ಕ್ರೀಡೆ

ಇರಾನ್‌ ಸದ್ದಡಗಿಸಿ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಷಿಪ್‌ ಗೆದ್ದ ಟೀಮ್ ಇಂಡಿಯಾ

ಬೆಂಗಳೂರು : ಅಕ್ಷರಶಃ ಅಧಿಕಾರಯುತ ಆಟವಾಡಿದ ಭಾರತ ತಂಡ 11ನೇ ಆವೃತ್ತಿಯ ಪುರುಷರ ಏಷ್ಯನ್‌ ಕಬಡ್ಡಿ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಪೂರ್ಣ ಪ್ರಾಬಲ್ಯ ಮೆರೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ. ದಕ್ಷಿಣ ಕೊರಿಯಾದ ಬುಸಾನ್‌ನಲ್ಲಿರುವ ಡಾಂಗ್‌ ಯೂ ಸೈನ್ಸ್‌ ಯೂನಿವರ್ಸಿಟಿ ಇಂಡೋರ್‌ ಜಿಮ್ನಾಸಿಯಂನಲ್ಲಿ ಜೂನ್‌ 30ರಂದು ನಡೆದ ಫೈನಲ್‌ನಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿದ ಸ್ಟಾರ್‌ ರೇಡರ್‌ ಪವನ್‌ ಕುಮಾರ್‌ ಸೆಹ್ರಾವತ್‌ ಸಾರಥ್ಯದ ಟೀಮ್ ಇಂಡಿಯಾ 42-32 ಅಂಕಗಳಿಂದ ಅಪಾಯಕಾರಿ ಹಾಗೂ ಬದ್ಧ ಎದುರಾಳಿ ಇರಾನ್‌ ತಂಡವನ್ನು ಬಗ್ಗುಬಡಿದು ಟ್ರೋಫಿ ಮುಡಿಗೇರಿಸಿಕೊಂಡಿದೆ. ಟೂರ್ನಿಯ ಇತಿಹಾಸದಲ್ಲಿ ಅತಿ ಹೆಚ್ಚು ಬಾರಿ ಟ್ರೋಫಿ ಗೆದ್ದ ತಂಡವಾಗಿರುವ ಭಾರತ ತಂಡ ದಾಖಲೆಯ ಎಂಟನೇ ಬಾರಿ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿದೆ.

ಕೂಟದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದು ಭಾರತ ತಂಡ ಚಾಂಪಿಯನ್ಸ್‌ ಪಟ್ಟ ಅಲಂಕರಿಸಿರುವುದು, ಕಬಡ್ಡಿ ಕ್ರೀಡೆಯಲ್ಲಿ ಭಾರತದ ತಂತ್ರಗಾರಿಕೆ, ಚಾಕಚಕ್ಯತೆ ಹಾಗೂ ಅನುಭವಕ್ಕೆ ಹಿಡಿದ ಕೈಗನ್ನಡಿ ಆಗಿದೆ. ಲೀಗ್‌ ಹಂತದ ರೌಂಡ್‌ ರಾಬಿನ್‌ ಪಂದ್ಯದಲ್ಲಿ ಭಾರತ ತಂಡ ಇರಾನ್‌ ಎದುರು 33-28 ಅಂಕಗಳ ಅಂತರದಲ್ಲಿ ರೋಚಕ ಗೆಲುವು ದಾಖಲಿಸಿತ್ತು. ಈ ಬಾರಿ ಪಾಕಿಸ್ತಾನ ಈ ಕೂಟದಲ್ಲಿ ಪಾಲ್ಗೊಂಡಿರಲಿಲ್ಲ. 2017ರಲ್ಲಿ ನಡೆದಿದ್ದ 10ನೇ ಆವೃತ್ತಿಯ ಚಾಂಪಿಯನ್‌ಷಿಪ್‌ ಟೂರ್ನಿಯ ಫೈನಲ್‌ನಲ್ಲಿ ಭಾರತ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ತಂಡವನ್ನು ಬಗ್ಗುಬಡಿದಿತ್ತು.

