ರಾಜ್ಯ

ಜಾತಿ ಗಣತಿ ವರದಿ ಹಿಂಪಡೆಗೆ ಅಶೋಕ ಆಗ್ರಹ

ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಬೆಂಗಳೂರು : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು. ಆದರೆ ಈಗ ಮುಸ್ಲಿಮರು ಅತಿ ದೊಡ್ಡ ಜಾತಿ ಎನ್ನಲಾಗಿದೆ. ಮುಸ್ಲಿಮರಲ್ಲೇ ವಿವಿಧ ಜಾತಿಗಳಿದ್ದು, ಅದನ್ನು ಬೇರೆ ಮಾಡಿಲ್ಲ. ಒಕ್ಕಲಿಗರಲ್ಲೇ ಕೆಲವು ಜಾತಿಗಳನ್ನು ವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್ ಗೆ ಹೆಚ್ಚು ಮತ ನೀಡುವವರ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲಾಗಿದೆ. ಒಕ್ಕಲಿಗರಿಗೆ, ಲಿಂಗಾಯತರಿಗೆ, ದಲಿತರಿಗೆ ನಾಮ ಹಾಕಿದ್ದಾರೆ ಎಂದು ದೂರಿದರು.

ಸಿದ್ದರಾಮಯ್ಯ ಪ್ರಾಯೋಜಿತವಾದ ಈ ವರದಿ ಅವೈಜ್ಞಾನಿಕ. ಲಕ್ಷಾಂತರ ಜನರ ಮನೆಗೆ ಹೋಗದೆ ವರದಿ ಬರೆಯಲಾಗಿದೆ. ಕರ್ನಾಟಕ ತಂತ್ರಜ್ಞಾನದಲ್ಲೇ ನಂ.1 ಆಗಿದೆ. ಇದನ್ನು ಬಳಸಿಕೊಂಡು ವರದಿ ಮಾಡಬಹುದಿತ್ತು. ಆದರೂ ತಮಗೆ ಬೇಕಾದಂತೆ ವರದಿ ಬರೆಸಿದ್ದಾರೆ ಎಂದರು.

ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದು ಹಳೆ ಕಾಂಗ್ರೆಸ್. ಈಗಿನ ಕಾಂಗ್ರೆಸ್ ನಲ್ಲಿ ಹಳಬರು ಇಲ್ಲ‌. ಈ ಕಾಂಗ್ರೆಸ್ ಒಕ್ಕಲಿಗರು, ಲಿಂಗಾಯತರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ‌. ಈಗಲೂ ಸಮಯವಿದೆ. ಆರು ತಿಂಗಳು ತಡವಾದರೂ ಪರವಾಗಿಲ್ಲ‌‌. ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವರದಿಯನ್ನು ಮತ್ತೆ ರೂಪಿಸಲಿ ಎಂದು ಆಗ್ರಹಿಸಿದರು.

ಈ ವರದಿಗೆ 150 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ. ಅಧಿಕಾರಿ ಕಾಂತರಾಜು ಅವರನ್ನು ಮನೆಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಡಿಕ್ಟೇಶನ್ ಮಾಡಿಸಿ ವರದಿ ಬರೆಸಿದ್ದಾರೆ. ಬಳಿಕ ಕಾಂತರಾಜು ಸಹಿ ಹಾಕದೆ ಓಡಿದ್ದಾರೆ. ಈ ಹಣವನ್ನು ಯಾರು ತಿಂದಿದ್ದಾರೆ ಎಂದು ತನಿಖೆ ಮಾಡಬೇಕಿದೆ. ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ವರದಿ ಮಾಡಲಾಗಿದೆ ಎಂದರು.

