ಬೆಂಗಳೂರು: ಕಲಬುರ್ಗಿ ಜಿಲ್ಲೆಯ ಆಳಂದ ವಿಧಾನಸಭಾ ಕ್ಷೇತ್ರದ ಹಿರಿಯ ಶಾಸಕ ಬಿ.ಆರ್.ಪಾಟೀಲ್ ಅವರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷರನ್ನಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಇಂದು ಯೋಜನೆ, ಕಾರ್ಯಕ್ರಮ ಯೋಜನೆ ಮತ್ತು ಸಾಂಖ್ಯಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಮಲ್ಲಿನಾಥ ಅಧಿಸೂಚನೆ ಹೊರಡಿಸಿದ್ದು, ಬಿ.ಆರ್.ಪಾಟೀಲ್ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ಹಾಗೂ ಎಲ್ಲಾ ಇತರೆ ಸೌಲಭ್ಯಗಳನ್ನು ನೀಡಿ ಆದೇಶ ಹೊರಡಿಸಲಾಗಿದೆ.
ಈ ಹಿಂದೆ ಬಿ.ಆರ್.ಪಾಟೀಲ್ ಅವರನ್ನು ಮುಖ್ಯಮಂತ್ರಿ ಸಲಹೆಗಾರನನ್ನಾಗಿ ನೇಮಕ ಮಾಡಲಾಗಿತ್ತು. ಆದರೆ ಅವರು ಇತ್ತೀಚೆಗೆ ಆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದರು. ರಾಜೀನಾಮೆ ನೀಡಿದ ಬಳಿಕ ರಾಜ್ಯ ಸರ್ಕಾರ ಹಾಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ತೀವ್ರ ಆಕ್ರೋಶ ಹೊರಹಾಕಿದ್ದ ಬಿ.ಆರ್.ಪಾಟೀಲ್, ನನ್ನ ಕ್ಷೇತ್ರಕ್ಕೆ ಅನುದಾನ ಸಿಗುತ್ತಿಲ್ಲ. ಅಧಿಕಾರಿಗಳು ಕೂಡ ಸರಿಯಾಗಿ ನನ್ನ ಮಾತನ್ನು ಕೇಳುತ್ತಿಲ್ಲ. ಆದ್ದರಿಂದ ನಾನು ರಾಜೀನಾಮೆ ನೀಡಿದ್ದೇನೆ ಎಂದು ಸರ್ಕಾರದ ಕಾರ್ಯವೈಖರಿಯ ವಿರುದ್ಧ ಆಕ್ರೋಶ ಹೊರಹಾಕಿದ್ದರು.





