ಇಂದು ( ಡಿಸೆಂಬರ್ 19 ) ದೆಹಲಿಯ ಖಾಸಗಿ ಹೋಟೆಲ್ನಲ್ಲಿ ಇಂಡಿಯಾ ಮೈತ್ರಿಕೂಟದ ಸಭೆ ನಡೆದಿದ್ದು, 28 ಪ್ರತಿಪಕ್ಷ ನಾಯಕರು ಭಾಗವಹಿಸಿದ್ದ ಈ ಸಭೆಯಲ್ಲಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಹೆಸರನ್ನು ವಿರೋಧ ಪಕ್ಷದ ಬಣ INDIAದ ಪ್ರಧಾನ ಮಂತ್ರಿ ಅಭ್ಯರ್ಥಿಯನ್ನಾಗಿ ಪ್ರಸ್ತಾಪಿಸಿದ್ದಾರೆ ಎಂದು ಸಭೆಯ ಬಳಿಕ ಎಂಡಿಎಂಕೆ ನಾಯಕ ವೈಕೊ ತಿಳಿಸಿದರು.
ಇದಕ್ಕೆ ಪ್ರತಿಕ್ರಿಯಿಸಿರುವ ಮಲ್ಲಿಕಾರ್ಜುನ ಖರ್ಗೆ ಲೋಕಸಭೆಯಲ್ಲಿ ಮೊದಲು ಗೆಲ್ಲುವುದು ಮುಖ್ಯ, ಉಳಿದದ್ದನ್ನು ನಂತರ ನಿರ್ಧರಿಸಬಹುದು ಎಂದು ಹೇಳಿದ್ದಾರೆ. “ನಾನು ದೀನದಲಿತರಿಗಾಗಿ ಕೆಲಸ ಮಾಡುತ್ತೇನೆ, ಮೊದಲು ಗೆಲ್ಲಲಿ, ನಂತರ ನಾವು ನೋಡುತ್ತೇವೆ, ನಾನು ಏನನ್ನು ಬಯಸುವುದಿಲ್ಲ” ಎಂದು ಖರ್ಗೆ ತಿಳಿಸಿದ್ದಾರೆ.
ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಪ್ರಧಾನಿ ಅಭ್ಯರ್ಥಿ ಆಗಬಹುದೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಖರ್ಗೆ “ಮೊದಲು ನಾವು ಗೆದ್ದು ಬಹುಮತ ಪಡೆಯಬೇಕು. ನಂತರ ಸಂಸದರು ಪ್ರಜಾಸತ್ತಾತ್ಮಕವಾಗಿ ನಿರ್ಧರಿಸುತ್ತಾರೆ” ಎಂದಿದ್ದಾರೆ.




