Mysore
25
light rain

Social Media

ಶುಕ್ರವಾರ, 14 ಆಗಸ್ಟ್ 2026
Light
Dark

ಬಜೆಟ್‌ನಲ್ಲಿ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ: ಈಶ್ವರ ಖಂಡ್ರೆ

ಬೆಂಗಳೂರು: ಭಾನುವಾರ ಮಂಡಿಸಲಾದ ಕೇಂದ್ರ ಬಜೆಟ್ ದೇಶದ ಆರ್ಥಿಕತೆಗೆ ರಜೆ ನೀಡುವಂತಿದೆ. ಸಂಪೂರ್ಣ ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ.

ನಿರ್ಮಲಾ ಸೀತಾರಾಮನ್ ಮಂಡಿಸಿದ 9ನೇ ಬಜೆಟ್‌ನಲ್ಲಿ ಯಾವುದೇ ಗಣನೀಯ ಸುಧಾರಣೆ ಆಗಿಲ್ಲ. ಸರ್ಕಾರಿ ವೆಚ್ಚಗಳ ಮೇಲೆ ಯಾವುದೇ ನಿಯಂತ್ರಣವೂ ಇಲ್ಲ. ಕರ್ನಾಟಕಕ್ಕಂತೂ ಹೇಳಿಕೊಳ್ಳುವಂತಹ ಪ್ರಯೋಜನ ಈ ಬಜೆಟ್ ನಲ್ಲಿ ಆಗಿಲ್ಲ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

ಹೈದ್ರಾಬಾದ್ – ಬೆಂಗಳೂರು ಹೈಸ್ಪೀಡ್ ರೈಲು ಸಮಾಧಾನಕರ ಬಹುಮಾನದಂತಿದೆ. ರೈತರು ಬೆಳೆಯುವ ಎಲ್ಲ ಬೆಳೆಗಳಿಗೂ ಕೇಂದ್ರ ಸರ್ಕಾರ ಕನಿಷ್ಠ ಬೆಂಬಲ ಬೆಲೆ (ಎಂ.ಎಸ್.ಪಿ.) ನೀಡುವಲ್ಲಿ ಈ ಬಾರಿಯೂ ವಿಫಲವಾಗಿದೆ ಎಂದು ತಿಳಿಸಿದ್ದಾರೆ.

ಕೇಂದ್ರ ಸರ್ಕಾರ ಈ ಬಾರಿಯ ಬಜೆಟ್ ನಲ್ಲಿ ಶ್ರೀಗಂಧ ಬೆಳೆಗೆ ಉತ್ತೇಜನದ ಮಾತುಗಳನ್ನಾಡಿದೆ. ಆದರೆ ಅದು ಹೇಗೆ ಕಾರ್ಯಗತವಾಗುತ್ತದೆ ಎಂಬುದನ್ನು ಕಾದು ನೋಡಬೇಕಿದೆ. ಸ್ವಾಭಾವಿಕವಾಗಿ ಬೆಳೆಯುವ ಶ್ರೀಗಂಧದಲ್ಲಿ ತೈಲದ ಅಂಶ ಇರುತ್ತದೆ. ಆದರೆ ರೈತರು ಜಮೀನಿನಲ್ಲಿ ಗೊಬ್ಬರ ಹಾಕಿ ಬೆಳೆಯುವ ಶ್ರೀಗಂಧಕ್ಕೆ ಹೆಚ್ಚಿನ ಬೆಲೆ ದೊರಕುವುದಿಲ್ಲ. ಇದರಿಂದ ಮುಂದಿನ ದಿನಗಳಲ್ಲಿ ರೈತರು ಸಂಕಷ್ಟ ಅನುಭವಿಸುತ್ತಾರೆ ಎಂದೂ ಅರಣ್ಯ ಸಚಿವರು ತಿಳಿಸಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ನೂತನ ಶ್ರೀಗಂಧದ ನೀತಿ ರಚಿಸಿದೆ. ಕಡಲ ಆಮೆಗಳ ಸಂರಕ್ಷಣೆಯನ್ನು ಪ್ರವಾಸೋದ್ಯಮದಲ್ಲಿ ಸೇರಿಸಲಾಗಿದೆ. ಕರ್ನಾಟಕದ ಮಂಗಳೂರು ಮತ್ತು ಕಾರವಾರದಲ್ಲಿ ಈಗಾಗಲೇ ರಾಜ್ಯ ಸರ್ಕಾರ ಕಡಲಾಮೆಗಳ ಮೊಟ್ಟೆಗಳ ಸಂರಕ್ಷಣೆ ಮತ್ತು ಮರಿಗಳ ರಕ್ಷಣೆಗೆ ಕ್ರಮ ಕೈಗೊಂಡಿದೆ. ರಾಜ್ಯ ಸರ್ಕಾರ ಈಗಾಗಲೇ ಈ ಯೋಜನೆಗೆ ಮಾದರಿಯಾಗಿದೆ ಎಂದೂ ತಿಳಿಸಿದ್ದಾರೆ.

ಕಳೆದ 12 ವರ್ಷಗಳಲ್ಲಿ ದೇಶದಲ್ಲಿ ನಿರುದ್ಯೋಗ ಪ್ರಮಾಣ ಹೆಚ್ಚಳವಾಗಿದೆ. ವರ್ಷಕ್ಕೆ 2 ಕೋಟಿ ಉದ್ಯೋಗದ ಭರವಸೆ ನೀಡಿದ್ದ ಕೇಂದ್ರ ಸರ್ಕಾರ ನುಡಿದಂತೆ ನಡೆಯುವಲ್ಲಿ ಸಂಪೂರ್ಣ ವಿಫಲವಾಗಿದೆ. ಈ ಬಜೆಟ್ ನಲ್ಲಿಯೂ ರಾಜ್ಯದಲ್ಲಿ ಯುವಜನರಿಗೆ ಉದ್ಯೋಗ ಸೃಷ್ಟಿಸುವಂತಹ ಯಾವುದೇ ಯೋಜನೆ ಕಾಣುತ್ತಿಲ್ಲ. ಹಳೆಯ ಬಾಟಲಿಯಲ್ಲಿ ಹೊಸ ದ್ರಾಕ್ಷಾರಸ ತುಂಬಿದಂತಿದೆ ಎಂದು ಈಶ್ವರ ಖಂಡ್ರೆ 2026ರ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.

 

 

Tags:
error: Content is protected !!