ಬೆಂಗಳೂರು: ಬೆಳಗಾವಿಯಲ್ಲಿ ಕಂಡಕ್ಟರ್ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಿದ್ದರಾಮಯ್ಯ ಅವರು ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರಿಂದ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದಾರೆ.
ಕಾವೇರಿ ನಿವಾಸದಲ್ಲಿ ಸಾರಿಗೆ ಸಚಿವ ರಾಮಲಿಂಗ ರೆಡ್ಡಿ ಅವರು ಇಂದು(ಫೆಬ್ರವರಿ.25) ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಪ್ರಕರಣದ ಕುರಿತು ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ. ಅಲ್ಲದೇ ಈ ವೇಳೆಯೇ ಪೊಲೀಸ್ ಮಹಾನಿರ್ದೇಶಕ ಆಲೋಕ್ ಮೋಹನ್ ಅವರು ಸಹ ಭೇಟಿಯಾಗಿ, ಬೆಳಗಾವಿ ಗಲಾಟೆಗೆ ಸಂಬಂಧಿಸಿದಂತೆ ಮಾಹಿತಿ ನೀಡಿದ್ದಾರೆ.
ಇನ್ನು ಪ್ರಕರಣದ ಮಾಹಿತಿಯನ್ನು ಪಡೆದ ಸಿಎಂ ಸಿದ್ದರಾಮಯ್ಯ ಅವರು ಮಾತನಾಡಿ, ಗಡಿಭಾಗದಲ್ಲಿ ಕಟ್ಟುನಿಟ್ಟಾಗಿ ಬಂದೋಬಸ್ತ್ ಮಾಡುವಂತೆ ಸೂಚಿಸಿದ್ದಾರೆ. ಅಲ್ಲದೇ ಬಸ್ಗಳ ಓಡಾಟ ಹಾಗೂ ರಕ್ಷಣೆ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಕಾರ್ಯದರ್ಶಿ ಅವರೊಂದಿಗೆ ಚರ್ಚಿಸುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಆದೇಶ ಮಾಡಿದ್ದಾರೆ. ಇನ್ನು ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರ ಅವರೊಂದಿಗೆ ಘಟನೆಯ ಬಗ್ಗೆ ಸಮಾಲೋಚಿಸುವಂತೆ ಡಿಜಿಪಿ ಆಲೋಕ್ ಮೋಹನ್ ಅವರಿಗೆ ಸೂಚಿಸಿದ್ದಾರೆ.





