ರಾಜ್ಯ

ಬೆಂಗಳೂರು- ವಿಜಯಪುರ ರೈಲು ಪ್ರಯಾಣದ ಅವಧಿಯನ್ನು 14ರಿಂದ 10 ಗಂಟೆಗೆ ಇಳಿಸಲು ಕ್ರಮ: ಎಂ ಬಿ ಪಾಟೀಲ

  • ಇನ್ನೊಂದು ತಿಂಗಳಲ್ಲಿ ಬಾಗಲಕೋಟ- ವಿಜಯಪುರ ನಡುವಿನ‌ ರೈಲ್ವೆ ವಿದ್ಯುದ್ದೀಕರಣ ಪೂರ್ಣ ವಂದೇ ಭಾರತ ರೈಲಿಗೆ ಹೆಚ್ಚಿದ ಬೇಡಿಕೆ.
  • ವೆಚ್ಚ ಹಂಚಿಕೆಯ 9 ರೈಲ್ವೆ ಯೋಜನೆಗಳಿಗೆ ಕಟ್ಟುನಿಟ್ಟಿನ ಕಾಲಮಿತಿ ನಿಗದಿ.

ಬೆಂಗಳೂರು: ರಾಜಧಾನಿಯಿಂದ ವಿಜಯಪುರ ಮತ್ತು ಬಾಗಲಕೋಟೆಗಳಿಗೆ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆಗಳ ಕಾಲ ಹಿಡಿಸುತ್ತಿದ್ದು, ಇದನ್ನು 10 ಗಂಟೆಗಳಿಗೆ ಇಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ರೈಲ್ವೆ ಅಧಿಕಾರಿಗಳಿಗೆ ಮನವರಿಕೆ ಮಾಡಿಕೊಡಲಾಗಿದೆ. ಇದರಿಂದಾಗಿ, ವಾಯವ್ಯ ಕರ್ನಾಟಕದ ಜನರು ಬೆಂಗಳೂರಿಗೆ ಬಂದುಹೋಗಲು ಅನುಕೂಲವಾಗಲಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ.

ರೈಲು ಪ್ರಯಾಣವನ್ನು ಅನುಕೂಲಕರ ಮತ್ತು ಸುಖದಾಯಕವನ್ನಾಗಿ ಮಾಡಲು ಹಾಗೂ ಮಂದಗತಿಯಲ್ಲಿ ಸಾಗುತ್ತಿರುವ ವೆಚ್ಚ ಹಂಚಿಕೆಯ 9 ರೈಲು ಯೋಜನೆಗಳ ಸ್ಥಿತಿಗತಿ ಬಗ್ಗೆ ಚರ್ಚಿಸಲು ಖನಿಜ ಭವನದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಮತ್ತು ನೈರುತ್ಯ ರೈಲ್ವೆ ಅಧಿಕಾರಿಗಳೊಂದಿಗೆ ಅವರು ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ಬೆಂಗಳೂರು- ವಿಜಯಪುರ ನಡುವಿನ 660 ಕಿ.ಮೀ ರೈಲು ಪ್ರಯಾಣಕ್ಕೆ ಈಗ ಸುಮಾರು 14 ಗಂಟೆ ಸಮಯ ಹಿಡಿಸುತ್ತಿದೆ. ಬೆಂಗಳೂರಿನಿಂದ ಹೊರಡುವ ರೈಲುಗಳು ಈಗ ಹುಬ್ಬಳ್ಳಿ ನಿಲ್ದಾಣಕ್ಕೆ ಹೋಗುತ್ತಿದ್ದು, ಅಲ್ಲಿ ಎಂಜಿನ್ ಬದಲಿಸಲು 45 ನಿಮಿಷ ನಿಲ್ಲುತ್ತವೆ. ಬಳಿಕ, ಗದಗದಲ್ಲೂ ಹೀಗೆಯೇ ಸಮಯ ವ್ಯರ್ಥವಾಗುತ್ತಿದೆ. ಆದ್ದರಿಂದ, ರೈಲುಗಳು ಹುಬ್ಬಳ್ಳಿ ರೈಲು ನಿಲ್ದಾಣಕ್ಕೆ ಹೋಗುವ ಬದಲು ಹುಬ್ಬಳ್ಳಿ (ದಕ್ಷಿಣ) ನಿಲ್ದಾಣ ಬೈಪಾಸ್ ಮತ್ತು ಗದಗ ಬೈಪಾಸ್ ಮೂಲಕ ಸಾಗುವ ವ್ಯವಸ್ಥೆ ಮಾಡಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಯೋಜನೆ ರೂಪಿಸಬೇಕು ಎಂದು ಅವರು ಸೂಚಿಸಿದರು.

