ರಾಂಚಿ : ಬಿಸಿಸಿಐ ಮಾಜಿ ಜಂಟಿ ಕಾರ್ಯದರ್ಶಿ ಹಾಗೂ ಜಾರ್ಖಂಡ್ ರಾಜ್ಯ ಕ್ರಿಕೆಟ್ ಸಂಸ್ಥೆಯ ಮಾಜಿ ಅಧ್ಯಕ್ಷ ಅಮಿತಾಬ್ ಚೌಧರಿ, ಮಂಗಳವಾರವಾದ ಇಂದು ಬೆಳಗ್ಗೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಅವರಿಗೆ 58 ವರ್ಷ ವಯಸ್ಸಾಗಿತ್ತು. ಅಮಿತಾಬ್ ಚೌಧರಿ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೈನ್, ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.
ಇಲ್ಲಿನ ಅಶೋಕ್ ನಗರ ನಿವಾಸಿಯಾಗಿದ್ದ ಅಮಿತಾಬ್ ಚೌಧರಿ, ಇಂದು ಮುಂಜಾನೆ ತಮ್ಮ ನಿವಾಸದಲ್ಲಿ ಏಕಾಏಕಿ ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆಸ್ಪತ್ರೆಯ ಮೂಲಗಳ ಪ್ರಕಾರ ಅಮಿತಾಬ್ ಚೌಧರಿ ಅವರಿಗೆ ಹೃದಯಸ್ತಂಭನವಾಗಿದೆ. ಆಸ್ಪತ್ರೆಯಲ್ಲಿ ಅವರಿಗೆ ಹೆಚ್ಚಿನ ಚಿಕಿತ್ಸೆ ನೀಡಲು ಪ್ರಯತ್ನಿಸಲಾಯಿತಾದರೂ, ಅವರನ್ನು ಪ್ರಾಣಾಪಾಯದಿಂದ ಪಾರು ಮಾಡಲು ವೈದ್ಯರಿಗೆ ಸಾಧ್ಯವಾಗಲಿಲ್ಲ.
ಇನ್ನು ಅಮಿತಾಬ್ ಚೌಧರಿಯವರ ನಿಧನಕ್ಕೆ ಜಾರ್ಖಂಡ್ ಮುಖ್ಯಮಂತ್ರಿ ಹೇಮಂತ್ ಸೊರೇನ್ ಕಂಬನಿ ಮಿಡಿದಿದ್ದಾರೆ. ಜಾರ್ಖಂಡ್ ಲೋಕಸೇವಾ ಆಯೋಗದ ಮಾಜಿ ಅಧ್ಯಕ್ಷರಾದ ಶ್ರೀಯುತ ಅಮಿತಾಬ್ ಚೌಧರಿಯವರ ಆಕಸ್ಮಿಕ ನಿಧನದ ದುಃಖಕರವಾದ ಸುದ್ದಿ ತಿಳಿಯಿತು. ಮಾಜಿ ಐಪಿಎಸ್ ಅಧಿಕಾರಿಯಾಗಿದ್ದ ಅಮಿತಾಬ್ ಚೌಧರಿಯವರು, ರಾಜ್ಯದಲ್ಲಿ ಕ್ರಿಕೆಟ್ ಕ್ರೀಡೆ ಬೆಳವಣಿಗೆಯಲ್ಲಿ ಮಹತ್ತರ ಪಾತ್ರವನ್ನು ನಿಭಾಯಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ ಹಾಗೂ ಅವರ ಕುಟುಂಬದವರಿಗೆ ಅಗಲಿಕೆಯ ದುಃಖ ಮರೆಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಟ್ವೀಟ್ ಮಾಡಿದ್ದಾರೆ.