗಿಲ್ಲ ಎಂದು ಹೇಳಿದ್ದಾರೆ.
ಏನಿದು ಪ್ರಕರಣ?
2017 ರ ಉನ್ನಾವೋ ಅತ್ಯಾಚಾರ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿರುವ ಸೆಂಗಾರ್ ಅವರ ಜೈಲು ಶಿಕ್ಷೆಯನ್ನು ದೆಹಲಿ ಹೈಕೋರ್ಟ್ ಮಂಗಳವಾರ ಅಮಾನತುಗೊಳಿಸಿದೆ, ಅವರು ಈಗಾಗಲೇ ಏಳು ವರ್ಷ ಐದು ತಿಂಗಳು ಜೈಲು ಶಿಕ್ಷೆಯನ್ನು ಅನುಭವಿಸಿದ್ದಾರೆ ಎಂದು ಕೋರ್ಟ್ ಹೇಳಿದೆ. ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುಬ್ರಮೋನಿಯಂ ಪ್ರಸಾದ್ ಮತ್ತು ನ್ಯಾಯಮೂರ್ತಿ ಹರೀಶ್ ವೈದ್ಯನಾಥನ್ ಶಂಕರ್ ಅವರ ಪೀಠವು ಸೆಂಗಾರ್ ಅವರಿಗೆ ಹಲವಾರು ಷರತ್ತುಗಳನ್ನು ವಿಧಿಸಿ, 15 ಲಕ್ಷ ರೂಪಾಯಿಗಳ ವೈಯಕ್ತಿಕ ಬಾಂಡ್ ಮತ್ತು ಅದೇ ಮೊತ್ತದ ಮೂವರು ಶ್ಯೂರಿಟಿಗಳನ್ನು ಸಲ್ಲಿಸುವಂತೆ ನಿರ್ದೇಶಿಸಿತು.