ಈಗಾಗಲೇ ಬೆಂಗಳೂರು-ಹುಬ್ಬಳ್ಳಿ-ಬಾಗಲಕೋಟೆ ನಡುವೆ ಜೋಡಿ ಹಳಿ ಇದೆ. ಬಾಗಲಕೋಟೆ-ವಿಜಯಪುರ ಮಧ್ಯೆ ಆಲಮಟ್ಟಿಯವರೆಗೂ ದ್ವಿಪಥ ಕಾಮಗಾರಿ ಮುಗಿಯುವ ಹಂತಕ್ಕೆ ಬಂದಿದ್ದು, ಈ ವರ್ಷದ ಸೆಪ್ಟೆಂಬರ್ ಹೊತ್ತಿಗೆ ಮುಗಿಯಲಿದೆ. ಇಲ್ಲಿ ಆಲಮಟ್ಟಿ-ವಂಡಾಳ್ ಮಧ್ಯೆ 9 ಕಿ.ಮೀ. ಮಾತ್ರ ಕಾಮಗಾರಿ ಬಾಕಿ ಉಳಿದಿದ್ದು, ಇಲ್ಲಿ ಸೇತುವೆ ಕಾಮಗಾರಿ ನಡೆಯಬೇಕಿದೆ. ಇದನ್ನು 2025ರ ಆಗಸ್ಟ್ ವೇಳೆಗೆ ಪೂರ್ಣಗೊಳಿಸಲಾಗುವುದು. ಜೊತೆಗೆ, ಇನ್ನು ಎರಡು ತಿಂಗಳಲ್ಲಿ ಈ ಮಾರ್ಗದಲ್ಲಿ ಬಾಕಿ ಇರುವ ವಿದ್ಯುದೀಕರಣ ಕೂಡ ಮುಗಿಯಲಿದೆ ಎಂದು ಅವರು ವಿವರಿಸಿದರು.

ಈ ಕ್ರಮಗಳ ಜೊತೆಗೆ ಬೆಂಗಳೂರಿನಿಂದ ವಿಜಯಪುರ, ಬಾಗಲಕೋಟೆಗಳಿಗೆ ವಿಶೇಷ ರೈಲುಗಳನ್ನು ಓಡಿಸಬೇಕಾದ ಅಗತ್ಯವಿದೆ. ಮಿಗಿಲಾಗಿ, ವಿದ್ಯುದೀಕರಣ ಕಾಮಗಾರಿ ಮುಗಿದರೆ ವಿಜಯಪುರ, ಬಾಗಲಕೋಟೆಗಳಿಗೆ `ವಂದೇ ಭಾರತ್’ ಎಕ್ಸಪ್ರೆಸ್ ರೈಲು ಸೇವೆ ಆರಂಭಿಸುವಂತೆ ರೈಲ್ವೆ ಮಂಡಳಿಯನ್ನು ಕೋರಲಾಗುವುದು ಎಂದು ಪಾಟೀಲ ತಿಳಿಸಿದರು.

ವೆಚ್ಚ ಹಂಚಿಕೆ ಯೋಜನೆಗಳಿಗೆ ಗಡುವು
ರಾಜ್ಯದಲ್ಲಿ ರೈಲ್ವೆಯೊಂದಿಗೆ ವೆಚ್ಚ ಹಂಚಿಕೆ ಆಧಾರದ ಮೇಲೆ 9 ರೈಲ್ವೆ ಯೋಜನೆಗಳು ಪ್ರಗತಿಯಲ್ಲಿವೆ. ಆದರೆ, ಇವು ಕಾಲಮಿತಿಯಲ್ಲಿ ಪೂರ್ಣಗೊಳ್ಳದೆ ಇರುವುದರಿಂದ ವೆಚ್ಚ ಮಿತಿ ಮೀರುತ್ತಿದೆ. ಆದ್ದರಿಂದ ಇವುಗಳ ವೆಚ್ಚ ಹೆಚ್ಚಾಗದಂತೆ ನೋಡಿಕೊಂಡು, ತ್ವರಿತ ಗತಿಯಲ್ಲಿ ಮುಗಿಸಬೇಕು ಎಂದು ಸಚಿವರು ಅಧಿಕಾರಿಗಳಿಗೆ ಹೇಳಿದರು.