ಕಳೆದ ಆವೃತ್ತಿಗೆ ಹೋಲಿಸಿದರೆ ಈ ಬಾರಿ ಪಾಲ್ಗೊಂಡ ತಂಡಗಳ ಸಂಖ್ಯೆ ಕಡಿಮೆ. 10ನೇ ಆವೃತ್ತಿಯಲ್ಲಿ ಒಟ್ಟು 10 ತಂಡಗಳು ಸ್ಪರ್ಧೆಯಲ್ಲಿದ್ದವು. ಈ ಬಾರಿ ಭಾರತ, ಇರಾನ್‌, ಆತಿಥೇಯ ದಕ್ಷಿಣ ಕೊರಿಯಾ, ಜಪಾನ್‌, ಚೈನೀಸ್‌ ತೈಪೆ ಮತ್ತು ಹಾಂಕಾಂಗ್‌ ತಂಡಗಳು ಪಾಲ್ಗೊಂಡಿದ್ದವು. ರನ್ನರ್ಸ್‌ ಅಪ್‌ ಸ್ಥಾನ ಪಡೆದ ಇರಾನ್‌ ಬೆಳ್ಳಿ ಪದಕಕ್ಕೆ ತೃಪ್ತಿಪಟ್ಟರೆ, ಅಚ್ಚರಿಯ ಪ್ರದರ್ಶನ ನೀಡಿದ ಚೈನೀಸ್‌ ತೈಪೆ ತಂಡ ಮೊತ್ತ ಮೊದಲ ಬಾರಿ 3ನೇ ಸ್ಥಾನ ಅಲಂಕರಿಸಿ ಕಂಚಿನ ಪದಕ ತನ್ನದಾಗಿಸಿಕೊಂಡಿತು.

ಭಾರತ ತಂಡದ ಅಧಿಕಾರಯುತ ಪ್ರದರ್ಶನ
ಜೂನ್‌ 27ರಂದು ನಡೆದ ಟೂರ್ನಿಯ ಮೊದಲ ಪಂದ್ಯದಲ್ಲೇ ತನ್ನ ಕರಾಮತ್ತು ಪ್ರದರ್ಶಿಸಿದ್ದ ಟೀಮ್ ಇಂಡಿಯಾ, ಆತಿಥೇಯ ದಕ್ಷಿಣ ಕೊರಿಯಾ ತಂಡವನ್ನು 76-13 ಅಂಕಗಳಿಂದ ಬಗ್ಗುಬಡಿದು ಎದುರಾಳಿಗಳಿಗೆ ದಿಟ್ಟ ಸಂದೇಶ ರವಾನಿಸಿತ್ತು. ಬಳಿಕ ತನ್ನ ಎರಡನೇ ಪಂದ್ಯದಲ್ಲೂ ಚೈನೀಸ್‌ ತೈಪೆ ಎದುರು ಪ್ರಭುತ್ವ ಸಾಧಿಸಿ 53-19 ಅಂಕಗಳ ಜಯ ತನ್ನದಾಗಿಸಿಕೊಂಡಿತು. ಮೂರನೇ ಪಂದ್ಯದಲ್ಲಿಯೂ ಭಾರತದ ಭರ್ಜರಿ ಆಟ ಮುಂದುವರಿದು ಜಪಾನ್‌ ಎದುರು 62-17 ಅಂಕಗಳ ಗೆಲುವು ದೊರೆಯಿತು.

ಹಾಂಗ್‌ಕಾಂಗ್‌ ಎದುರು 64-20 ಅಂಕಗಳಿಂದ ಗೆದ್ದ ಭಾರತ ತಂಡಕ್ಕೆ ಲೀಗ್‌ ಹಂತದಲ್ಲಿ ತುರುಸಿನ ಪೈಪೋಟಿ ನೀಡಿದ ಏಕಮಾತ್ರ ತಂಡ ಎನಿಸಿದ ಇರಾನ್‌, 28-33 ಅಂಕಗಳ ಅಂತರದಲ್ಲಿ ಭಾರತದ ಎದುರು ಮಂಡಿಯೂರಿತ್ತು. ಲೀಗ್‌ನಲ್ಲಿ ಆಡಿದ ಐದಕ್ಕೆ ಐದೂ ಪಂದ್ಯಗಳನ್ನು ಗೆದ್ದ ಭಾರತ ಅಂಕಪಟ್ಟಿಯ ಅಗ್ರಸ್ಥಾನಿಯಾಗಿ ಫೈನಲ್‌ ಪ್ರವೇಶಿಸಿದರೆ, 4 ಜಯದೊಂದಿಗೆ 2ನೇ ಸ್ಥಾನ ಅಲಂಕರಿಸಿದ ಇರಾನ್‌ ಪ್ರಶಸ್ತಿ ಸುತ್ತಿಗೆ ಕಾಲಿಟ್ಟಿತ್ತು. ಚೈನೀಸ್‌ ತೈಪೆ ತಂಡ 5 ಪಂದ್ಯಗಳಲ್ಲಿ 3 ಜಯ ದಾಖಲಿಸಿ ಅಂಕಪಟ್ಟಿಯ 3ನೇ ಸ್ಥಾನದೊಂದಿಗೆ ಕಂಚಿನ ಪದಕ ತನ್ನದಾಗಿಸಿಕೊಂಡಿತು.

