ಹೊಸದಿಲ್ಲಿ : ಉಪರಾಷ್ಟ್ರಪತಿ ಚುನಾವಣೆಗೆ ಆಡಳಿತರೂಢ ಎನ್ಡಿಎ ಮೈತ್ರಿಕೂಟದ ಅಭ್ಯರ್ಥಿಯಾಗಿ ಮಹಾರಾಷ್ಟ್ರ ರಾಜ್ಯಪಾಲ ಸಿ.ಪಿ ರಾಧಾಕೃಷ್ಣನ್ ಅವರು ಕಣಕ್ಕಿಳಿಯಲಿದ್ದಾರೆ.
ಭಾನುವಾರ ಹೊಸದಿಲ್ಲಿಯ ಪಕ್ಷದ ಪ್ರಧಾನ ಕಚೇರಿಯಲ್ಲಿ ಭಾರತೀಯ ಜನತಾ ಪಕ್ಷವು ತನ್ನ ಸಂಸದೀಯ ಮಂಡಳಿಯ ಸಭೆಯನ್ನು ನಡೆಸಿತು. ಬಳಿಕ ಅಭ್ಯರ್ಥಿಯನ್ನು ಘೋಷಿಸಿತು.
ಸಿ.ಪಿ ರಾಧಕೃಷ್ಣನ್ ಕೊಯಮತ್ತೂರಿನಿಂದ ಎರಡು ಭಾರಿ ಸಂಸದರಾಗಿದ್ದರು. ಮಾಜಿ ಪ್ರಧಾನಿ ವಾಜಪೇಯಿ ಮತ್ತು ಬಿಜೆಪಿ ನಾಯಕ ಎಲ್.ಕೆ ಅಡ್ವಾಣಿ ಅವರ ನಾಯಕತ್ವದಡಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ.
ಜಗದೀಪ್ ಧಂಖರ್ (74) ಅವರು ಆರೋಗ್ಯ ಕಾರಣಗಳನ್ನು ನೀಡಿ ಜುಲೈ 21, 2025 ರಂದು ಉಪ ರಾಷ್ಟ್ರಪತಿ ಹುದ್ದೆಗೆ ರಾಜೀನಾಮೆ ನೀಡಿದ್ದರು. ಭಾರತದ ಉಪರಾಷ್ಟ್ರಪತಿ ಚುನಾವಣೆಗೆ ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಸೆಪ್ಟೆಂಬರ್ 9 ರಂದು ಬೆಳಿಗ್ಗೆ 10 ರಿಂದ ಸಂಜೆ 5 ರವರೆಗೆ ಸಂಸತ್ ಭವನದ ಮೊದಲ ಮಹಡಿಯಲ್ಲಿ ಮತದಾನ ನಡೆಯಲಿದೆ.