ಈ ಪೈಕಿ ಮುನಿರಾಬಾದ್- ಮೆಹಬೂಬ್ ನಗರ ಯೋಜನೆಯನ್ನು 2026ರ ಮಾರ್ಚ್ ವೇಳೆಗೆ, ತುಮಕೂರು- ರಾಯದುರ್ಗ ಯೋಜನೆಯನ್ನು 2027ರ ಡಿಸೆಂಬರ್ ಹೊತ್ತಿಗೆ, ಚಿಕ್ಕಮಗಳೂರು-ಬೇಲೂರು ಯೋಜನೆಯನ್ನು 2026ರ ಹೊತ್ತಿಗೆ, ಬಾಗಲಕೋಟೆ-ಕುಡಚಿ ಯೋಜನೆಯನ್ನು 2027ರ ವೇಳೆಗೆ ಮುಗಿಸಬೇಕು.

ತುಮಕೂರು- ದಾವಣಗೆರೆ ಯೋಜನೆಗೆ ಸಂಬಂಧಿಸಿದಂತೆ ಭೂಸ್ವಾಧೀನ ಪ್ರಕ್ರಿಯೆ ಮುಗಿದಿದೆ. ಇದರಲ್ಲಿ ರಾಜ್ಯವು ಒಂದು ಪಥದ ಅಭಿವೃದ್ಧಿಗೆ ಮಾತ್ರ ವೆಚ್ಚ ಭರಿಸುತ್ತಿದೆ. ಆದರೆ, ರೈಲ್ವೆ ಇಲಾಖೆಯು ಈಗಾಗಲೇ ಜೋಡಿ ಹಳಿ ಹಾಕಲು ತೀರ್ಮಾನಿಸಿರುವುದು ಒಳ್ಳೆಯ ಬೆಳವಣಿಗೆ. ಇದನ್ನು 2027ಕ್ಕೆ ಮುಗಿಸಬೇಕು.

ಇದರಿಂದ ಬಾಗಲಕೋಟೆ ಮತ್ತು ವಿಜಯಪುರಗಳ ನಡುವಿನ ನೇರ ಸಂಚಾರಕ್ಕೆ ಅನುಕೂಲವಾಗಲಿದೆ ಎಂದು ಅವರು ಸೂಚಿಸಿದರು.

ಗದಗ-ವಾಡಿ ಮಾರ್ಗದಲ್ಲಿ ಬರುವ ಹಳಕಟ್ಟೆ ಎಂಬಲ್ಲಿ ಭೂಸ್ವಾಧೀನದ ಸಮಸ್ಯೆ ಎದುರಾಗಿದೆ. ಆರ್ ಟಿಸಿಯಲ್ಲಿ ಒಬ್ಬರ ಹೆಸರು ಇದ್ದರೆ, ವಾಸ್ತವದಲ್ಲಿ ಆ ಜಾಗದಲ್ಲಿ ಬೇರೆಯವರಾರೋ ಇರುವುದು ಗಮನಕ್ಕೆ ಬಂದಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ಮಾತನಾಡಿದ್ದು, ಇದನ್ನು ಶೀಘ್ರವೇ ಬಗೆಹರಿಸುವಂತೆ ಸೂಚಿಸಲಾಗಿದೆ ಎಂದು ಅವರು ನುಡಿದರು.

