ರಾಜ್ಯ

ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಾದ ಚಲುವರಾಯಸ್ವಾಮಿ ಚಾಲನೆ

ಚಾಮರಾಜನಗರ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕೃಷಿ ಇಲಾಖೆ ವತಿಯಿಂದ ಹನೂರು ತಾಲೂಕಿನ ಚಿಂಚಳ್ಳಿ ಗ್ರಾಮದಲ್ಲಿ ಆಯೋಜಿಸಲಾಗಿದ್ದ ಬಿತ್ತನೆ ಅಭಿಯಾನಕ್ಕೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಗುರುವಾರ ಚಾಲನೆ ನೀಡಿದರು.

ಪ್ರಗತಿಪರ ರೈತರಾದ ದಯಾನಂದ್ ಅವರ ಚಿಂಚಳ್ಳಿ ಗ್ರಾಮದ ಜಮೀನಿನಲ್ಲಿ ರಾಗಿ ಬಿತ್ತನೆ ಮಾಡುವ ಮೂಲಕ ಪಶುಸಂಗೋಪನೆ, ರೇಷ್ಮೆ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರೊಂದಿಗೆ ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ಅವರು ಬಿತ್ತನೆ ಅಭಿಯಾನಕ್ಕೆ ಚಾಲನೆ ಕೊಟ್ಟರು. ಇದೇ ವೇಳೆ ಡ್ರೋನ್ ಮೂಲಕ ಬೆಳೆಗೆಳಿಗೆ ಔಷಧಿ ಸಿಂಪಡಣೆ ಕಾರ್ಯವನ್ನು ಸಚಿವರು ನೆರವೇರಿಸಿದರು.

ಬಳಿಕ ಜಮೀನಿನ ಆವರಣದೊಳಗೆ ಕೃಷಿ ಇಲಾಖೆ ವತಿಯಿಂದ ಫಲಾನುಭವಿಗಳಿಗೆ ಪವರ್ ಟಿಲ್ಲರ್, ರೋಟೊವೇಟರ್, ಜಾಫ್ ಕಟರ್, ಪವರ್ ವೀಡರ್, ಎಣ್ಣೆ ಗಾಣ, ಇನ್ನಿತರ ಕೃಷಿ ಸಂಬಂಧಿ ಯಂತ್ರೋಪಕರಣಗಳನ್ನು ಸಚಿವರಾದ ಎನ್ ಚಲುವರಾಯಸ್ವಾಮಿ ಹಾಗೂ ವೆಂಕಟೇಶ್, ಶಾಸಕರಾದ ಎಂ.ಆರ್. ಮಂಜುನಾಥ್ ವಿತರಿಸಿದರು.

ತದನಂತರ ವೇದಿಕೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಸಚಿವರಾದ ಚಲುವರಾಯಸ್ವಾಮಿ ಅವರು ಸಮಗ್ರ ಕೃಷಿಯಿಂದ ಹೆಚ್ಚಿನ ಆದಾಯ ಬರಲಿದೆ. ಒಂದು ಎಕರೆ ಜಮೀನಿನಲ್ಲಿ ತರಕಾರಿ, ಕೃಷಿಹೊಂಡ, ಮೀನು, ಕುರಿ, ಕೋಳಿ ಸಾಕಾಣೆಯಂತಹ ಈ ಎಲ್ಲಾ ಚಟುವಟಿಕೆಗಳನ್ನು ಅಳವಡಿಸಿಕೊಂಡರೆ ಕನಿಷ್ಠ ೧೦ ಲಕ್ಷ ರೂ. ಆದಾಯ ಪಡೆಯಬಹುದಾಗಿದೆ. ಇಂತಹ ಸಮಗ್ರ ಕೃಷಿಯಿಂದ ಹಲವರು ಆರ್ಥಿಕವಾಗಿ ಸದೃಢರಾಗಿರುವ ನಿದರ್ಶನಗಳಿವೆ ಎಂದರು.

ರಾಸಾಯನಿಕ ಗೊಬ್ಬರಗಳಿಂದ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತಿರುವುದರಿಂದ ಇದರ ಅವಲಂಬನೆ ಕಡಿಮೆಯಾಗಬೇಕಿದೆ. ಸಾವಯವ ನೈಸರ್ಗಿಕ ಕೃಷಿ ಪದ್ದತಿಗೆ ಹೆಚ್ಚಿನ ಒಲವು ತೋರಬೇಕು. ಸರ್ಕಾರವು ಇದರ ಉತ್ತೇಜನಕ್ಕೆ ಮುಂದಾಗಿದೆ. ನೀರು ವ್ಯರ್ಥ ಮಾಡದೇ ಅಗತ್ಯ ಪ್ರಮಾಣದಲ್ಲಿ ಬಳಸಿದಾಗ ಭೂಮಿಯ ಫಲವತ್ತತೆಯು ಹೆಚ್ಚಾಗಲಿದೆ. ಸೂಕ್ಷ್ಮ ನೀರಾವರಿ ಅಳವಡಿಕೆಗೆ ಹೆಚ್ಚಿನ ಸಹಾಯಧನ ನೀಡಲಾಗುತ್ತಿದೆ ಕೃಷಿ ಸಚಿವರು ತಿಳಿಸಿದರು.

