Mysore
22
clear sky

Social Media

ಶುಕ್ರವಾರ, 20 ಮಾರ್ಚ್ 2026
Light
Dark

ಅಬ್ದುಲ್‌ ರಹ್ಮಾನ್‌ ಕೊಲೆ ಪ್ರಕರಣ : ಮೂವರು ಆರೋಪಿಗಳ ಬಂಧನ

ಮಂಗಳೂರು : ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಕುರಿಯಾಳ ಗ್ರಾಮದ ಈರಾಕೋಡಿ ಎಂಬಲ್ಲಿ ಅಬ್ದುಲ್‌ ರಹ್ಮಾನ್‌ ಅವರನ್ನು ಕೊಲೆ ಮಾಡಿದ ಆರೋಪದಲ್ಲಿ ಮೂವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಬಂಟ್ವಾಳದ ಕುರಿಯಾಳ ಗ್ರಾಮದ ಮುಂಡರಕೋಡಿ ದೀಪಕ್(‌21), ಅಮ್ಮುಂಜೆ ಗ್ರಾಮದ ಪೃಥ್ವಿರಾಜ್‌(21), ಹಾಗೂ ಬಂಟ್ವಾಳದ ನಿವಾಸಿ ಚಿಂತನ್‌(19) ಬಂಧಿತರು ಎಂದು ಗುರುತಿಸಲಾಗಿದೆ.

ಬೈಕಿನಲ್ಲಿ ಬಂದು ಅಬ್ದುಲ್‌ ರೆಹ್ಮಾನ್‌ ಮೇಲೆ ಹಲ್ಲೆ ಮಾಡಿದ ಇನ್ನಿಬರನ್ನು ಪತ್ತೆ ಹಚ್ಚಲು ಕ್ರಮ ಕೈಗೊಂಡಿದ್ದೇವೆ. ಬಂಧಿತ ಮೂವರು ಹತ್ಯೆಯಲ್ಲಿ ನೇರವಾಗಿ ಭಾಗಿಯಾಗಿದ್ದಾರೆ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಎನ್.ಯತೀಶ್‌ ತಿಳಿಸಿದ್ದಾರೆ.

ಆರೋಪಿಗಳ ಪತ್ತೆಗಾಗಿ ಬಂಟ್ವಾಳ ಡಿವೈಎಸ್‌ಪಿ ವಿಜಯ ಪ್ರಸಾದ್‌ ಅವರನ್ನು ತನಿಖಾಧಿಕಾರಿಯನ್ನಾಗಿ ನೇಮಿಸಲಾಗಿತ್ತು. ಅವರ ನೇತೃತ್ವದಲ್ಲಿ ಬಂಟ್ವಾಳ ತಾಲೂಕಿನ ಕಳ್ಳಿಗೆ ಗ್ರಾಮದ ಕನಪಾಡಿ ಎಂಬಲ್ಲಿ ಮೂವರು ಆರೋಪಿಗಳನ್ನು ವಶಕ್ಕೆ ಪಡೆದು ಬಂಧಿಸಲಾಗಿದೆ. ಬಂಧಿತ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ಉಳಿದ ಆರೋಪಿಗಳ ಪತ್ತೆ ಕಾರ್ಯ ಪ್ರಗತಿಯಲ್ಲಿದೆ ಎಂದು ಮಾಹಿತಿ ನೀಡಿದ್ದಾರೆ.

ಮೃತ ಅಬ್ದುಲ್‌ ರೆಹ್ಮಾನ್‌ಗೆ ಕರೆ ಮಾಡಿದ್ದ ದೀಪಕ್‌ ಕಟ್ಟಡ ನಿರ್ಮಾಣಕ್ಕೆ ಒಂದು ಲೋಡ್‌ ಮರಳು ತರುವಂತೆ ಹೇಳಿದ್ದ. ಅದರಂತೆ ಮರಳು ತಂದು ಇಳಿಸುವಾಗ ರೆಹ್ಮಾನ್‌ ಮೇಲೆ ತಲವಾರಿನಿಂದ ಹಲ್ಲೆ ನಡೆದಿತ್ತು. ಬೈಕಿನಲ್ಲಿ ಬಂದ ಇಬ್ಬರು ಹಲ್ಲೆ ನಡೆಸಿ ಪರಾರಿಯಾಗಿದ್ದರು. ಬಂಧಿತ ಮೂವರು ಆರೋಪಿಗಳು ನೇರವಾಗಿ ಕೊಲೆ ಸಂಚಿನಲ್ಲಿ ಭಾಗಿಯಾಗಿದ್ದಾರೆ ಎಂದು ‌ ಎಸ್‌.ಪಿ ಎನ್.ಯತೀಶ್‌ ತಿಳಿಸಿದ್ದಾರೆ.

Tags:
error: Content is protected !!