ದಾವಣಗೆರೆ: ರಾಜ್ಯ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದು, ರಾಜಕೀಯ ನಾಯಕರು ಪ್ರಚಾರವನ್ನು ಜೋರಾಗಿ ನಡೆಸಿದ್ದಾರೆ. ಮತದಾರರನ್ನು ತಮ್ಮತ್ತ ಸೆಳೆಯಲು ವಿವಿಧ ಗಿಫ್ಟ್ಗಳು, ಭಾಗ್ಯಗಳನ್ನು ಘೋಷಿಸುತ್ತಿದ್ದಾರೆ. ರಾಜ್ಯ ಬಿಜೆಪಿ ನಾಲ್ಕು ದಿಕ್ಕಿನಿಂದ ವಿಜಯ ಸಂಕಲ್ಪ ರಥಯಾತ್ರೆ ಪ್ರಾರಂಭಿಸಿದೆ. ಈ ವಿಜಯ ಸಂಕಲ್ಪ ರಥ ಯಾತ್ರೆಗೆ ಚಾಲನೆ ನೀಡಲು ಕೇಂದ್ರ ನಾಯಕರು ರಾಜ್ಯಕ್ಕೆ ಬಂದು ಹೋಗಿದ್ದಾರೆ. ಬಿಜೆಪಿ ಹೈ ಕಮಾಂಡ್ ರಾಜ್ಯ ಪ್ರವಾಸ ಮಾಡುತ್ತಿದ್ದು, ಮತಗಳ ಕ್ರೋಢೀಕರಣಕ್ಕೆ ಟೊಂಕ ಕಟ್ಟಿ ನಿಂತಿದ್ದಾರೆ. ಶತಾಯಗತಾಯ ಈ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರದ ಚುಕ್ಕಾಣಿ ಹಿಡಿಯಲು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ರಾಜ್ಯ ಸುತ್ತುತ್ತಿದ್ದಾರೆ. ಅದರಂತೆ ಈಗ ಮತ್ತೆ ಮಾರ್ಚ್ 12ರಂದು ದಾವಣಗೆರೆ ಜಿಲ್ಲೆಯ ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ.
ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮ ವಸತಿ ಶಾಲೆ ಮೈದಾನದಲ್ಲಿ ನಡೆಯುವ 53 ಸಾವಿರ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸೌಲಭ್ಯ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುತ್ತಾರೆ. ದಾವಣಗೆರೆ, ವಿಜಯನಗರ, ಗದಗ, ಧಾರವಾಡ ಸೇರಿದಂತೆ 12 ಜಿಲ್ಲೆಗಳ 53 ಸಾವಿರ ಫಲಾನುಭವಿಗಳು ಸಮಾವೇಶದಲ್ಲಿ ಸೇರುವ ನಿರೀಕ್ಷೆ ಇದೆ. ಅಮಿತ್ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖರು ಸಾಥ್ ನೀಡಲಿದ್ದಾರೆ.