ನವದೆಹಲಿ: ಐಸಿಸಿ ಚಾಂಪಿಯನ್ಸ್ ಟ್ರೋಫಿ ಏಕದಿನ ಕ್ರಿಕೆಟ್ ಟೂರ್ನಿಯಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಮತ್ತು ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಅವರು ಲಯಕ್ಕೆ ಮರಳುವುದು ಅತ್ಯಂತ ನಿರ್ಣಾಯಕವಾಗಲಿದೆ ಎಂದು ಮಾಜಿ ಆಟಗಾರ ಸುರೇಶ್ ರೈನಾ ಅಭಿಪ್ರಾಯಪಟ್ಟಿದ್ದಾರೆ.
ಇತ್ತೀಚೆನ ಸರಣಿಗಳಲ್ಲಿ ರೋಹಿತ್ ಹಾಗೂ ವಿರಾಟ್ ಕೊಹ್ಲಿ ವೈಫಲ್ಯವನ್ನು ಅನುಭವಿಸಿದ್ದರು.
ಹಿಂದಿನ ಐಸಿಸಿ ಟೂರ್ನಿಗಳಲ್ಲಿ ರೋಹಿತ್ ಹಾಗೂ ಕೊಹ್ಲಿ ಪ್ರದರ್ಶನ ಉತ್ತಮವಾಗಿದೆ. ಒಬ್ಬರನ್ನೊಬ್ಬರು ನೆಚ್ಚಿಕೊಂಡು ಅಡುತ್ತಾರೆ. ದೊಡ್ಡ ಮೊತ್ತ ಪೇರಿಸುವ ಸಾಮರ್ಥ್ಯ ಅವರಲ್ಲಿದೆ.
ಒಂದು ವೇಳೆ ಚಾಂಪಿಯನ್ಸ್ ಟ್ರೋಫಿಯಲ್ಲಿ ಅವರು ಉತ್ತಮ ಪ್ರದರ್ಶನ ನೀಡಲು ವಿಫಲವಾದರೆ, ಭಾರತದ ಚಾಂಪಿಯನ್ಸ್ ಟ್ರೋಫಿಯ ಅಭಿಯಾನವು ಅಂತ್ಯವಾಗುವ ಸಂಭವವಿದೆ ಎಂದು ಹೇಳಿದ್ದಾರೆ.
ಚಾಂಪಿಯನ್ಸ್ ಟ್ರೋಫಿಗೂ ಮುನ್ನ ಇಂಗ್ಲೆಂಡ್ ವಿರುದ್ಧ 3 ಪಂದ್ಯಗಳ ಏಕದಿನ ಸರಣಿ ಇದೆ. ಈ ಸರಣಿಯಲ್ಲಿ ರೋಹಿತ್ ಹಾಗೂ ಕೊಹ್ಲಿ ಲಯಕ್ಕೆ ಮರಳುವ ವಿಶ್ವಾಸವನ್ನು ರೈನಾ ವ್ಯಕ್ತಪಡಿಸಿದ್ದಾರೆ.
ಪಾಕಿಸ್ತಾನದ ಅತಿಥ್ಯದಲ್ಲಿ ಹೈಬ್ರಿಡ್ ಮಾದರಿಯಲ್ಲಿ ಚಾಂಪಿಯನ್ಸ್ ಟ್ರೋಫಿ ಫೆ.19 ರಿಂದ ಮಾರ್ಚ್ 9 ರವರೆಗೆ ನಡೆಯಲಿದೆ. ಭಾರತ ʼಎʼ ಗುಂಪಿನಲ್ಲಿದ್ದು, ಇದೇ ಗುಂಪಿನಲ್ಲಿರುವ ಪಾಕಿಸ್ತಾನ, ಬಾಂಗ್ಲಾದೇಶ ಹಾಗೂ ನ್ಯೂಜಿಲೆಂಡ್ ತಂಡಗಳೊಂದಿಗೆ ಸೆಣಸಲಿವೆ.