ರಾಜ್ಯ

ಜಾತಿ ಗಣತಿ ವರದಿ ಹಿಂಪಡೆಗೆ ಅಶೋಕ ಆಗ್ರಹ

ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಿ: ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹ

ಬೆಂಗಳೂರು : ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ಸಿಎಂ ಸಿದ್ದರಾಮಯ್ಯ ಜಾತಿ ಗಣತಿ ವರದಿ ಮಾಡಿಸಿದ್ದಾರೆ. ಈ ವರದಿಯನ್ನು ಹಿಂಪಡೆದು, ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವೈಜ್ಞಾನಿಕವಾಗಿ ವರದಿ ರೂಪಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಜಾತಿ ಹಾಗೂ ಧರ್ಮಗಳನ್ನು ಒಡೆಯುವ ಕೆಲಸ ಮಾಡಿದ್ದಾರೆ. ಮೊದಲು ರಾಜ್ಯದಲ್ಲಿ ಅತಿ ದೊಡ್ಡ ಜಾತಿ ಲಿಂಗಾಯತರು, ಎರಡನೇ ಅತಿ ದೊಡ್ಡ ಜಾತಿ ಒಕ್ಕಲಿಗರು ಹಾಗೂ ಮೂರನೆಯವರು ದಲಿತರು ಎಂದಿತ್ತು. ಆದರೆ ಈಗ ಮುಸ್ಲಿಮರು ಅತಿ ದೊಡ್ಡ ಜಾತಿ ಎನ್ನಲಾಗಿದೆ. ಮುಸ್ಲಿಮರಲ್ಲೇ ವಿವಿಧ ಜಾತಿಗಳಿದ್ದು, ಅದನ್ನು ಬೇರೆ ಮಾಡಿಲ್ಲ. ಒಕ್ಕಲಿಗರಲ್ಲೇ ಕೆಲವು ಜಾತಿಗಳನ್ನು ವಿಂಗಡಣೆ ಮಾಡಿದ್ದಾರೆ. ಕಾಂಗ್ರೆಸ್ ಗೆ ಹೆಚ್ಚು ಮತ ನೀಡುವವರ ಸಂಖ್ಯೆಯನ್ನು ಹೆಚ್ಚಾಗಿ ತೋರಿಸಲಾಗಿದೆ. ಒಕ್ಕಲಿಗರಿಗೆ, ಲಿಂಗಾಯತರಿಗೆ, ದಲಿತರಿಗೆ ನಾಮ ಹಾಕಿದ್ದಾರೆ ಎಂದು ದೂರಿದರು.

ಸಿದ್ದರಾಮಯ್ಯ ಪ್ರಾಯೋಜಿತವಾದ ಈ ವರದಿ ಅವೈಜ್ಞಾನಿಕ. ಲಕ್ಷಾಂತರ ಜನರ ಮನೆಗೆ ಹೋಗದೆ ವರದಿ ಬರೆಯಲಾಗಿದೆ. ಕರ್ನಾಟಕ ತಂತ್ರಜ್ಞಾನದಲ್ಲೇ ನಂ.1 ಆಗಿದೆ. ಇದನ್ನು ಬಳಸಿಕೊಂಡು ವರದಿ ಮಾಡಬಹುದಿತ್ತು. ಆದರೂ ತಮಗೆ ಬೇಕಾದಂತೆ ವರದಿ ಬರೆಸಿದ್ದಾರೆ ಎಂದರು.

ಬ್ರಿಟಿಷರ ವಿರುದ್ದ ಹೋರಾಟ ಮಾಡಿದ್ದು ಹಳೆ ಕಾಂಗ್ರೆಸ್. ಈಗಿನ ಕಾಂಗ್ರೆಸ್ ನಲ್ಲಿ ಹಳಬರು ಇಲ್ಲ‌. ಈ ಕಾಂಗ್ರೆಸ್ ಒಕ್ಕಲಿಗರು, ಲಿಂಗಾಯತರ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದೆ‌. ಈಗಲೂ ಸಮಯವಿದೆ. ಆರು ತಿಂಗಳು ತಡವಾದರೂ ಪರವಾಗಿಲ್ಲ‌‌. ಪ್ರತಿ ಮನೆಗೆ ಹೋಗಿ ಸಮೀಕ್ಷೆ ಮಾಡಿ ವರದಿಯನ್ನು ಮತ್ತೆ ರೂಪಿಸಲಿ ಎಂದು ಆಗ್ರಹಿಸಿದರು.

