ಬೆಂಗಳೂರು :– ಮಾಜಿ ಮುಖ್ಯಮಂತ್ರಿ ಹಾಗೂ ವಿಧಾನಸಭೆಯ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿಯಲ್ಲಿರುವ ಎಸ್ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್ ನಿರ್ಧರಿಸಿದೆ. ಈ ಮುತ್ತಿಗೆಗೆ ಪ್ರತಿಯಾಗಿ ಬಿಜೆಪಿ ಅಂದೇ ಮಡಿಕೇರಿಯಲ್ಲಿ ಜನ ಜಾಗೃತಿ ಸಮಾವೇಶ ಮಾಡಲು ಮುಂದಾಗಿದೆ.
ಹೀಗಾಗಿ ಆಗಸ್ಟ್ 26 ಕಾಫಿನಾಡು ಮಡಿಕೇರಿ ಎರಡು ರಾಷ್ಟ್ರೀಯ ಪಕ್ಷಗಳ ನಡುವಿನ ವಾಕ್ ಸಮರಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ.
ಆಗಸ್ಟ್ 26ರಂದು ಕಾಂಗ್ರೆಸ್ ಘಟಕ ಮಡಿಕೇರಿ ಚಲೋ ಹಮ್ಮಿಕೊಂಡಿದೆ. ಇದಕ್ಕೆ ಪ್ರತಿಯಾಗಿ ಟಾಂಗ್ ಕೊಡಲು ರಾಜ್ಯ ಬಿಜೆಪಿ ಸಿದ್ಧತೆ ನಡೆಸುತ್ತಿದೆ. ಒಟ್ಟಿನಲ್ಲಿ ಈ ಶುಕ್ರವಾರ ಮಡಿಕೇರಿಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿಯ ಶಕ್ತಿ ಪ್ರದರ್ಶನ ನಡೆಯಲಿದೆ.
ಯಾವುದೇ ಕಾರಣಕ್ಕೂ ಬಳ್ಳಾರಿ ಪಾದಯಾತ್ರೆ ರೀತಿ ಲಾಭ ಮಾಡಿಕೊಳ್ಳಲು ಬಿಡಬೇಡಿ. ಸುಮ್ಮನೆ ಕೂರಬೇಡಿ ಎಂದು ಕೊಡಗು ಜಿಲ್ಲೆಯ ಇಬ್ಬರು ಶಾಸಕರಿಗೆ ರಾಜ್ಯ ಬಿಜೆಪಿ ಘಟಕ ಬೆಂಬಲ ಸೂಚಿಸಿದೆ. ಮುಯ್ಯಿಗೆ ಮುಯ್ಯಿಗೆ ನಡೆಯಲಿ. ಸಿದ್ದರಾಮಯ್ಯ ಅಸ್ತ್ರಕ್ಮೆ ಬ್ರಹ್ಮಾಸ್ತ್ರ ಸಿದ್ದವಾಗಲಿ ಎಂದು ಸೂಚಿಸಲಾಗಿದೆ.
ಚುನಾವಣೆ ವರ್ಷ ಇರುವಾಗ ಅವರ ಆರೋಪ, ಪ್ರತಿಭಟನೆಗಳಿಗೆ ಪ್ರತಿಕ್ರಿಯೆ ನೀಡಲೇಬೇಕು. ಈ ಹಿಂದೆ ಬಳ್ಳಾರಿ ಪಾದಯಾತ್ರೆ ವೇಳೆ ಬಿಜೆಪಿಯಿಂದ ಪ್ರತಿ ಅಸ್ತ್ರ ದೊಡ್ಡ ಮಟ್ಟದಲ್ಲಿ ಪ್ರಯೋಗ ಆಗಿರಲಿಲ್ಲ. ಇದು ಸಹಜವಾಗಿಯೇ ಸಿದ್ದರಾಮಯ್ಯ ಮತ್ತು ಕಾಂಗ್ರೆಸ್ಗೆ ಲಾಭ ತಂದುಕೊಟ್ಟಿತ್ತು ಈಗ ಮತ್ತೆ ಅದೇ ರೀತಿ ರಾಜಕೀಯ ಲಾಭವಾಗದಂತೆ ಕೇಸರಿ ಪಡೆ ಎಚ್ಚರಿಕೆ ಹೆಜ್ಜೆ ಇಟ್ಟಿದೆ.