ಸಭೆಯಲ್ಲಿ ಮೂಲಸೌಕರ್ಯ ಅಭಿವೃದ್ಧಿ ಇಲಾಖೆ ಕಾರ್ಯದರ್ಶಿ ಡಾ.ಎನ್ ಮಂಜುಳಾ, ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಸತೀಶ, ನೈರುತ್ಯ ರೈಲ್ವೆಯ ಮುಖ್ಯ ಆಡಳಿತಾಧಿಕಾರಿ, ರಾಮಗೋಪಾಲ್, ರೈಲ್ವೆಯ ಯೋಜನಾ ವಿಭಾಗದ ಮುಖ್ಯ ಎಂಜಿನಿಯರ್ ಮೂರ್ತಿ ರಾಜು, ಕೈಗಾರಿಕಾ ಸಚಿವರ ತಾಂತ್ರಿಕ ಸಲಹೆಗಾರ ಅರವಿಂದ ಗಲಗಲಿ ಉಪಸ್ಥಿತರಿದ್ದರು

andolanait

Recent Posts

ಗ್ರಾಹಕರಿಕೆ ಶಾಕ್‌ : ಪೆಟ್ರೋಲ್‌, ಡಿಸೇಲ್‌ ಬೆಲೆ ಮತ್ತೆ ಏರಿಕೆ

ನವದೆಹಲಿ : ದೇಶದಲ್ಲಿ ಮತ್ತೆ ಇಂಧನ ದರ ಏರಿಕೆಯ ಹೊರೆ ಜನರ ಮೇಲೆ ಬಿದ್ದಿದೆ. ಸೋಮವಾರ ಪೆಟ್ರೋಲ್ ದರವನ್ನು ಲೀಟರ್‍ಗೆ…

1 hour ago

ಬಿಜೆಪಿ ಸರ್ಕಾರ ಮಾಡಿದ ಡೀಮ್ಡ್ ಅರಣ್ಯ ತಪ್ಪು ಸರಿಪಡಿಸಲು ಯತ್ನ:ಈಶ್ವರ ಖಂಡ್ರೆ

ಸುಪ್ರೀಂಕೋರ್ಟ್ ಗೆ ಮನವಿ ಸಲ್ಲಿಸಲು ಸಮಿತಿ ರಚನೆ: ಈಶ್ವರ ಖಂಡ್ರೆ ಕಾರ್ಕಳ : ಪರಿಭಾವಿತ (ಡೀಮ್ಡ್) ಅರಣ್ಯ ಪ್ರದೇಶದಲ್ಲಿ ಸರ್ಕಾರಿ…

2 hours ago

ಪಶ್ಚಿಮ ಬಂಗಾಳ : ಒಬಿಸಿ ಪಟ್ಟಿ ಮರುಸಂರಚನೆ

ಆರ್‌ಎಸ್‌ಎಸ್‌ ಕಾರ್ಯಸೂಚಿಗಳು ಜಾರಿ ಬಿ.ಶ್ರೀಪಾದ ಭಟ್‌ 2026ರ ಮೇ ತಿಂಗಳಲ್ಲಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು…

3 hours ago

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ | ಆಳುವ ಸರ್ಕಾರ ಎಚ್ಚರ ತಪ್ಪಿದರೆ ಪ್ರತಿರೋಧ ಖಚಿತ

ಆರ್ಥಿಕ ಸಂಕಷ್ಟದ ಸಮಯದಲ್ಲಿ ಜಾಗ್ರತೆಯಿಂದ ಕಾರ್ಯನಿರ್ವಹಣೆ ಅಗತ್ಯ ಇದು ಇಪ್ಪತ್ತೈದು ವರ್ಷಗಳ ಹಿಂದೆ ನಡೆದ ಘಟನೆ. ಅವತ್ತು ಮುಖ್ಯಮಂತ್ರಿಯಾಗಿದ್ದ ಎಸ್.…

3 hours ago

ಆಂದೋಲನ ಸಂಪಾದಕೀಯ | ಇಂಧನ ದರ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ಮುಂದಾಗಲಿ

ಕೇವಲ ಹತ್ತು ದಿನಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಮೂರು ಬಾರಿ ಹೆಚ್ಚಳವಾಗಿದೆ. ಇದು ಪಶ್ಚಿಮ ಬಂಗಾಳ, ಅಸ್ಸಾಂ, ತಮಿಳುನಾಡು, ಕೇರಳ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.25 ಸೋಮವಾರ

6 hours ago