ಬೆಂಗಳೂರು: ಶಾಸಕ ಬಿ.ಆರ್.ಪಾಟೀಲ್ ಬಳಿಕ ಈಗ ಆಡಳಿತ ಪಕ್ಷದ ಮತ್ತೊಬ್ಬ ಶಾಸಕ ರಾಜ್ಯ ಸರ್ಕಾರದ ವಿರುದ್ಧ ತಿರುಗಿಬಿದ್ದಿದ್ದು, 2-3 ದಿನದಲ್ಲಿ ರಾಜೀನಾಮೆ ನೀಡುವ ಬೆದರಿಕೆ ಹಾಕಿದ್ದಾರೆ.
ಬೆಳಗಾವಿ ಜಿಲ್ಲೆಯ ಕಾಗವಾಡ ಕ್ಷೇತ್ರದ ರಾಜುಕಾಗೆ ಅವರು ಬಹಿರಂಗವಾಗಿ ಹೇಳಿಕೆ ನೀಡಿದ್ದು, ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ಕುಸಿದಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
2 ವರ್ಷಗಳ ಹಿಂದೆ ತಮಮ್ ಕ್ಷೇತ್ರಕ್ಕೆ ವಿಶೇಷ ಅನುದಾನದಡಿ 25 ಕೋಟಿ ರೂ.ಗಳನ್ನು ಮಂಜೂರು ಮಾಡಲಾಗಿತ್ತು. ಅದರಲ್ಲಿ 12 ಕೋಟಿ ರೂ. ರಸ್ತೆಯ ಅಭಿವೃದ್ಧಿಗೆ ನಿಗದಿಯಾಗಿದ್ದರೆ ಉಳಿದ 13 ಕೋಟಿ ರೂಗಳನ್ನು 72 ಸಮುದಾಯ ಭವನಗಳ ನಿರ್ಮಾಣಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಆದರೆ ಈವರೆಗೂ ಕಾರ್ಯಾದೇಶ ನೀಡಲಾಗಿಲ್ಲ ಎಂದು ಆರೋಪಿಸಿದ್ದಾರೆ.
ಯಾವ ಕಾರಣಕ್ಕೆ ಕಾರ್ಯಾದೇಶ ನೀಡಲಾಗಿಲ್ಲ ಎಂಬುದು ನನಗೆ ಗೊತ್ತಿಲ್ಲ. ಅಳಂದ ಕ್ಷೇತ್ರದ ಶಾಸಕ ಬಿ.ಆರ್.ಪಾಟೀಲ್ ಹೇಳಿದ್ದಕ್ಕಿಂತಲೂ ಭೀಕರ ಪರಿಸ್ಥಿತಿ ತಮ್ಮ ಕ್ಷೇತ್ರದಲ್ಲಿದೆ. ಅಧಿಕಾರಿಗಳು 2 ವರ್ಷವಾದರೂ ಕಾರ್ಯಾದೇಶ ಕೊಡದೇ ಇರುವುದಕ್ಕೆ ಕಾರಣಗಳೇನು ಎಂದು ತಮಗೆ ಗೊತ್ತಿಲ್ಲ ಎಂದಿದ್ದಾರೆ.
ನನ್ನ ಮನಸ್ಸಿಗೆ ತುಂಬಾ ನೋವಾಗಿದೆ. ರಾಜೀನಾಮೆ ನೀಡುವ ಮನಸ್ಥಿತಿಯಲ್ಲಿದ್ದೇನೆ. 2-3 ದಿನಗಳಲ್ಲಿ ಮುಖ್ಯಮಂತ್ರಿಯವರನ್ನು ಭೇಟಿ ಮಾಡಿ ರಾಜೀನಾಮೆ ಕೊಟ್ಟರೂ ಅಚ್ಚರಿ ಇಲ್ಲ ಎಂದು ಹೇಳಿದ್ದಾರೆ.





