ಬೆಂಗಳೂರು : ಇನ್ವೆಸ್ಟ್ ಕರ್ನಾಟಕ 2022ರ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಇ ಸಹಿ ಹಾಕಲಾಗಿರುವ ಎಲ್ಲ ಬಂಡವಾಳ ಹೂಡಿಕೆಯ ಒಪ್ಪಂದಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದ್ದು, ಈ ಯೋಜನೆಗಳು ವಾಸ್ತವದಲ್ಲಿ ಕಾರ್ಯಗತಗೊಳ್ಳುವ ನಿಟ್ಟಿನಲ್ಲಿ ಸರ್ಕಾರ ಎಲ್ಲಾ ಅನುಮತಿಗಳನ್ನು ಹಾಗೂ ಸಹಕಾರವನ್ನು ನೀಡಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬೆಂಗಳೂರಿನ ಅರಮನೆ ಮೈದಾನದ ಆವರಣದಲ್ಲಿ ಇನ್ವೆಸ್ಟ್ ಕರ್ನಾಟಕ ಬಿಲ್ಡ್ ಫಾರ್ ದ ವರ್ಲ್ಡ್..2022 ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.ಕರ್ನಾಟಕದಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣವನ್ನು ಸರ್ಕಾರ ನಿರ್ಮಿಸಲಿದೆ. ಗರಿಷ್ಟ ಮಟ್ಟದ ದಕ್ಷ ಹಾಗೂ ಉತ್ತಮ ಗುಣಮಟ್ಟದ ಉತ್ಪಾದಕತೆ ರಾಜ್ಯದಲ್ಲಿ ಆಗಬೇಕಿದೆ. ಆರ್ಥಿಕತೆಯಲ್ಲಿ ಪರಿಣಾಮ ಮಾತ್ರ ಮಹತ್ವದ ಪಾತ್ರ ವಹಿಸುತ್ತದೆ. ಈ ಬಂಡವಾಳಗಳು ವಾಸ್ತವವಾಗಿ ಬದಲಾಯಿಸುವುದೇ ಸರ್ಕಾರದ ಮುಂದಿನ ಗುರಿಯಾಗಿದೆ.
ಈಗ ಕಾಗದದ ಮೇಲಿರುವ ಬಂಡವಾಳ, ವಾಸ್ತವವಾಗಬೇಕು. 2.80 ಲಕ್ಷ ಕೋಟಿಗೂ ಹೆಚ್ಚಿನ ಬಂಡವಾಳ ಯೋಜನೆಗಳಿಗೆ ಈಗಾಗಲೇ ಅನುಮೋದನೆಯನ್ನು ಸರ್ಕಾರ ನೀಡಿದೆ. ಮುಂದಿನ ಮೂರು ತಿಂಗಳೊಳಗೆ ಮುಂದಿನ ಬಂಡವಾಳ ಹೂಡಿಕೆಯ ಯೋಜನೆಗಳ ಬಗ್ಗೆ ಸರ್ಕಾರ ಅನುಮೋದನೆ ನೀಡಲು ಕ್ರಮ ಕೈಗೊಳ್ಳಲಿದೆ. ರಾಜ್ಯಸರ್ಕಾರ ಬಂಡವಾಳ ಹೂಡಿಕೆಯ ಬಗ್ಗೆ ಬಹಳ ಗಂಭೀರವಾಗಿದ್ದು, ಹೂಡಿಕೆದಾರರೂ ಸಹ ಇದೇ ಗಂಭೀರತೆಯನ್ನು ಹೊಂದಬೇಕಾಗುತ್ತದೆ ಎಂದರು.
ಕರ್ನಾಟಕ ಏರೋಸ್ಪೇಸ್, ಬಯೋಟೆಕ್,ನವೀಕರಿಸಬಹುದಾದ ಇಂಧನ ಸೇರಿದಂತೆ ಹಲವು ರಂಗಗಳಲ್ಲಿ ಮುಂಚೂಣಿಯಲ್ಲಿದೆ. ರಾಜ್ಯ ಸ್ಟಾರ್ಟ್ ಅಪ್ ಹಾಗೂ ಯೂನಿಕಾರ್ನ್ ಗಳಲ್ಲಿ ಕರ್ನಾಟಕ ಮೊದಲ ಸ್ಥಾನದಲ್ಲಿದೆ. ಭಾರತದ ಸುಮಾರು 105 ಯೂನಿಕಾರ್ನ್ ಗಳಲ್ಲಿ ಸುಮಾರು 35 ಯೂನಿಕಾರ್ನ್ ಕರ್ನಾಟಕದಲ್ಲಿವೆ.