ಹವಾಮಾನ ವೈಪರಿತ್ಯ ಇನ್ನಿತರ ಸಂದರ್ಭಗಳಲ್ಲಿ ಬೆಳೆ ನಷ್ಟವಾದರೆ ರೈತರಿಗೆ ನೆರವಾಗಲು ವಿಮೆ ಸೌಲಭ್ಯವಿದೆ. ರೈತರು ವಿಮೆ ಮಾಡಿಸಬೇಕು. ಇದರಿಂದ ಸಂಕಷ್ಟದಲ್ಲಿ ಪರಿಹಾರ ಸಿಗಲಿದೆ. ನಾನಾ ಬೆಳೆಗಳಿಗೆ ವಿಮಾ ಕಂತು ಪಾವತಿಸಿ ಬೆಳೆಹಾನಿ ಸಂದರ್ಭದಲ್ಲಿ ನೆರವು ಪಡೆಯಬಹುದಾಗಿದೆ. ಇಂತಹ ಸೌಲಭ್ಯಗಳನ್ನು ಸದುಪಯೋಗ ಮಾಡಿಕೊಳ್ಳಬೇಕು ಎಂದರು.

ಕೃಷಿ ಇಲಾಖೆ ವತಿಯಿಂದ ಕೃಷಿ ಭಾಗ್ಯ ಯೋಜನೆಯನ್ನು ರಾಜ್ಯದ 224 ತಾಲೂಕುಗಳಿಗೂ ವಿಸ್ತರಿಸಲಾಗಿದೆ. ಕೃಷಿ ಪದ್ದತಿಯಲ್ಲಿ ಬದಲಾವಣೆಗಳನ್ನು ಮಾಡಿಕೊಳ್ಳಬೇಕಿದೆ. ಕೃಷಿ ಇಲಾಖೆ, ಕೃಷಿ ವಿಶ್ವವಿದ್ಯಾಲಯ ನೀಡುವ ಸಲಹೆ, ಮಾರ್ಗದರ್ಶನಗಳನ್ನು ಅನುಸರಿಸಬೇಕಿದೆ. ಸರ್ಕಾರ ಗ್ಯಾರಂಟಿ ಯೋಜನೆಗಳ ಜೊತೆ ಕೃಷಿ ಯಂತ್ರೋಪಕರಣಗಳ ವಿತರಣೆ, ಸಹಾಯಧನ, ಇನ್ನಿತರ ಕೃಷಿ ಪೂರಕ ಚಟುವಟಿಕೆಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದು ಕೃಷಿ ಸಚಿವರಾದ ಎನ್. ಚಲುವರಾಯಸ್ವಾಮಿ ತಿಳಿಸಿದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ಮಾತನಾಡಿ ವ್ಯವಸಾಯ ಕಷ್ಟದ ಕೆಲಸ. ಆದರೆ ಶ್ರದ್ದೆ ಆಸಕ್ತಿಯಿಂದ ಶ್ರಮವಹಿಸಿ ಮಾಡಿದರೆ ನಿರೀಕ್ಷಿತ ಲಾಭ ತಂದುಕೊಡುತ್ತದೆ. ಸರ್ಕಾರ ರೈತರಿಗೆ ಅನುಕೂಲ ಮಾಡಿಕೊಡುವ ದಿಸೆಯಲ್ಲಿ ಜಾರಿಗೆ ತಂದಿರುವ ಯೋಜನೆಗಳನ್ನು ಸದುಪಯೋಗ ಮಾಡಿಕೊಳ್ಳುವ ಮೂಲಕ ಹೆಚ್ಚಿನ ಆದಾಯ ಪಡೆಯಬಹುದಾಗಿದೆ ಎಂದರು.

ಕೃಷಿ ಕ್ಷೇತ್ರದಲ್ಲಿ ಹೊಸ ತಂತ್ರಜ್ಞಾನ ಪರಿಚಯವಾಗುತ್ತಲೇ ಇವೆ. ಇದನ್ನು ಒಪ್ಪಿಕೊಂಡು ಅಳವಡಿಸಿಕೊಳ್ಳಬೇಕಿದೆ. ಆಧುನಿಕ ಕೃಷಿ ಪದ್ದತಿಗೆ ಹೊಂದಿಕೊಳ್ಳಬೇಕು. ಯಂತ್ರೋಪಕರಣಗಳ ಬಳಕೆಯಿಂದ ಕೂಲಿ ವೆಚ್ಚವು ಉಳಿತಾಯವಾಗಲಿದೆ. ಹೀಗಾಗಿ ನೂತನ ಆವಿಷ್ಕಾರದತ್ತ ಹೆಚ್ಚಿನ ಗಮನ ಹರಿಸಬೇಕಿದೆ. ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಸಲಾಗಿದ್ದು, ಹಲವಾರು ಅಭಿವೃದ್ದಿ ಯೋಜನೆಗಳಿಗೆ ಮಂಜೂರಾತಿ ಸಿಕ್ಕಿದೆ. ಆದಷ್ಟು ಶೀಘ್ರದಲ್ಲೇ ಈ ಎಲ್ಲಾ ಕಾಮಗಾರಿ ಆರಂಭವಾಗಲಿದೆ ಎಂದು ಉಸ್ತುವಾರಿ ಸಚಿವರಾದ ಕೆ. ವೆಂಕಟೇಶ್ ಅವರು ತಿಳಿಸಿದರು.

