ಬೆಂಗಳೂರು: ರಾಯಚೂರಿಗೆ ಏಮ್ಸ್ಗಾಗಿ 1000 ದಿನಗಳ ಹೋರಾಟ ಮಾಡಲಾಗುವುದು ಎಂದು ಸಚಿವ ಭೋಸರಾಜು ಹೇಳಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ತಕ್ಷಣ ರಾಯಚೂರಿಗೆ ಏಮ್ಸ್ ಮಂಜೂರು ಮಾಡಬೇಕು. ಇಲ್ಲದಿದ್ದಲ್ಲಿ ಈ ಅನ್ಯಾಯದ ವಿರುದ್ಧ ಕರ್ನಾಟಕದ ಜನತೆ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ನಡೆಸಲಿದೆ ಎಂದರು.
ಕಲ್ಯಾಣ ಕರ್ನಾಟಕದ ಹಿಂದುಳಿದ ಜಿಲ್ಲೆಗಳಲ್ಲಿ ರಾಯಚೂರು ಪ್ರಮುಖವಾಗಿದೆ. ಈ ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ರಾಷ್ಟ್ರಮಟ್ಟದ ಆರೋಗ್ಯ ಹಾಗೂ ಶೈಕ್ಷಣಿಕ ಸಂಸ್ಥೆಯನ್ನು ರಾಯಚೂರಿನಲ್ಲಿ ಸ್ಥಾಪಿಸಬೇಕು. ಆ ಮೂಲಕ ಆ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು ಎಂದು ಆಗ್ರಹಿಸಿದರು.
ಇನ್ನು ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಮಾಡುವಂತೆ ಹಲವಾರು ಬಾರಿ ಸಿಎಂ ಸಿದ್ದರಾಮಯ್ಯ ಸೇರಿದಂತೆ ಸಚಿವರು ಮಾಡಿರುವ ಮನವಿಗೆ ಕೇಂದ್ರ ಸರ್ಕಾರ ಇಲ್ಲಿಯವರೆಗೂ ಸ್ಪಂದಿಸಿಲ್ಲ.
ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆ ಆಗಲೇಬೇಕು. ಈ ಮೂಲಲ ಈ ಭಾಗದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಸಹಕಾರ ನೀಡಬೇಕು ಎನ್ನುವುದು ಈ ಭಾಗದ ಜನರ ಬಹುದಿನಗಳ ಬೇಡಿಕೆಯಾಗಿದೆ. ಈ ನಿಟ್ಟಿನಲ್ಲಿ ಆರಂಭವಾದ ಅನಿರ್ದಿಷ್ಟಾವಧಿ ಹೋರಾಟ ಇಂದು 1000 ದಿನಗಳಿಗೆ ಕಾಲಿಟ್ಟಿದೆ ಎಂದು ಮಾಹಿತಿ ನೀಡಿದರು.