ಬೆಳಗಾವಿ: ಬಾಗಲಕೋಟೆ ಜಿಲ್ಲೆಯ ಕೂಡಲಸಂಗಮದ ಪಂಚಮಸಾಲಿ ಪೀಠದಿಂದ ಜನವರಿ 14 ರಂದು ಬೆಳಿಗ್ಗೆ 11ಗಂಟೆಗೆ ಎಂಟನೇ ಹಂತದ ಹೋರಾಟಕ್ಕೆ ಚಾಲನೆ ನೀಡಲಾಗುವುದು ಎಂದು ಪಂಚಮಸಾಲಿ ಸಮುದಾಯದ ಪೀಠಾಧ್ಯಕ್ಷ ಬಸವಜಯ ಮೃತ್ಯುಂಜಯ ಸ್ವಾಮೀಜಿ ತಿಳಿಸಿದ್ದಾರೆ.
ನಗರದಲ್ಲಿ ಇಂದು(ಜನವರಿ.11) ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ ಪ್ರವರ್ಗ 2ಎ ಹಾಗೂ ಲಿಂಗಾಯತ ಉಪ ಪಂಗಡಗಳಿಗೆ ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಕಲ್ಪಿಸಬೇಕು ಎಂದು ಆಗ್ರಹಿಸಿ ಈ ಹೋರಾಟವನ್ನು ಮಾಡಲಾಗುತ್ತಿದೆ. ಡಿಸೆಂಬರ್ನಲ್ಲಿ ಬೆಳಗಾವಿಯ ಸುವರ್ಣಸೌಧದಲ್ಲಿ ನಡೆದ ಚಳಿಗಾಲದ ಅಧಿವೇಶನ ಸಂದರ್ಭದಲ್ಲಿ ಸರ್ಕಾರದ ಕುಮ್ಮಕ್ಕಿನಿಂದ ಪೊಲೀಸರು ನಮ್ಮ ಮೇಲೆ ಲಾಠಿಚಾರ್ಜ್ ಮಾಡಿದ್ದರು. ಹೀಗಾಗಿ ಲಾಠಿಚಾರ್ಜ್ ವೇಳೆ ಗಾಯಗೊಂಡಿದ್ದ ಹೋರಾಟಗಾರರಿಗೆ ಲಿಂಗಾಯತ ಪಂಚಮಸಾಲಿ ಮೀಸಲಾತಿ ವೀರ ಎಂಬ ಬಸವರಕ್ಷೆ ನೀಡುತ್ತೇವೆ ಎಂದಿದ್ದಾರೆ.
ಈ ಬಾರಿ ರಾಜ್ಯಾದ್ಯಾಂತ ಹಳ್ಳಿ-ಹಳ್ಳಿಗಳಲ್ಲಿ ʼಪಂಚಮಸಾಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನʼ ಎಂಬ ಧ್ಯೇಯ ವಾಕ್ಯದಡಿಯಲ್ಲಿ ಹೋರಾಟ ಮಾಡುತ್ತಿದ್ದೇವೆ. ಅಲ್ಲದೇ ಈ ವೇಳೆ ಸಾರ್ವಜನಿಕರ ಹತ್ತಿರ ಹೋಗಿ ಅಭಿಪ್ರಾಯ ಸಂಗ್ರಹಿಸಿ, ನಮ್ಮ ಗುರಿ ಸಾಧಿಸುತ್ತೇವೆ. ಹಾಗಾಗಿ ಈ ಹೋರಾಟದಲ್ಲಿ ಪಂಚಮಸಾಲಿ ಸಮುದಾಯದವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಹೇಳಿದ್ದಾರೆ.