ಉತ್ಪಾದನಾ ವಲಯ, ಸೇವಾ ವಲಯ, ಐಟಿಬಿಟಿ ವಲಯ, ಸ್ಟಾರ್ಟ್ ಅಪ್ ವಲಯದಲ್ಲಿ ಕರ್ನಾಟಕ ಬಲಿಷ್ಟವಾಗಿದೆ. ಕರ್ನಾಟಕದಲ್ಲಿ ಈಗಾಗಲೇ ಸ್ಥಾಪಿತವಾಗಿರುವ ಪ್ರತಿಷ್ಠಿತ ಕೈಗಾರಿಕೆಗಳು ರಾಜ್ಯದಲ್ಲಿಯೇ ಇನ್ನಷ್ಟು ವಿಸ್ತರಣೆಯಾಗುತ್ತಿವೆ. ವಿಶ್ವಮಟ್ಟಕ್ಕೆ ಕರ್ನಾಟಕದಲ್ಲಿ ಕೈಗಾರಿಕೆಗಳು ಬೆಳೆಯಬೇಕು ಹಾಗೂ ವಿಶ್ವದ ಅಭಿವೃದ್ಧಿಯ ಸಂಕಲ್ಪವನ್ನು ಒಟ್ಟಾಗಿ ಕೈಗೊಳ್ಳೊಣ ಎಂದರು.
ಸಣ್ಣ ಗ್ಯಾರೇಜ್ ನಿಂದ ಹಿಡಿದು ದೊಡ್ಡ ಸಂಸ್ಥೆಯವರೆಗೆ ಸಂಶೋಧನೆಗೆ ಒತ್ತು ನೀಡಲಾಗುವುದು. ಐಐಟಿ, ಐಐಎಂ. ಐಐಎಸ್ ಸಿ, ಡಿ ಆರ್ ಡಿಓ ಸೇರಿದಂತೆ ಪ್ರಮುಖ ಸಂಸ್ಥೆಗಳು ರಾಜ್ಯದಲ್ಲಿವೆ. 400 ಅಂರಾಷ್ಟ್ರೀಯ ಗುಣಮಟ್ಟದ ಸಂಶೋಧನಾ ಕೇಂದ್ರಗಳು ಬೆಂಗಳೂರಿನಲ್ಲಿವೆ. ಪ್ರಪಂಚದಾದ್ಯಂತ ಸುಮಾರು 10 ಸಾವಿರ ಇಂಜಿನಿಯರ್ ಗಳು ಬೆಂಗಳೂರಿನಲ್ಲಿ ಸ್ಥಾಪಿತವಾಗಿರುವ ಕಂಪನಿಗಳಲ್ಲಿ ಸಂಶೋಧನಾ ಕಾರ್ಯ ಕೈಗೊಂಡಿದ್ದಾರೆ.
ಜಿನೋಮ್ಯಾಟಿಕ್ಸ್ ನಿಂದ ಏರೋಸ್ಪೇಸ್ ವಲಯದಲ್ಲಿ ಸಂಶೋಧನೆಗಳು ನಡೆಯುತ್ತವೆ. ಕೇವಲ ಕರ್ನಾಟಕ, ಭಾರತ, ವಿಶ್ವವಲ್ಲದೇ, ಇಡೀ ಮಾನವ ಕುಲದ ಅಭಿವೃದ್ಧಿಯೇ ಕರ್ನಾಟಕದಲ್ಲಾಗುತ್ತದೆ. ಕೇಂದ್ರ ನೀತಿ ಆಯೋಗದ ಸೂಚ್ಯಂಕದಂತೆ ಆವಿಷ್ಕಾರದಲ್ಲಿ ಕರ್ನಾಟಕ ಮೊದಲನೇ ಸ್ಥಾನದಲ್ಲಿದೆ ಎಂದು ತಿಳಿಸಿದರು.