ಹಳ್ಳಿಕಾರ್, ಕುಂಚಿಟಿಗರನ್ನು ಬೇರೆ ಮಾಡಲಾಗಿದೆ. ರೆಡ್ಡಿ ಲಿಂಗಾಯತರನ್ನು ಪ್ರತ್ಯೇಕ ಮಾಡಲಾಗಿದೆ. ಇಂತಹ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದನ್ನು ಸಚಿವರು ಒಪ್ಪಿದರೆ ಆಯಾ ಸಮುದಾಯದ ಜನರು ಅವರನ್ನು ಒಪ್ಪುವುದಿಲ್ಲ. ಈ ವರದಿಯಿಂದಾಗಿ ಕಾಂಗ್ರೆಸ್ ನಲ್ಲೇ ದಂಗೆ ಆರಂಭವಾಗಲಿದೆ. ಸಮುದಾಯಗಳ ಜನರು ಮುಂದಿನ ಚುನಾವಣೆಯಲ್ಲಿ ಇವರನ್ನು ಹತ್ತಿರ ಸೇರಿಸುವುದಿಲ್ಲ. ಒಕ್ಕಲಿಗ ಸ್ವಾಮೀಜಿಯವರು ಸಭೆ ಕರೆದು ಈ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇದೇ ರೀತಿ ಬೇರೆ ಸಮುದಾಯದವರೂ ಸಭೆ ಮಾಡಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ದಲಿತರಿಗೆ ಮೀಸಲಾತಿ ನೀಡಿದ್ದಾರೆ. ಆದರೆ ಮುಸ್ಲಿಮರಿಗೆ ಮೀಸಲಾತಿ ನೀಡಲು ರಾಜ್ಯಕ್ಕೆ ಅಧಿಕಾರವಿಲ್ಲ‌. ಜೊತೆಗೆ ಒಟ್ಟು ಮೀಸಲಾತಿ 50% ಗಿಂತ ಹೆಚ್ಚು ಮಾಡಲು ಸಾಧ್ಯವಿಲ್ಲ. ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಿದೆ. ಹೆಚ್ಚಿನ ಮೀಸಲಾತಿಯನ್ನು ಯಾವ ಕಾನೂನಿನಡಿ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಲಿ. ಬಿಜೆಪಿ ಇದ್ದಾಗ ಮುಸ್ಲಿಮರಿಗಿದ್ದ ಮೀಸಲಾತಿಯನ್ನು ತೆಗೆದು ಬೇರೆಯವರಿಗೆ ನೀಡಲಾಗಿತ್ತು ಎಂದರು‌.

ಬಿಜೆಪಿ-ಜೆಡಿಎಸ್ ಪ್ರತಿಭಟನೆಗೆ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ. ಹಾಲಿನ ದರ, ಡೀಸೆಲ್, ವಿದ್ಯುತ್ ಮೊದಲಾದ ದರಗಳನ್ನು ಕಾಂಗ್ರೆಸ್ ಏರಿಸಿದೆ. ಕಾಂಗ್ರೆಸ್ ಎಲ್ಲೂ ದರ ಇಳಿಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಪಾರ್ಕಿಂಗ್, ಕಸ ಶುಲ್ಕ ಮಾಡಲಾಗಿದೆ. ಬೆಂಗಳೂರಿನ ಜನರನ್ನು ತೆರಿಗೆಯಿಂದಲೇ ಹಿಂಡುತ್ತಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಅರಮನೆ ಫಲಪುಷ್ಪ ಪ್ರದರ್ಶನ | ಸಂಗೀತ ಸಂಜೆಯಲ್ಲಿ ಪ್ರೇಕ್ಷಕರು ತಲ್ಲೀನ

ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…

2 hours ago

ಎತ್ತಿನ ಗಾಡಿಗೆ ಸಾರಿಗೆ ಬಸ್‌ ಡಿಕ್ಕಿ : ಎತ್ತು ಸಾವು

ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…

2 hours ago

ಮುತ್ತತ್ತಿ : ಕಾವೇರಿ ನದಿ ಸೆಳೆತಕ್ಕೆ ಸಿಲುಕಿ ಯುವಕ ಸಾವು

ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…

2 hours ago

ಪೊಲೀಸ್‌ ಭದ್ರತೆಯಲ್ಲಿ ದೇಗುಲ ಪ್ರವೇಶಿಸಿದ ದಲಿತರು : ಶಾಂತಿ ಸಭೆಯಲ್ಲಿ ಪಂಚ ಬೇಡಿಕೆ

ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…

2 hours ago

ಅಕ್ರಮ ವಿದ್ಯುತ್‌ ಸಂಪರ್ಕ: 31 ಪ್ರಕರಣ ದಾಖಲು, 2.17 ಲಕ್ಷ ರೂ. ದಂಡ

ಮೈಸೂರು : ಅಕ್ರಮವಾಗಿ ವಿದ್ಯುತ್‌ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…

2 hours ago

ಚಿನ್ನಸ್ವಾಮಿ ಕ್ರಿಕೆಟ್‌ ಕ್ರೀಡಾಂಗಣದಲ್ಲಿ ಕ್ರಿಕೆಟ್‌ ಪಂದ್ಯ : ಸಮಿತಿ ರಚನೆ

ಬೆಂಗಳೂರು : ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ನಡೆಸುವ ಕುರಿತಂತೆ ಪರಿಶೀಲಿಸಲು ಸಮಿತಿ ರಚಿಸಲಾಗಿದೆ ಎಂದು ಗೃಹ ಸಚಿವರಾದ…

3 hours ago