ಮಂಡ್ಯ: ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಿಂದಲೇ ಸ್ಪರ್ಧೆ ಮಾಡುವುದು ಖಚಿತ. ಮಂಡ್ಯ ಕ್ಷೇತ್ರ ಬಿಟ್ಟು ಎಲ್ಲಿಯೂ ಹೋಗುವುದಿಲ್ಲ ಎಂದು ಶನಿವಾರ ಸಂಸದೆ ಸುಮಲತಾ ಅಂಬರೀಶ್ ಹೇಳಿದರು.
ಮದ್ದೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು ಮುಂಬರುವ ಲೋಕಸಭಾ ಚುನಾವಣೆಯಲ್ಲಿಯೂ ಸ್ಪರ್ಧೆ ಮಾಡುತ್ತೇನೆ. ಈ ಬಗ್ಗೆ ಮುಂದೆ ಎಲ್ಲಾ ವಿಷಯವನ್ನೂ ತಿಳಿಸುತ್ತೇನೆ ಎಂದರು.
ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಹಾಗೂ ಕ್ಷೇತ್ರ ಹಂಚಿಕೆ ಕುರಿತು ಪ್ರತಿಕ್ರಿಯಿಸಿ ಮೈತ್ರಿ ವಿಚಾರ ನನಗೆ ಗೊತ್ತಿಲ್ಲ, ಆ ಬಗ್ಗೆ ನಾನು ಪ್ರತಿಕ್ರಿಯೆ ನೀಡಲ್ಲ ಎಂದು ಹೇಳಿದರು.
ಮಂಡ್ಯ ಸೇರಿದಂತೆ ರಾಜ್ಯದಲ್ಲಿನ ಬರ ಪರಿಸ್ಥಿತಿ ಕುರಿತು ಸಂಸತ್ ಅಧಿವೇಶನದ ಶೂನ್ಯವೇಳೆಯಲ್ಲಿ ಕೇಂದ್ರ ಸರ್ಕಾರದ ಗಮನ ಸೆಳೆಯುವ ಪ್ರಯತ್ನ ಮಾಡಿದ್ದೇನೆ. ಕಾವೇರಿ ವಿಚಾರ ಎಂದು ಬಂದಾಗ ನಾವು ಒಬ್ಬರನ್ನು ದೂಷಿಸುವುದು ಸರಿಯಲ್ಲ. ನ್ಯಾಯಾಲಯಗಳಲ್ಲಿ ಎಂದೂ ಕರ್ನಾಟಕಕ್ಕೆ ನ್ಯಾಯ ದೊರೆತಿಲ್ಲ. ಎರಡೂ ರಾಜ್ಯ ಸರ್ಕಾರಗಳು ಕುಳಿತು ಮಾತನಾಡಿ ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.





