ರಾಜ್ಯ

ಕಾಂಗ್ರೆಸ್ ಪಕ್ಷದಲ್ಲಿ ಸಿಎಂ ಸ್ಥಾನಕ್ಕೆ ಮ್ಯೂಸಿಕಲ್ ಚೇರ್ ಸ್ಪರ್ಧೆ ನಡೆಯುತ್ತಿದೆ: ಆರ್‌. ಅಶೋಕ್‌

ಬೆಂಗಳೂರು: ರಾಜ್ಯಪಾಲರು ವಿಧೇಯಕ ವಾಪಸ್ ಕಳುಹಿಸಿದಾಗ ಅದಕ್ಕೆ ಸ್ಪಷ್ಟೀಕರಣ ಕೊಟ್ಟು ಮನವರಿಕೆ ಮಾಡುವುದು ಸರ್ಕಾರದ ಕರ್ತವ್ಯ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗಾರರೊಂದಿಗೆ ಇಂದು (ಆಗಸ್ಟ್ 24) ಮಾತನಾಡಿದ ಅವರು, ರಾಜ್ಯ ಸರ್ಕಾರ ಮುಜರಾಯಿ ಇಲಾಖೆಗೆ ಸಂಬಂಧಿಸಿದ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ರೂಪಿಸಿದೆ. ಇಂತಹ ವಿಧೇಯಕಗಳ ಸಾಧಕ-ಬಾಧಕಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವ ಅಧಿಕಾರ ರಾಜ್ಯಪಾಲರಿಗೆ ಇದೆ. ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಅಂದಿನ ರಾಜ್ಯಪಾಲರಾಗಿದ್ದ ಹಂಸರಾಜ್ ಭಾರದ್ವಾಜ್ ಹತ್ತಾರು ವಿಧೇಯಕಗಳನ್ನು ವಾಪಸ್ ಕಳುಹಿಸಿದ್ದರು ಎಂದರು.

ರಾಜಭವನ ಎಂದರೆ ಬಿಜೆಪಿ ಕಚೇರಿ ಎನ್ನುವುದು ಹಳಸಿದ ಮಾತು.‌ ವಿಧೇಯಕವನ್ನು ಮರಳಿ ಕಳುಹಿಸಿದರೆ ಅದಕ್ಕೆ ಸರ್ಕಾರ ಸ್ಪಷ್ಟೀಕರಣ ಕೊಟ್ಟು ಗೊಂದಲ ನಿವಾರಿಸಬೇಕು. ರಾಜ್ಯಪಾಲರಿಗೆ ಮನವರಿಕೆ ಮಾಡಿಕೊಡುವುದು ಸರ್ಕಾರದ ಕರ್ತವ್ಯ. ಈ ಕರ್ತವ್ಯ ಮಾಡದೇ ಇದ್ದಲ್ಲಿ ಅದು ಸರ್ಕಾರದ ನಿರ್ಲಕ್ಷ್ಯವೇ ಹೊರತು ರಾಜ್ಯಪಾಲರ ತಪ್ಪಲ್ಲ. ಸರ್ಕಾರ ತಪ್ಪು ಮಾಡಿ ಅದನ್ನು ರಾಜ್ಯಪಾಲರ ಮೇಲೆ ಹೇರುವುದು ಸರಿಯಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯಪಾಲರಿಗೆ ಗೌರವ ನೀಡುವುದನ್ನು ಕಲಿಯಬೇಕು ಎಂದರು.

ಬಿಜೆಪಿ ಎಂದಿಗೂ ಸರ್ಕಾರ ಬೀಳಿಸುವ ಪ್ರಯತ್ನ ಮಾಡಿಲ್ಲ. ಅಂತಹ ಅವಶ್ಯಕತೆ ನಮಗಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಯಾರು ಸಿಎಂ ಆಗಬೇಕೆಂದು ಮ್ಯೂಸಿಕಲ್ ಚೇರ್ ನಂತೆ ಸ್ಪರ್ಧೆ ನಡೆಯುತ್ತಿದೆ. ಡಿ.ಕೆ.ಶಿವಕುಮಾರ್, ಮಲ್ಲಿಕಾರ್ಜುನ ಖರ್ಗೆ, ಡಾ.ಜಿ.ಪರಮೇಶ್ವರ ಹೀಗೆ ಎಲ್ಲರೂ ಮುಖ್ಯಮಂತ್ರಿ ಆಗುತ್ತಾರೆ ಎಂಬ ಮಾತು ಕೇಳಿಬರುತ್ತಿದೆ. ಕಾಂಗ್ರೆಸ್ ಶಾಸಕರಲ್ಲೇ ಈ ವಿಷಯ ಬಹಳ ಚರ್ಚೆಯಾಗುತ್ತಿದೆ ಎಂದರು.