ಕೊಡಗಿನಲ್ಲಿ ಬಿಜೆಪಿ ಪ್ರಾಬಲ್ಯ ದೊಡ್ಡ ಮಟ್ಟದಲ್ಲಿ ಇದೆ. ಅಲ್ಲಿಯೇ ಉತ್ತರ ಕೊಡಿ ಎಂದು ಕೊಡಗು ಭಾಗದ ಶಾಸಕರಾದ ಅಪ್ಪಚ್ಚು ರಂಜನ್, ಕೆ.ಜಿ.ಬೋಪಯ್ಯಗೆ ಪಕ್ಷದ ಹಿರಿಯ ನಾಯಕರು ಸೂಚಿಸಿದ್ದಾರೆ ಎಂಬ ವಿಚಾರ ಮೂಲಗಳಿಂದ ತಿಳಿದು ಬಂದಿದೆ. ಸಿದ್ದರಾಮಯ್ಯ ಟಿಪ್ಪು ಪರ ಬ್ಯಾಟಿಂಗ್ ಮಾಡುತ್ತಿರುವುದು ಮತ್ತು ಅದರ ಜೊತೆಗೆ ಈಗ ಸಾವರ್ಕರ್ ವಿರುದ್ಧ ಸಿದ್ದರಾಮಯ್ಯ ಆಕ್ರೋಶವನ್ನ ಮುಂದಿಟ್ಟು ಹೋರಾಟಕ್ಕೆ ಬಿಜೆಪಿ ಸಿದ್ಧವಾಗಿದ್ದು ಆಗಸ್ಟ್ 26ರಂದು ಕಾಂಗ್ರೆಸ್ ಪ್ರತಿಭಟಿಸಿದರೆ ಅವತ್ತೇ ಬಿಜೆಪಿಯಿಂದ ಪ್ರತಿಭಟನೆಗೆ ಕಾರ್ಯತಂತ್ರ ರೂಪಿಸಲಾಗಿದೆ.
ಮಡಿಕೇರಿ ಚಲೋಗೆ ಕರೆಕೊಟ್ಟ ಕಾಂಗ್ರೆಸ್
ಸಿದ್ದರಾಮಯ್ಯ ಮೇಲೆ ಕೊಡಗಿನಲ್ಲಿ ಮೊಟ್ಟೆ ಎಸೆದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಕಾಂಗ್ರೆಸ್ ಶಾಸಕಾಂಗ ಪಕ್ಷ ಮಡಿಕೇರಿ ಚಲೋಗೆ ಕರೆಕೊಟ್ಟಿದೆ. ತೀವ್ರ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಕೊಡಗು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭ ಬಿಜೆಪಿ ಕಾರ್ಯಕರ್ತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದ್ದರು. ಈ ಸಂದರ್ಭ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದು ವಿರಾಜ್ಪೇಟೆಯ ಸಂಪತ್ ಎಂಬ ವ್ಯಕ್ತಿ ಆಕ್ರೋಶ ವ್ಯಕ್ತಪಡಿಸಿದ್ದರು.
ಕೊಡಗು ಜಿಲ್ಲೆಗೆ ಪ್ರತಿಪಕ್ಷ ನಾಯಕರ ಭೇಟಿ ಸಂದರ್ಭ ನಡೆದ ಈ ಅಹಿತಕರ ಘಟನೆಯನ್ನು ಖಂಡಿಸಿ ಇದೀಗ ಕಾಂಗ್ರೆಸ್ ಶಾಸಕಾಂಗ ಪಕ್ಷದ ಮೂಲಕವೇ ಮಡಿಕೇರಿ ಚಲೋ ಕೈಗೊಳ್ಳಲು ತೀರ್ಮಾನಿಸಿ ಅಧಿಕೃತ ಪ್ರಕಟಣೆ ಹೊರಡಿಸಲಾಗಿದೆ.
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರು ಆಗಿರುವ ಸಿದ್ದರಾಮಯ್ಯ ಹಾಗೂ ಪಕ್ಷದ ಹಿರಿಯ ನಾಯಕರ ಸೂಚನೆ ಮೇರೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಕಾರ್ಯದರ್ಶಿ ಈ. ತುಕಾರಾಮ್ ಅವರಿಂದ ಅಧಿಕೃತ ಸೂಚನೆ ಹೊರಬಿದ್ದಿದೆ.
ಆಗಸ್ಟ್ 26ರ ಬೆಳಗ್ಗೆ 10:30ಕ್ಕೆ ಪ್ರತಿಭಟನೆಗೆ ಕರೆ ನೀಡಲಾಗಿದೆ. ಮಡಿಕೇರಿಯ ಭಗವತಿ ನಗರದಲ್ಲಿರುವ ಎಸ್ಪಿ ಕಚೇರಿ ಎದುರು ಪ್ರತಿಭಟನೆ ಕೈಗೊಳ್ಳಲು ಕರೆಕೊಡಲಾಗಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಬಿ ಕೆ ಹರಿಪ್ರಸಾದ್, ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ ಪಾಟೀಲ್, ಮಾಜಿ ಸಚಿವರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಲಿದ್ದಾರೆ. ಕಾಂಗ್ರೆಸ್ ಪಕ್ಷದ ವಿಧಾನಸಭಾ ಸದಸ್ಯರು, ಪರಿಷತ್ ಸದಸ್ಯರು, ಲೋಕಸಭಾ ಸದಸ್ಯರು ರಾಜ್ಯ ಸಭಾ ಸದಸ್ಯರಿಗೆ ಸೂಚನೆ ರವಾನೆ ಮಾಡಲಾಗಿದೆ.