ಈ ವರದಿಗೆ 150 ಕೋಟಿ ರೂ. ಖರ್ಚಾಗಿದೆ ಎನ್ನಲಾಗಿದೆ. ಅಧಿಕಾರಿ ಕಾಂತರಾಜು ಅವರನ್ನು ಮನೆಗೆ ಕರೆಸಿಕೊಂಡ ಸಿಎಂ ಸಿದ್ದರಾಮಯ್ಯ ಡಿಕ್ಟೇಶನ್ ಮಾಡಿಸಿ ವರದಿ ಬರೆಸಿದ್ದಾರೆ. ಬಳಿಕ ಕಾಂತರಾಜು ಸಹಿ ಹಾಕದೆ ಓಡಿದ್ದಾರೆ. ಈ ಹಣವನ್ನು ಯಾರು ತಿಂದಿದ್ದಾರೆ ಎಂದು ತನಿಖೆ ಮಾಡಬೇಕಿದೆ. ಕೇವಲ ಮುಸ್ಲಿಮರನ್ನು ವೋಟ್ ಬ್ಯಾಂಕ್ ಮಾಡಿಕೊಳ್ಳಲು ವರದಿ ಮಾಡಲಾಗಿದೆ ಎಂದರು.

ಹಳ್ಳಿಕಾರ್, ಕುಂಚಿಟಿಗರನ್ನು ಬೇರೆ ಮಾಡಲಾಗಿದೆ. ರೆಡ್ಡಿ ಲಿಂಗಾಯತರನ್ನು ಪ್ರತ್ಯೇಕ ಮಾಡಲಾಗಿದೆ. ಇಂತಹ ವರದಿಯನ್ನು ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅದನ್ನು ಸಚಿವರು ಒಪ್ಪಿದರೆ ಆಯಾ ಸಮುದಾಯದ ಜನರು ಅವರನ್ನು ಒಪ್ಪುವುದಿಲ್ಲ. ಈ ವರದಿಯಿಂದಾಗಿ ಕಾಂಗ್ರೆಸ್ ನಲ್ಲೇ ದಂಗೆ ಆರಂಭವಾಗಲಿದೆ. ಸಮುದಾಯಗಳ ಜನರು ಮುಂದಿನ ಚುನಾವಣೆಯಲ್ಲಿ ಇವರನ್ನು ಹತ್ತಿರ ಸೇರಿಸುವುದಿಲ್ಲ. ಒಕ್ಕಲಿಗ ಸ್ವಾಮೀಜಿಯವರು ಸಭೆ ಕರೆದು ಈ ಬಗ್ಗೆ ಚರ್ಚೆ ಮಾಡಲಿದ್ದಾರೆ. ಇದೇ ರೀತಿ ಬೇರೆ ಸಮುದಾಯದವರೂ ಸಭೆ ಮಾಡಿ ತೀರ್ಮಾನ ಕೈಗೊಳ್ಳಲಿದ್ದಾರೆ ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಸಂವಿಧಾನದಲ್ಲಿ ದಲಿತರಿಗೆ ಮೀಸಲಾತಿ ನೀಡಿದ್ದಾರೆ. ಆದರೆ ಮುಸ್ಲಿಮರಿಗೆ ಮೀಸಲಾತಿ ನೀಡಲು ರಾಜ್ಯಕ್ಕೆ ಅಧಿಕಾರವಿಲ್ಲ‌. ಜೊತೆಗೆ ಒಟ್ಟು ಮೀಸಲಾತಿ 50% ಗಿಂತ ಹೆಚ್ಚು ಮಾಡಲು ಸಾಧ್ಯವಿಲ್ಲ. ಮೂಗಿಗೆ ತುಪ್ಪ ಸವರುವ ಕೆಲಸವನ್ನು ಸರ್ಕಾರ ಮಾಡಿದೆ. ಹೆಚ್ಚಿನ ಮೀಸಲಾತಿಯನ್ನು ಯಾವ ಕಾನೂನಿನಡಿ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಲಿ. ಬಿಜೆಪಿ ಇದ್ದಾಗ ಮುಸ್ಲಿಮರಿಗಿದ್ದ ಮೀಸಲಾತಿಯನ್ನು ತೆಗೆದು ಬೇರೆಯವರಿಗೆ ನೀಡಲಾಗಿತ್ತು ಎಂದರು‌.