ಲೋಕಸಭೆ ಚುನಾವಣೆಯಲ್ಲಿ ಸೋತ ಕೂಡಲೇ, ಜನರಿಗೆ ನಿಯತ್ತಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ನಿಂದಿಸುತ್ತಿದ್ದಾರೆ. ಸರ್ಕಾರದಲ್ಲಿ ಭ್ರಷ್ಟಾಚಾರ ಹೆಚ್ಚಿದ್ದು, ಅಧಿಕಾರಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆದರೂ ಬೆಂಗಳೂರಿನ ಜನರನ್ನು ಕಾಂಗ್ರೆಸ್ ನಾಯಕರು ಹೀಯಾಳಿಸಿ ಮಾತಾಡುತ್ತಾರೆ. ಬೆಂಗಳೂರಿನ ಜನರ ಬಗ್ಗೆ ಮಾತಾಡುವ ನೈತಿಕತೆ ಅವರಿಗಿಲ್ಲ. ಜನರಿಗೆ ಕುಡಿಯುವ ನೀರು ನೀಡುವುದು ಸರ್ಕಾರದ ಕರ್ತವ್ಯ. ಹೀಗೆ ಮಾತಾಡಿದ್ದಕ್ಕೆ ಕಾಂಗ್ರೆಸ್ ಜನರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದರು.

ರಾಜ್ಯದಲ್ಲಿ ಮೊದಲಿನಿಂದಲೂ ಹಿಂದೂಗಳಿಗೆ ರಕ್ಷಣೆ ಇಲ್ಲ. ಬಾಂಗ್ಲಾದಂತೆ ಹಿಂದೂಗಳ ಮೇಲೆ ದೌರ್ಜನ್ಯ ನಡೆಸುತ್ತೇವೆ ಎಂದು ಕಾಂಗ್ರೆಸ್ ಶಾಸಕ ಐವನ್ ಡಿಸೋಜ ಹೇಳಿದ್ದಾರೆ. ಅದಕ್ಕೆ ಹಿರಿಯ ನಾಯಕರು ಏನೂ ಸ್ಪಷ್ಟನೆ ನೀಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅರಮನೆ ಮೈದಾನದಲ್ಲಿ ನಡೆದ, ಬಿಜೆಪಿ ಸದಸ್ಯತ್ವ ಅಭಿಯಾನದ ರಾಜ್ಯಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದ ಆರ್.ಅಶೋಕ, ಕಾಂಗ್ರೆಸ್ ನಲ್ಲಿ ಕುಟುಂಬದ ಕುಡಿ ಇದ್ದರೆ ಮಾತ್ರ ಇಡೀ ಪಕ್ಷ ಜೀವಂತವಾಗಿರುತ್ತದೆ.‌ ಆದರೆ ಬಿಜೆಪಿ ಕಾರ್ಯಕರ್ತರಿಂದ ನಡೆಯುವ ಪಕ್ಷ. ಇಲ್ಲಿ ಕಾರ್ಯಕರ್ತರೇ ಮುಖ್ಯ. ಸದಸ್ಯತ್ವದ ಅಭಿಯಾನ ಮಾಡಿದರೆ ಒಬ್ಬ ವ್ಯಕ್ತಿಯನ್ನು ಬಿಜೆಪಿಗೆ ಬದ್ಧತೆಯಿಂದ ಸೇರಿಸಿದಂತಾಗುತ್ತದೆ‌ ಎಂದರು.

ಕಾಂಗ್ರೆಸ್ ಸರ್ಕಾರದ ದೋಷಗಳ ವಿರುದ್ಧ ಬಿಜೆಪಿ ನಿರಂತರವಾಗಿ ಹೋರಾಟ ಮಾಡುತ್ತಿದೆ. ಗ್ಯಾರಂಟಿಗಳ ಮೋಸದ ವಿರುದ್ಧ ಹೋರಾಟ, ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಮೊದಲಾದವುಗಳ ಮೂಲಕ ಬಿಜೆಪಿ ಸಮರ್ಥವಾಗಿ ಕೆಲಸ ಮಾಡುತ್ತಿದೆ. 136 ಶಾಸಕರ ಬಲವಿದ್ದರೂ ಸಿಎಂ ಸಿದ್ದರಾಮಯ್ಯ ಸದನದಲ್ಲಿ ಉತ್ತರ ನೀಡದೆ ಪಲಾಯನ ಮಾಡಿದ್ದಾರೆ. ಬಿಜೆಪಿಯ ಹೋರಾಟದ ಫಲವಾಗಿ ಕಾಂಗ್ರೆಸ್ ಸರ್ಕಾರ ಈಗ ನಡುಗುತ್ತಿದೆ. ಈ ಮೂಲಕ ಪಕ್ಷ ಬಲವಾಗಿದೆ ಎಂದರು.

