ತುಮಕೂರು: ಬಿಜೆಪಿ ರಾಜ್ಯಾಧ್ಯಕ್ಷರ ಸ್ಥಾನದ ಕುರಿತ ಪ್ರಶ್ನೆಗೆ ಫೆಬ್ರವರಿ.20ರೊಳಗೆ ಉತ್ತರ ಲಭಿಸಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ.
ಈ ಕುರಿತು ತುಮಕೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಜಿಲ್ಲಾಧ್ಯಕ್ಷರ ನೇಮಕಾತಿ ಆದ ಮೇಲೆ ರಾಜ್ಯಾಧ್ಯಕ್ಷರ ವಿಚಾರ ಗೊತ್ತಾಗಲಿದೆ. ದೆಹಲಿಯಲ್ಲಿ ಪ್ರಕ್ರಿಯೆ ನಡೆಯುತ್ತಿದೆ. ಸದ್ಯಕ್ಕೆ ಕೇಂದ್ರದ ವರಿಷ್ಠರು ರಾಜ್ಯಕ್ಕೆ ಬರಲಿದ್ದಾರೆ. ಎಲ್ಲಾ ಶಾಸಕರ ಜೊತೆ ಸಮಾಲೋಚನೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುತ್ತಾರೆ ಎಂದು ಹೇಳಿದರು.
ಇನ್ನು ಕೇಂದ್ರದ ಶಿಸ್ತು ಸಮಿತಿ ಯತ್ನಾಳ್ರಿಗೆ ನೋಟಿಸ್ ಕೊಟ್ಟಿದೆ. 72 ಗಂಟೆಗಳ ಗಡುವು ಕೂಡ ಇತ್ತು. ಅದಾದ ಮೇಲೆ ಏನಾಗಿದೆ, ಏನಾಗುತ್ತಿದೆ ಎಂಬುದಕ್ಕೆ ಪ್ರತಿಕ್ರಿಯೆ ಕೊಡಲು ಹೋಗುವುದಿಲ್ಲ ಎಂದರು.
ಇನ್ನು ವಿಶ್ವವಿದ್ಯಾನಿಲಯಗಳನ್ನು ಮುಚ್ಚುವ ರಾಜ್ಯ ಸರ್ಕಾರದ ನಿರ್ಧಾರಕ್ಕೆ ಸಂಬಂಧಿಸಿದಂತೆ ಕಿಡಿಕಾರಿದ ಅವರು, ವಿಶ್ವವಿದ್ಯಾನಿಲಯಗಳನ್ನು ಮುಚ್ಚುವುದು ದುರದೃಷ್ಟಕರ. ಬಿಜೆಪಿ ಸರ್ಕಾರ ಇದ್ದಾಗ ತೆರೆದ ವಿವಿಗಳನ್ನು ಮುಚ್ಚುವ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಅನುದಾನ ಕೊಟ್ಟರೆ ವಿವಿಗಳು ಕೆಲಸ ಮಾಡಲು ಸಾಧ್ಯ. ಅದರಿಂದ ಬಡ ಮಕ್ಕಳಿಗೂ ಅನುಕೂಲ ಆಗುತ್ತದೆ. ಕಾಂಗ್ರೆಸ್ ಸರ್ಕಾರದ ನಿರ್ಧಾರ ಶೋಭೆ ತರುವುದಿಲ್ಲ ಎಂದು ಕಿಡಿಕಾರಿದರು.