ಬಿಜೆಪಿ-ಜೆಡಿಎಸ್ ಪ್ರತಿಭಟನೆಗೆ ವಿರುದ್ಧವಾಗಿ ಕಾಂಗ್ರೆಸ್ ಪ್ರತಿಭಟನೆ ಮಾಡುತ್ತಿರುವುದರಲ್ಲಿ ಅರ್ಥವಿಲ್ಲ. ಹಾಲಿನ ದರ, ಡೀಸೆಲ್, ವಿದ್ಯುತ್ ಮೊದಲಾದ ದರಗಳನ್ನು ಕಾಂಗ್ರೆಸ್ ಏರಿಸಿದೆ. ಕಾಂಗ್ರೆಸ್ ಎಲ್ಲೂ ದರ ಇಳಿಕೆ ಮಾಡಿಲ್ಲ. ಬೆಂಗಳೂರಿನಲ್ಲಿ ಪಾರ್ಕಿಂಗ್, ಕಸ ಶುಲ್ಕ ಮಾಡಲಾಗಿದೆ. ಬೆಂಗಳೂರಿನ ಜನರನ್ನು ತೆರಿಗೆಯಿಂದಲೇ ಹಿಂಡುತ್ತಿದ್ದಾರೆ ಎಂದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಡಿಕೇರಿ: ವಿದ್ಯುತ್ ತಂತಿ ಮೇಲೆ ಮರ ಬೀಳಿಸಿ ಕಾಡಾನೆಗಳ ಪುಂಡಾಟ

ಮಡಿಕೇರಿ: ಕೊಡಗಿನಲ್ಲಿ ವನ್ಯಜೀವಿ–ಮಾನವ ಸಂಘರ್ಷ ಮತ್ತೆ ಮುಂದುವರಿದಿದೆ. ಈ ಬಾರಿ ಕಾಡಾನೆಗಳ ಬುದ್ಧಿವಂತಿಕೆ ಹಾಗೂ ಉಪಾಯದಿಂದ ನಡೆದ ಘಟನೆ ಗ್ರಾಮಸ್ಥರಲ್ಲಿ…

10 hours ago

ಶ್ರೀಲಂಕಾ ಜೈಲಿನಲ್ಲಿ ಗ್ಯಾಂಗ್‌ ವಾರ್:‌ 25 ಕೈದಿಗಳು ಸಾವು

ಕೊಲಂಬೊ: ಶ್ರೀಲಂಕಾದ ಜೈಲಿನಲ್ಲಿ ಕೈದಿಗಳ ಎರಡು ಗುಂಪಿನ ಮಧ್ಯೆ ಗಲಾಟೆ ನಡೆದ ಪರಿಣಾಮ 25 ಮಂದಿ ಸಾವನ್ನಪ್ಪಿದ್ದು, 100ಕ್ಕೂ ಹೆಚ್ಚು…

10 hours ago

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ. ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ…

10 hours ago

ಮೊಬೈಲ್‌ ಟಾರ್ಚ್‌ ಹಿಡಿದು ಬಸ್‌ ಚಾಲನೆ: ಮೂವರು ಅಮಾನತು

ಕಲಬುರ್ಗಿ: ಟಾರ್ಚ್‌ ಹಿಡಿದು ಬಸ್‌ ಚಾಲನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಸ್‌ ಡ್ರೈವರ್‌ ಸೇರಿದಂತೆ ಮೂವರನ್ನು ಅಮಾನತು ಮಾಡಲಾಗಿದೆ. ತಾಂತ್ರಿಕ…

10 hours ago

ರಾಜ್ಯದಲ್ಲಿ ಚುರುಕು ಪಡೆದುಕೊಂಡ ಮಳೆ: ಜಲಾಶಯಗಳ ಒಳಹರಿವಿನಲ್ಲಿ ಏರಿಕೆ

ಬೆಂಗಳೂರು: ಕರ್ನಾಟಕದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮುಂಗಾರು ಮಳೆ ದಾಖಲಾಗದಿದ್ದರೂ, ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಭಾರೀ ಮಳೆಯ ಪರಿಣಾಮ ಉತ್ತರ…

11 hours ago

ಧಾರಾಕಾರ ಮಳೆಗೆ ತತ್ತರಿಸಿದ ಮುಂಬೈ

ಮುಂಬೈ: ಕಳೆದ ಐದು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ದೇಶದ ವಾಣಿಜ್ಯ ರಾಜಧಾನಿ ಮುಂಬೈ ತತ್ತರಿಸಿದೆ. ಮಳೆಯ ಆರ್ಭಟಕ್ಕೆ ನಗರದ…

11 hours ago