ಬಿಜೆಪಿಯನ್ನು ಸದಸ್ಯತ್ವ ಅಭಿಯಾನದ ಮೂಲಕ ಇನ್ನಷ್ಟು ಬಲಗೊಳಿಸಬೇಕು‌‌. ಹೆಚ್ಚು ಜನರನ್ನು ಪಕ್ಷಕ್ಕೆ ಸೇರಿಸಬೇಕು ಎಂದು ಸಲಹೆ ನೀಡಿದರು.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಶಿವಾಜಿ ಗಣೇಶನ್‌ ಅವರ ವಾರದ ಅಂಕಣ | ಜನಸಂಖ್ಯೆ ಏರುಪೇರು : ಆಂಧ್ರದ ನೀತಿ ಅನುಕರಣೀಯವೇ?

ದೇಶದ ಜನಸಂಖ್ಯೆಯಲ್ಲಾಗುತ್ತಿರುವ ಏರುಪೇರು ರಾಷ್ಟ್ರೀಯ ಜನಸಂಖ್ಯೆ ನಿರ್ವಹಣೆಯ ನೀತಿಯ ದಿಕ್ಕನ್ನೇ ಬದಲಿಸುತ್ತಿದೆ. ಉತ್ತರ ಭಾರತದ ಜನಸಂಖ್ಯೆ ಪ್ರಮಾಣ ಲಂಗು ಲಗಾಮಿಲ್ಲದೆ…

45 mins ago

ಮೆಲೊಡಿ ಖಾವೋ ; ಕುಚ್‌ ಜಾನ್‌ ಜಾವೋ!

ರಾಜಾರಾಂ ತಲ್ಲೂರು ಬೆಳಿಗ್ಗೆ ಎದ್ದ ತಕ್ಷಣ ಹಲ್ಲು ತಿಕ್ಕಿ ಮುಖ ತೊಳೆಯಬೇಕು ಎಂದು ದೇಶದ ಸಂವಿಧಾನದಲ್ಲಿ ಬರೆದಿದೆಯೇನ್ರಿ? . .…

1 hour ago

ಭಾನುವಾರದ ಹಾಡುಪಾಡು | ಈ ಮೋಹ, ಈ ಬಯಕೆ ಮತ್ತು ಇದೆಲ್ಲಾ ಯಾಕೆ ಹೀಗೆ?

ಮೋಹಿತ್‌ ಎಸ್‌ ಗೌಡ ನಾನು ಪ್ರಾಥಮಿಕ ಶಾಲೆಯಲ್ಲಿ ಓದುವಾಗ ಪರೀಕ್ಷೆಯ ಪ್ರಶ್ನೆಪತ್ರಿಕೆಗಳಲ್ಲಿ ‘ಲಿಂಗ ಬದಲಿಸಿ ಬರೆಯಿರಿ’ ಅಥವಾ ‘ವಿರುದ್ಧ ಪದ…

1 hour ago

ಭಾನುವಾರದ ಹಾಡುಪಾಡು | ಒಂದು ಸುಂದರ ಸಂಸಾರ ಮುರಿದುಹೋದ ಕಥೆ

ರೇಣುಕಾ ನಿಡಗುಂದಿ  ಕಾಲೇಜಿನ ದಿನಗಳಲ್ಲಿ ಅವರಿಬ್ಬರೂ ಭೇಟಿಯಾದಾಗಲೇ ಆಕೆ ತಾನು ಬೈ ( Bisexual) ಎಂದು ಹೇಳಿಕೊಂಡಿದ್ದಳು. ಹೊಸತಲೆಮಾರಿನ ಹುಡುಗ…

2 hours ago

ಒಬ್ಬ ಹುಡುಗ ಯಾವ ಕಾರಣಕ್ಕೆ ʼಗೇʼ ಆಗುತ್ತಾನೆ?

ವಸುಧೇಂದ್ರ ಹುಡುಗನೊಬ್ಬನಿಗೆ ಮತ್ತೊಬ್ಬ ಹುಡುಗನ ಮೇಲೆ ಅದು ಹೇಗೆ ಆಕರ್ಷಣೆ ಮೂಡುತ್ತದೆ? ಅದು ಅವನ ಆಯ್ಕೆಯೆ? ಕಲಿತ ದುಶ್ಚಟವೆ? ವಿಷಮ…

2 hours ago

ಮ.ಬೆಟ್ಟ | ಬಾಲಕನ ಮೇಲೆ ದಾಳಿ ಮಾಡಿದ್ದ ಚಿರತೆ ಸೆರೆ

ಹನೂರು : ಶ್ರೀ ಕ್ಷೇತ್ರ ನಾಗಮಲೆಗೆ ತೆರಳುತ್ತಿದ್ದ ಬಾಲಕನ ಮೇಲೆ ದಾಳಿ ಮಾಡಿ ಸಾವಿಗೆ ಕಾರಣವಾಗಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ…

3 hours ago