ಬೆಂಗಳೂರು : ಪಕ್ಷ ವಿರೋಧಿ ಚಟುವಟಿಕೆ ಹಿನ್ನಲೆಯಲ್ಲಿ ಜೆಡಿಎಸ್ನ ಮಾಜಿ ರಾಜ್ಯಾಧ್ಯಕ್ಷ ಸಿಎಂ ಇಬ್ರಾಹಿಂ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಿ ಆದೇಶ ಹೊರಡಿಸಲಾಗಿದೆ.
ಈ ಬಗ್ಗೆ ಶುಕ್ರವಾರ ಅಧಿಕೃತ ಘೋಷಣೆ ಮಾಡಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಎಚ್.ಡಿ ದೇವೇಗೌಡ ಈ ಆದೇಶ ಕೂಡಲೇ ಜಾರಿಗೆ ಬರುವಂತೆ ಇಬ್ರಾಹಿಂದ ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ. ಪಕ್ಷದ ಹಿತ ದೃಷ್ಠಿಯಿಂದ, ಪಕ್ಷದ ಸಂವಿಧಾಣ ನಿಯಮಗಳಡಿಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಶಿಸ್ತು ಉಲ್ಲಂಘನೆ ಕಾರಣದಿಂದ ಅವರನ್ನು ಅಮಾನತು ಮಾಡಿರುವುದಾಗಿ ಉಲ್ಲೇಖಿಸಲಾಗಿದೆ.
ಶುಕ್ರವಾರ ಈ ಬಗ್ಗೆ ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿರುವ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ತಕ್ಷಣದಿಂದಲೇ ಜಾರಿಗೆ ಬರುವಂತೆ ಇಬ್ರಾಹಿಂ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ. ಪಕ್ಷದ ಹಿತದೃಷ್ಟಿಯಿಂದ ಪಕ್ಷದ ಸಂವಿಧಾನ ಹಾಗೂ ನಿಯಮಗಳ ಅಡಿಯಲ್ಲಿ ಶಿಸ್ತು ಉಲ್ಲಂಘನೆ ಮಾಡಿದ ಕಾರಣದಿಂದ ಇಬ್ರಾಹಿಂ ಅವರನ್ನು ಅಮಾನತು ಮಾಡಲಾಗಿದೆ ಎಂದು ಅವರು ಉಲ್ಲೇಖಿಸಿದ್ದಾರೆ.
ಇಬ್ರಾಹಿಂ ಅವರು ಪಕ್ಷದ ರಾಜ್ಯ ಘಟಕದ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಅವರು ಸಂಪೂರ್ಣ ನಿಷ್ಕ್ರಿಯರಾಗಿದ್ದರು. ಸಂಘಟನೆ ಬಲವರ್ಧನೆಗೆ ಯಾವುದೇ ಕಾರ್ಯಕ್ರಮ ಹಾಗೂ ಸದಸ್ಯತ್ವ ನೋಂದಣಿ ಅಭಿಯಾನ ಕೈಗೊಂಡಿಲ್ಲ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಹಿತದೃಷ್ಟಿಯಿಂದ ಬಿಜೆಪಿ ಜತೆ ಮೈತ್ರಿ ಮಾಡಿಕೊಳ್ಳುವ ವಿಚಾರವಾಗಿ ಪಕ್ಷದ ನಿರ್ಣಯವನ್ನು ಅವರು ಸ್ಪಷ್ಟವಾಗಿ ಉಲ್ಲಂಘನೆ ಮಾಡಿರುತ್ತಾರೆ ಎಂದು ಅವರು ಹೇಳಿದ್ದಾರೆ.
‘ಪಕ್ಷದ ಹಿತಕ್ಕಾಗಿ ಬಿಜೆಪಿ ಜತೆ ಲೋಕಸಭೆ ಚುನಾವಣೆಗಾಗಿ ಮೈತ್ರಿ ಮಾಡಿಕೊಳ್ಳಲು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಸರ್ವಾನುಮತದ ಅಧಿಕಾರ ನೀಡಲಾಗಿತ್ತು. ಜತೆಗೆ, ಮೈತ್ರಿಯ ಬಗ್ಗೆ ಬಿಜೆಪಿ ನಾಯಕರ ಜತೆ ಚರ್ಚೆ ನಡೆಸಲು ರಾಷ್ಟ್ರೀಯ ಅಧ್ಯಕ್ಷರು ಮತ್ತು ಶಾಸಕಾಂಗ ಪಕ್ಷದ ನಾಯಕರಿಗೆ ಪೂರ್ಣ ಅಧಿಕಾರ ನೀಡಲಾಗಿತ್ತು. ಈ ಬಗ್ಗೆ ನಿರ್ಣಯ ಕೈಗೊಳ್ಳಲು ನಡೆದ ಎಲ್ಲ ಸಭೆಗಳಲ್ಲಿ ಇಬ್ರಾಹಿಂ ಅವರು ಹಾಜರಿದ್ದರು. ಆದರೂ ಅವರು ಪಕ್ಷಕ್ಕೆ ಹಾನಿ ಉಂಟು ಮಾಡುವ ವಿರೋಧಾಭಾಸದ ಹೇಳಿಕೆಗಳನ್ನು ನೀಡಿದ್ದಾರೆ.’
ಈ ಹಿನ್ನೆಲೆಯಲ್ಲಿ ಕರ್ನಾಟಕ ಪ್ರದೇಶ ಜನತಾದಳದ ರಾಜ್ಯಾಧ್ಯಕ್ಷರನ್ನು ಒಳಗೊಂಡ ಕಾರ್ಯಕಾರಿ ಸಮಿತಿಯ ಪದಾಧಿಕಾರಿಗಳನ್ನು ಪಕ್ಷದ ಸಂವಿಧಾನದ ಆರ್ಟಿಕಲ್ 10ರ ಅನ್ವಯ ಕಳೆದ ಅಕ್ಟೋಬರ್ 19ರಂದು ವಿಸರ್ಜನೆ ಮಾಡಿ ರಾಷ್ಟ್ರೀಯ ಅಧ್ಯಕ್ಷರು ಆದೇಶ ಹೊರಡಿಸಿದ್ದರು. ಆ ನಂತರ ಇಬ್ರಾಹಿಂ ಅವರು ನ.7ರಂದು ʼಚಿಂತನ ಮಂಥನʼ ಎನ್ನುವ ಹೆಸರಿನಲ್ಲಿ ಬೆಂಗಳೂರಿನಲ್ಲಿ ಸಭೆ ಕರೆದು ಜೆಡಿಎಸ್-ಬಿಜೆಪಿ ಮೈತ್ರಿಯ ಬಗ್ಗೆ ವಿರೋಧ ವ್ಯಕ್ತಪಡಿಸಿದ್ದರು.
ಈ ಸಂದರ್ಭದಲ್ಲಿ ಅವರು ಜೆಡಿಎಸ್ ರಾಜ್ಯಾಧ್ಯಕ್ಷರಾಗಿ ಮುಂದುವರಿದಿದ್ದೇನೆ ಎಂದು ತಿಳಿಸಿ, ಬಿಜೆಪಿ ಜತೆ ಮೈತ್ರಿಗೆ ಒಲವು ಇರುವವರೆಲ್ಲರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಬೇಕು ಎಂದು ಪಕ್ಷ ವಿರೋಧಿ ಹೇಳಿಕೆಯನ್ನೂ ನಿಡಿದ್ದರು.ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಅಮಾನತು ಮಾಡಲಾಗಿದೆ ಎಂದು ದೇವೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.