Mysore
31
scattered clouds

Social Media

ಗುರುವಾರ, 26 ಫೆಬ್ರವರಿ 2026
Light
Dark

ಮಂಡ್ಯದಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ: ಸಿಎಂ ಸಿದ್ದರಾಮಯ್ಯ ಒಪ್ಪಿಗೆ

ಬೆಂಗಳೂರು: ಕನ್ನಡ ಸಂಘಟನೆಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮಂಡ್ಯದಲ್ಲಿ ಈ ಬಾರಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್‌ ತಿಂಗಳಲ್ಲಿಆಯೋಜಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.

ಸಿಎಂ ಅಧ್ಯಕ್ಷತೆಯಲ್ಲಿ ಗುರುವಾರ ‘ಕೃಷ್ಣಾ’ದಲ್ಲಿ ನಡೆದ ಸಾಹಿತ್ಯ ಸಮ್ಮೇಳನದ ಪೂರ್ವಭಾವಿ ಸಭೆಯಲ್ಲಿ ಸಮ್ಮೇಳನದ ರೂಪುರೇಷೆಗಳ ಬಗ್ಗೆ ಚರ್ಚಿಸಲಾಯಿತು.

ಫೆಬ್ರವರಿಯಲ್ಲೇ ಸಮ್ಮೇಳನ ನಡೆಸಲು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಶಿ ಉದ್ದೇಶಿಸಿದ್ದರು. 1994ರ ಫೆಬ್ರವರಿಯಲ್ಲಿ63ನೇ ಸಮ್ಮೇಳನವನ್ನು ಮಂಡ್ಯದಲ್ಲೇ ನಡೆಸಲಾಗಿತ್ತು. ಹೀಗಾಗಿ, ಫೆಬ್ರವರಿಯಲ್ಲೇ ಸಮ್ಮೇಳನ ನಡೆಸಿದರೆ, 30 ವರ್ಷಗಳ ನೆನಪಿನಾರ್ಥ ವಿಶೇಷವಾಗಿರುತ್ತದೆ ಎಂದು ಆಶಿಸಿದ್ದರು.

ಆದರೆ, ರಾಜ್ಯದಲ್ಲಿ ಬರಗಾಲ ಇರುವ ಹಿನ್ನೆಲೆಯಲ್ಲಿ ಸಮ್ಮೇಳನ ಮುಂದೂಡಲಾಗಿತ್ತು. ಈಗ ಸಿಎಂ ಜೂನ್‌ ತಿಂಗಳಲ್ಲಿ ಸಮ್ಮೇಳನ ನಡೆಸಿ ಎಂದು ಸೂಚನೆ ನೀಡಿದ್ದಾರೆ. ಆಗ ಯಾವುದೇ ಪರೀಕ್ಷೆಗಳು ಇರುವುದಿಲ್ಲವಾದ್ದರಿಂದ ಸಾರ್ವಜನಿಕರಿಗೂ ಅನುಕೂಲವಾಗುತ್ತದೆ. ಈ ಹಿಂದೆ ಸಮ್ಮೇಳನಕ್ಕೆ 25 ಕೋಟಿ ರೂ. ಅನುದಾನ ಕೋರಲಾಗಿತ್ತು. ಇದೀಗ ಸಮ್ಮೇಳನಕ್ಕೆ 30 ಕೋಟಿ ರೂ. ಅನುದಾನ ನೀಡುವಂತೆ ಕಸಾಪ ಸರಕಾರವನ್ನು ಕೋರಿದೆ.

ಈ ನಡುವೆ, ”ಈ ಬಾರಿಯ ಸಮ್ಮೇಳನವನ್ನು ಅದ್ಧೂರಿ ಎನ್ನುವುದಕ್ಕಿಂತ ಅರ್ಥಪೂರ್ಣವಾಗಿ ಆಚರಿಸಬೇಕು. ಜೂನ್‌ ಮೊದಲನೇ ವಾರದಲ್ಲಿಸಮ್ಮೇಳನ ಆಯೋಜಿಸುವುದು ಸೂಕ್ತ,” ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಜಿಲ್ಲಾಡಳಿತದ ಸಹಕಾರದೊಂದಿಗೆ ಜೂನ್‌ ಮೊದಲನೇ ವಾರದಲ್ಲಿಸಮ್ಮೇಳನ ಆಯೋಜಿಸುವಂತೆ ಮುಖ್ಯಮಂತ್ರಿಗಳು ಸಲಹೆ ನೀಡಿದರು.

ಸಾಧಕರನ್ನು ಸಮ್ಮೇಳನಾಧ್ಯಕ್ಷರನ್ನಾಗಿಸಿ:
ಸಮ್ಮೇಳನಾಧ್ಯಕ್ಷರನ್ನು ಆಯ್ಕೆ ಮಾಡುವಾಗ ಹಿರಿಯರು, ಸಾಹಿತ್ಯ ಕ್ಷೇತ್ರದಲ್ಲಿಅಪಾರ ಕೆಲಸ ಮಾಡಿದವರನ್ನು ಪರಿಗಣಿಸಬೇಕು ಎಂದು ಇದೇ ವೇಳೆ ಮುಖ್ಯಮಂತ್ರಿಗಳು ಪರಿಷತ್ತಿನ ಅಧ್ಯಕ್ಷರಿಗೆ ಸೂಚಿಸಿದರು.

ಈ ಬಾರಿ 87ನೇ ವರ್ಷದ ಸಾಹಿತ್ಯ ಹಬ್ಬ ನಡೆಯುತ್ತಿರುವುದರಿಂದ 87 ಮಂದಿ ಸಾಧಕರಿಗೆ ಸನ್ಮಾನ ಮಾಡಲಾಗುವುದು. ಜತೆಗೆ, ಅರ್ಥಪೂರ್ಣವಾಗಿ ಮೂರು ದಿನಗಳ ಕಾಲ ಕನ್ನಡ ವಿಚಾರ ಗೋಷ್ಠಿ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು. ಸಮ್ಮೇಳನಕ್ಕಾಗಿ 30 ಕೋಟಿ ರೂ.ಗಳ ಅನುದಾನ ಒದಗಿಸಧಿಬೇಧಿಕು ಎಂದು ಕೋರಿ ಸಿಎಂಗೆ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ್‌ ಜೋಶಿ ಮನವಿ ಸಲ್ಲಿಸಿದರು.

ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚಲುವರಾಯ ಸ್ವಾಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್‌ ತಂಗಡಗಿ, ಶಾಸಕ ಪಿ.ಎಂ. ನರೇಂದ್ರಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಎನ್‌. ಮಂಜುಳಾ, ನಿರ್ದೇಶಕಿ ಧರಣಿದೇವಿ ಮಾಲಗತ್ತಿ ಉಪಸ್ಥಿತರಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!