Mysore
33
scattered clouds

Social Media

ಭಾನುವಾರ, 12 ಏಪ್ರಿಲ 2026
Light
Dark

ಜನವರಿ ಅಂತ್ಯದೊಳಗೆ ಮೈತ್ರಿ ಸೀಟು ಹಂಚಿಕೆ ಫೈನಲ್‌ : ಹೆಚ್‌ಡಿಕೆ

ನವದೆಹಲಿ : ಜನವರಿ ಅಂತ್ಯದೊಳಗೆ ಲೋಕಸಭಾ ಚುನಾವಣೆಗೆ ಜೆಡಿಎಸ್-ಬಿಜೆಪಿ ನಡುವೆ ಸೀಟು ಹಂಚಿಕೆ ಫೈನಲ್ ಆಗಲಿದೆ. ಆ ಬಗ್ಗೆ ಮಾತುಕತೆ ನಡೆಯಲಿದೆ ಎಂಬುದಾಗಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿಳಿಸಿದ್ದಾರೆ.

ಗುರುವಾರದಂದು ಪ್ರಧಾನಿ ನರೇಂದ್ರ ಮೋದಿ ಹಾಗೂ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಭೇಟಿ ಸಂಸತ್‌ ಭವನದ ಪ್ರಧಾನಿಗಳ ಕಾರ್ಯಾಲಯದಲ್ಲಿ ನಡೆಯಿತು.

ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ತಿಳಿಸಿರುವಂತೆ; ರಾಜ್ಯ ರಾಜಕೀಯ ಪರಿಸ್ಥಿತಿಯ ಜತೆಗೆ ಕೊಬರಿ ಖರೀದಿ, ಕಾಡುಗೊಲ್ಲ ಜಾತಿಗೆ ಮೀಸಲಾತಿ ಸೌಲಭ್ಯ‌ ಹಾಗೂ ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆ ಮಾಜಿ ಪ್ರಧಾನಿಗಳು ಮೋದಿ ಅವರ ಜತೆ ಚರ್ಚೆ ನಡೆಸಿದರು.

ಈ ವೇಳೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದಂತ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಜೆಡಿಎಸ್‌ ಮತ್ತು ಬಿಜೆಪಿ ನಡುವೆ ಕ್ಷೇತ್ರ ಹಂಚಿಕೆ ವಿಚಾರದಲ್ಲಿ ಯಾವುದೇ ಸಮಸ್ಯೆ, ಗೊಂದಲ ಇಲ್ಲ.

ಯಾವ ಯಾವ ಕ್ಷೇತ್ರದಲ್ಲಿ ಯಾರು ಯಾರು ಸ್ಪರ್ಧೆ ಮಾಡುತ್ತಾರೆ ಎನ್ನುವುದನ್ನು ನಾವೇ ಪರಸ್ಪರ ಕೂತು ಅಂತಿಮಗೊಳಿಸುತ್ತೇವೆ. ಆ ಬಗ್ಗೆ ಯಾವುದೇ ಸಮಸ್ಯೆ ಇಲ್ಲ.

ಒಂದು ಕ್ಷೇತ್ರ ಹೆಚ್ಚೂ ಕಡಿಮೆ ಆಗಬಹುದು ಅಷ್ಟೇ. ಅದರಲ್ಲಿ ಯಾವುದೇ ಸಮಸ್ಯೆ ಆಗುವುದಿಲ್ಲ. ಮುಖ್ಯವಾಗಿ ಪರಸ್ಪರ ವಿಶ್ವಾಸ ಬೇಕು ಅಷ್ಟೇ, ಅದನ್ನು ನಾವು ಉಳಿಸಿಕೊಳ್ಳಬೇಕು. ಅದಕ್ಕೆ ಏನೆಲ್ಲಾ ಮಾಡಬೇಕೋ ಅದನ್ನು ಮಾಡುತ್ತೇನೆ. ಜನವರಿ ಅಂತ್ಯದ ಒಳಗೆ ನಾವು ಎಲ್ಲಾ ನಿರ್ಧಾರ ಮಾಡುತ್ತೇವೆ ಎಂದರು.

ನೀವು ಎಷ್ಟು ಕ್ಷೇತ್ರ ಕೇಳುತ್ತಿದ್ದೀರಿ? ಎನ್ನುವ ಪ್ರಶ್ನೆಗೂ ಉತ್ತರ ಕೊಟ್ಟ ಕುಮಾರಸ್ವಾಮಿ ಅವರು; ನಾವು ಎಷ್ಟು ಗೆಲ್ಲುತ್ತೇವೆ ಎನ್ನುವ ಕಡೆಯಷ್ಟೇ ನಾವು ಕೇಳುತ್ತೇವೆ. ನಾವು ಎಲ್ಲೆಲ್ಲಿ ಗೆಲ್ಲುತ್ತೇವೆ ಅಂತ ನಮ್ಮ ಬಳಿ ರಿಪೋರ್ಟ್ ಇದೆ. ಆ ರಿಪೋರ್ಟ್ ಪ್ರಕಾರ ನಾವು ಕೆಲಸ ಮಾಡುತ್ತೇವೆ.

ಇಲ್ಲಿ ಸೀಟ್ ಹಂಚಿಕೆ ಒಂದೇ ಪ್ರಮುಖ ಅಲ್ಲಾ. ನಾವು ಪರಸ್ಪರ ವಿಶ್ವಾಸ, ನಂಬಿಕೆಯಿಂದ ಕೆಲಸ ಮಾಡುತ್ತೇವೆ. ಮೂರನೇ ಅವಧಿಗೆ ನರೇಂದ್ರ ಮೋದಿ ಅವರು ಪ್ರಧಾನಿಯಾಗಲು ನಾವೆಲ್ಲಾ ಒಟ್ಟಾಗಿ ಕೆಲಸ ಮಾಡುತ್ತೇವೆ ಎಂದರು.

 

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!