ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರಿಗೆ ರಾಜ್ಯ ಸರ್ಕಾರ ಗುಡ್ನ್ಯೂಸ್ ನೀಡಿದ್ದು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭರವಸೆ ನೀಡಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಚರ್ಚೆ ನಡೆಸಿದ ಸಚಿವರು, ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ವಿವಿಧ ಸಂಘಟನೆಗಳೊಂದಿಗೆ ಮಾತುಕತೆ ನಡೆಸಿದರು.
ಈ ವೇಳೆ ಮಾತನಾಡಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ ಮುಂದಿನ ಬಜೆಟ್ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನ ಮಾಡಲಾಗುವುದು ಎಂದು ತಿಳಿಸಿದರು.





