ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬಗ್ಗೆ ಕಾಳಜಿ ಇದ್ದು, ಚುನಾವಣಾ ಪ್ರಣಾಳಿಕೆಯಲ್ಲಿ ಕೊಟ್ಟ ಮಾತಿನಂತೆ ಗೌರವ ಧನ ಹೆಚ್ಚಿಸುವ ಮೂಲಕ ನಮ್ಮ ಸರ್ಕಾರ ಬದ್ಧತೆ ಮೆರೆದಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ಇಂದು ವಿಧಾನ ಪರಿಷತ್ನ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಪ್ರತಾಪ್ ಸಿಂಹ ನಾಯಕ್, ಈ ಸಾಲಿನ ಬಜೆಟ್ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ 1 ಸಾವಿರ ರೂ. ಹೆಚ್ಚಿಸಲಾಗಿದ್ದು, ಇದರಿಂದ ವರ್ಷಕ್ಕೆ ಇಲಾಖೆಗೆ 144 ಕೋಟಿ ರೂ. ಆರ್ಥಿಕ ಹೊರೆಯಾಗಲಿದೆ ಎಂದು ಹೇಳಿದರು.
ಇದಕ್ಕೆ ಉತ್ತರಿಸಿದ ಸಚಿವೆ, 2017ರಲ್ಲಿ ಸಿದ್ದರಾಮಯ್ಯನವರು ಮುಖ್ಯಮಂತ್ರಿ ಅಗಿದ್ದ ವೇಳೆ ಅಂಗನವಾಡಿ ಕಾರ್ಯಕರ್ತೆಯರಿಗೆ 2 ಸಾವಿರ ರೂ.ಗಳ ಗೌರವ ಧನ ಹೆಚ್ಚಳ ಮಾಡಿದ್ದರು. ಆದರೆ, ಬಿಜೆಪಿ ಸರ್ಕಾರ ತಮ್ಮ 4 ವರ್ಷದ ಅವಧಿಯಲ್ಲಿ ಒಂದೂ ರೂಪಾಯಿ ಹೆಚ್ಚಿಸಿರಲಿಲ್ಲ ಎಂದು ಸದನಕ್ಕೆ ತಿಳಿಸದರು.
ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ನೀಡುವಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಪಾಲು ಇದೆ. ಅದರಲ್ಲಿ ನಮ್ಮ ರಾಜ್ಯದ ಪಾಲು ಹೆಚ್ಚಿದೆ. ಗೌರವ ಧನ ಹೆಚ್ಚಳದ ಬಗ್ಗೆ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಿದರು, ಇದುವರೆಗೂ ನಯಾ ಪೈಸೆ ಬಿಡುಗಡೆ ಮಾಡಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಗೌರವ ಧನ ಹೆಚ್ಚಳ ಮಾಡಿರುವ ರಾಜ್ಯಗಳ ಪೈಕಿ ಇಡೀ ದೇಶದಲ್ಲೆ ನಮ್ಮ ಕರ್ನಾಟಕ ಮೂರನೇ ಸ್ಥಾನದಲ್ಲಿದೆ. ನಮ್ಮ ಸರ್ಕಾರಕ್ಕೆ ಬದ್ಧತೆ ಇರುವ ಕಾರಣ ಗೌರವ ಧನ ಹೆಚ್ಚಳ ಮಾಡಲು ನಿರ್ಧಾರ ಮಾಡಿದ್ದೇವೆ ಎಂದು ಸದನಕ್ಕೆ ತಿಳಿಸಿದರು.