ಇದೇ ವರ್ಷ ಸೆಪ್ಟೆಂಬರ್‌ 23ರಿಂದ ಅಕ್ಟೋಬರ್‌ 8ರವರೆಗೆ ಚೀನಾದ ಹಾಂಗ್‌ಝೌ ಆತಿಥ್ಯದಲ್ಲಿ 19ನೇ ಆವೃತ್ತಿಯ ಏಷ್ಯನ್‌ ಗೇಮ್ಸ್‌ ಕ್ರೀಡಾಕೂಟ ನಡೆಯಲಿದ್ದು, ಏಷ್ಯನ್ ಚಾಂಪಿಯನ್‌ಷಿಪ್‌ ಗೆಲುವು ಭಾರತ ಕಬಡ್ಡಿ ತಂಡದ ಆತ್ಮವಿಶ್ವಾಸವನ್ನು ಹೆಚ್ಚುವಂತೆ ಮಾಡಿದೆ.

lokesh

Recent Posts

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಪ್ರಕರಣ : ಡಿಐಜಿ ನೇತೃತ್ವದಲ್ಲಿ ತನಿಖೆ

ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…

1 hour ago

ಭಾಷಣ ಮಾಡಿದ ವೇದಿಕೆ ಸ್ಥಳದ ಶುದ್ಧೀಕರಣ : ಇದು ನನ್ನ ವಿರುದ್ಧ ತೋರಿದ ಅಸ್ಪೃಶ್ಯತೆ ; ಖರ್ಗೆ ಕಿಡಿ

ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…

2 hours ago

ಪ್ರತಿಭಟನೆಗೆ ಸೀಮಿತವಾದ ಕರ್ನಾಟಕ ಬಂದ್ ; ಮೈಸೂರು, ಮಂಡ್ಯದಲ್ಲೂ ಹೋರಾಟಕ್ಕೆ ಸೀಮಿತ

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…

4 hours ago

ಮೈಸೂರು: ಹೊಸ ಮಠದ ಚಿದಾನಂದ ಸ್ವಾಮೀಜಿ ಲಿಂಗೈಕ್ಯ

ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…

10 hours ago

ಓದುಗರ ಪತ್ರ: ಹೋಟೆಲ್‌ಗಳ ಆಹಾರ ಶುದ್ಧತೆ, ಪದಾರ್ಥಗಳ ತಪಾಸಣೆ ನಿಯಮಿತವಾಗಿ ನಡೆಯಲಿ

ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್‌ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…

16 hours ago

ಓದುಗರ ಪತ್ರ: ವೈದ್ಯಕೀಯ ಸೀಟು ಹೆಚ್ಚಳ: ಪ್ರಶಂಸನೀಯ ನಡೆ

೨೦೨೮ - ೨೯ ರ ಶೈಕ್ಷಣಿಕ ವರ್ಷದ ವೇಳೆಗೆ ದೇಶಾದ್ಯಂತ ಹೆಚ್ಚುವರಿಯಾಗಿ ೫,೦೦೦ ಸ್ನಾತಕೋತ್ತರ ವೈದ್ಯಕೀಯ ಸೀಟುಗಳನ್ನು ಸೇರ್ಪಡೆಗೊಳಿಸಿ ದೇಶದಲ್ಲಿ…

16 hours ago