7 ಲಕ್ಷ ಕೋಟಿ ಬಂಡವಾಳ ಹೂಡಿಕೆ : ಕೋವಿಡ್ ನಂತರ ದೊಡ್ಡ ಪ್ರಮಾಣದಲ್ಲಿ ಬಂಡವಾಳ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಿರುವ ಮೊದಲ ರಾಜ್ಯ ಕರ್ನಾಟಕ 7 ಲಕ್ಷ ಕೋಟಿಗಿಂತ ಹೆಚ್ಚು ಬಂಡವಾಳ ಹರಿದುಬರಲು ಕರ್ನಾಟಕ ಶಕ್ತಿ, ಪರಂಪರೆ ಮತ್ತು ಕೈಗಾರಿಕಾ ಸ್ನೇಹಿ ವಾತಾವರಣದಿಂದ ಸಾಧ್ಯವಾಗಿದೆ. ಮೊದಲು ನಮ್ಮ ಮೇಲೆ ನಮಗೆ ವಿಶ್ವಾಸವಿರಬೇಕು. ನಮ್ಮ ಶಕ್ತಿ, ಸಾಮರ್ಥ್ಯದ ಮೇಲೆ ನಮಗೆ ವಿಶ್ವಾಸವಿರಬೇಕು. ಕರ್ನಾಟಕದಲ್ಲಿ ಕೋವಿಡ್ ತಂದೊಡ್ಡಿದ ಸವಾಲುಗಳನ್ನು ಅವಕಾಶಗಳನ್ನಾಗಿ ಮಾಡಿಕೊಳ್ಳಲಾಯಿತು.
ಕೋವಿಡ್ ಅನ್ನು ಸಮರ್ಥವಾಗಿ ನಿರ್ವಹಿಸುವುದರ ಜೊತೆಗೆ ಕೋವಿಡ್ ನಂತರದ ಕರ್ನಾಟಕದ ಅಭಿವೃದ್ಧಿಗಾಗಿ ಸಜ್ಜುಗೊಂಡಿತು. ಕೋವಿಡ್ ನಂತರ ಪ್ರಪಂಚದ ಆರ್ಥಿಕತೆಯ ಸನ್ನಿವೇಶಗಳು ಬದಲಾಗುತ್ತಿದ್ದು, ಈ ಬದಲಾವಣೆಗೆ ಕರ್ನಾಟಕ ಸಿದ್ಧಗೊಂಡಿತ್ತು. ಆರ್ಥಿಕತೆಯ ಚೇತರಿಕೆಯಲ್ಲಿ ದೇಶದಲ್ಲಿ ಮುಂಚೂಣಿಯಲ್ಲದ್ದ ರಾಜ್ಯ ಕರ್ನಾಟಕ. ರಾಜ್ಯವೇ ಸ್ವತ: ಈ ಕಾರ್ಯಕ್ಕೆ ಮುಂದಾಯಿತು. ರಾಜ್ಯವೇ ಬದಲಾವಣೆಗೆ ನಾಯಕತ್ವ ವಹಿಸಿ ಇಡೀ ದೇಶಕ್ಕೆ ಉತ್ತಮ ಉದಾಹರಣೆಯಾಯಿತು ಎಂದರು.
ಕರ್ನಾಟಕದಲ್ಲಿ ಉದ್ಯೋಗ ನೀತಿಯೂ ಇದೆ. ಕರ್ನಾಟಕದ ಜನ ಶ್ರೀಮಂತರಾಗುವ ಮೂಲಕ ರಾಜ್ಯ ಶ್ರೀಮಂತವಾಗಬೇಕು. ಪರಿಶ್ರಮ ಹಾಗೂ ಉದ್ಯೋಗ ಅವಕಾಶಗಳಿಂದ ಮಾತ್ರ ಸಾಧ್ಯ. ಈ ಸದುದ್ದೇಶದಿಂದ ಕರ್ನಾಟಕದಲ್ಲಿ ಉದ್ಯೋಗ ನೀತಿಯನ್ನು ಜಾರಿಗೆ ತರಲಾಗಿದೆ. ಕರ್ನಾಟಕದಲ್ಲಿ ಬಂಡವಾಳ ಹೂಡಿಕೆಗಳಿಗೆ ಎಲ್ಲ ರೀತಿಯ ಪ್ರೋತ್ಸಾಹಕಗಳನ್ನು ನೀಡಲಾಗುವುದು.
ಹೆಚ್ಚಿನ ಉದ್ಯೋಗ ಅವಕಾಶಗಳನ್ನು ನೀಡುವ ಕೈಗಾರಿಕೆಗಳಿಗೆ ಹೆಚ್ಚಿನ ಪ್ರೋತ್ಸಾಹಗಳನ್ನು ನೀಡಲಾಗುವುದು. ಕರ್ನಾಟಕದಲ್ಲಿ ಎಲ್ಲ ಸವಾಲುಗಳಿಗೆ ಪರಿಹಾರ ನೀಡಲಾಗುವುದು. ಸರ್ಕಾರ ಸಮಸ್ಯೆ ಭಾಗವಾಗದೇ ಪರಿಹಾರ ಭಾಗವಾಗಲಿದೆ.