ಶಾಸಕರಾದ ಎಂ.ಆರ್. ಮಂಜುನಾಥ್ ಅವರು ಮಾತನಾಡಿ ಹನೂರು ಭಾಗದಲ್ಲಿ ಕೃಷಿಯನ್ನೇ ಅವಲಂಬಿಸಿ ಜೀವನ ಮಾಡುತ್ತಿರುವವರ ಸಂಖ್ಯೆ ಹೆಚ್ಚಿದೆ. ತಾಲೂಕಿನಲ್ಲಿ ಹೈನುಗಾರಿಕೆ ಚಟುವಟಿಕೆಗಳು ಪ್ರಗತಿಯಾಗಿದ್ದು ಅಧಿಕ ಹಾಲು ಉತ್ಪಾದನೆಯಾಗುತ್ತಿದೆ. ತೊಟಗಾರಿಕೆ, ಕೃಷಿ ಬೆಳೆಗಳನ್ನು ಬೆಳೆಯಲಾಗುತ್ತಿದೆ. ಬಾಳೆ, ಅರಿಶಿಣ, ಈರುಳ್ಳಿ, ಇನ್ನಿತರ ಬೆಳೆಗಳನ್ನು ಹೆಚ್ಚಾಗಿ ಬೆಳೆಯಲಾಗುತ್ತಿದ್ದು, ರೈತರಿಗೆ ವಿದ್ಯುತ್, ನೀರು ಮತ್ತಷ್ಟು ಸಮರ್ಪಕವಾಗಿ ನೀಡುವ ಮೂಲಕ ಉತ್ತೇಜನ ನೀಡಬೇಕು ಎಂದರು.

ಇದೇ ವೇಳೆ ಪ್ರಗತಿಪರ ರೈತರಾದ ದಯಾನಂದ ಅವರು ತಾವು ನಡೆಸುತ್ತಿರುವ ವಿವಿಧ ಕೃಷಿ, ತೋಟಗಾರಿಕೆ ಬೆಳೆ ಕುರಿತು ವಿವರ ಹಂಚಿಕೊಂಡರು.

ಕಾಡಾ ಅಧ್ಯಕ್ಷರಾದ ಪಿ. ಮರಿಸ್ವಾಮಿ, ಮಾಜಿ ಶಾಸಕರಾದ ಆರ್. ನರೇಂದ್ರ, ಕೃಷಿಕ ಸಮಾಜದ ಅಧ್ಯಕ್ಷರಾದ ರಾಘವೇಂದ್ರ ನಾಯ್ಡು, ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸೋಮಶೇಖರ್, ಜಿಲ್ಲಾಧಿಕಾರಿ ಶಿಲ್ಪಾ ನಾಗ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಮೋನಾ ರೋತ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಬಿ.ಟಿ. ಕವಿತಾ, ಜಂಟಿ ಕೃಷಿ ನಿರ್ದೇಶಕರಾದ ಎಸ್.ಎಸ್. ಆಬೀದ್, ಉಪ ಕೃಷಿ ನಿರ್ದೇಶಕರಾದ ಕೆ.ಸಿ. ಸುಷ್ಮಾ, ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ವಿಷ ಕುಡಿದು ವ್ಯಕ್ತಿ ಆತ್ಮಹತ್ಯೆ: ಗರಿಕೆ ಖಂಡಿ ಅರಣ್ಯದಲ್ಲಿ ಶವ ಪತ್ತೆ

ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…

5 hours ago

ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಭೇಟಿಯಾದ ಮಾಜಿ ಸಿಎಂ ಸಿದ್ದರಾಮಯ್ಯ

ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…

6 hours ago

ಶ್ರಾವಣ ಮಾಸದ ಕೊನೆಯ ದಿನದ 108 ಕುಂಭಾಭಿಷೇಕ: ಮಲೆ ಮಹದೇಶ್ವರ ಕ್ಷೇತ್ರದಲ್ಲಿ ಭಕ್ತಿ ವೈಭವ

ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…

7 hours ago

ಹನೂರು| ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ: ಮೂವರು ಯುವಕರು ದುರ್ಮರಣ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…

7 hours ago

ಓದುಗರ ಪತ್ರ: ದಸರಾ ಚಿತ್ರೋತ್ಸವ ಮುಂದುವರಿಯಲಿ

ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…

12 hours ago

ಓದುಗರ ಪತ್ರ: ಫಿಲಂ ಸಿಟಿ ಯೋಜನೆ ಆದಷ್ಟು ಬೇಗ ಕಾರ್ಯರೂಪಕ್ಕೆ ಬರಲಿ

ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…

12 hours ago