ರಾಜ್ಯ

ಕರ್ನಾಟಕ ಬಜೆಟ್‌| ಗ್ರಾಮೀಣ, ರೈತ ವಿರೋಧಿ ಬಜೆಟ್: ಬಿ.ವೈ.ವಿಜಯೇಂದ್ರ

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು ಇಂದು ಮಂಡನೆ ಮಾಡಿರುವ ರಾಜ್ಯ ಬಜೆಟ್‌ ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದ್ದು, ಗ್ರಾಮೀಣ ಹಾಗೂ ರೈತ ವಿರೋಧಿ ಬಜೆಟ್ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆರೋಪಿಸಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಸರಣಿ ಪೋಸ್ಟ್‌ ಮಾಡಿರುವ ಅವರು, ವಿಶೇಷವಾಗಿ ಕೃಷಿ ವಲಯಕ್ಕೆ ಆದ್ಯತೆ ನೀಡುವ ನಿಟ್ಟಿನಲ್ಲಿ ರೈತರ ನಿರೀಕ್ಷೆಗಳನ್ನು ಸಂಪೂರ್ಣವಾಗಿ ಹುಸಿಗೊಳಿಸಿದೆ. ದಿನೇ ದಿನೇ ಗ್ರಾಮೀಣ ಪ್ರದೇಶಗಳಿಂದ ಗುಳೇ ಹೋಗುವ ಪರಿಸ್ಥಿತಿ ಉದ್ಭವಿಸಿರುವ ಹಿನ್ನೆಲೆಯಲ್ಲಿ, ಅದನ್ನು ತಡೆಯುವ ಯಾವುದೇ ಕಾರ್ಯಕ್ರಮವನ್ನೂ ಪ್ರಕಟಿಸಿಲ್ಲ. ಹಾಗಾಗಿ ಇದು ಗ್ರಾಮೀಣ ಹಾಗೂ ರೈತ ವಿರೋಧಿ ಬಜೆಟ್ ಆಗಿದೆ ಎಂದು ಕಿಡಿಕಾರಿದ್ದಾರೆ.

ಹಣಕಾಸು ಖಾತೆಯನ್ನು ಹೊತ್ತ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ರಾಜ್ಯದ ಜನತೆಯ ನಿರೀಕ್ಷೆಯನ್ನು ಹುಸಿ ಮಾಡಿದೆ. ನಿಖರ ಭರವಸೆ ನೀಡುವ ಯೋಜನೆ ಹಾಗೂ ಅದಕ್ಕೆ ಅನುದಾನ ಪ್ರಕಟಿಸದೆ ಆಕರ್ಷಕ ಕಾರ್ಯಕ್ರಮಗಳನ್ನು ಘೋಷಿಸೋ, ಜನರ ಮೂಗಿಗೆ ತುಪ್ಪ ಸವರಲು ಹೊರಟಿದ್ದಾರೆ ಲೇವಡಿ ಮಾಡಿದ್ದಾರೆ.

ಅಲ್ಪಸಂಖ್ಯಾತರ ಹೆಸರಿನಲ್ಲಿ ಮುಸ್ಲಿಂ ಸಮುದಾಯವನ್ನು ಓಲೈಸಲು ಒತ್ತು ನೀಡಿರುವ ಬಜೆಟ್ ಆಗಿದೆ. ಶಿಕ್ಷಣದ ಕ್ಷೇತ್ರದ ಸಮಗ್ರ ಅಭಿವೃದ್ಧಿ ಬಗ್ಗೆ ಯಾವುದೇ ಕೊಡುಗೆ ನೀಡಿಲ್ಲ. ಉದ್ಯೋಗ ಸೃಷ್ಟಿಗೆ ಅವಕಾಶವಿರುವ ಕೈಗಾರಿಕೆಗಳಿಗೆ ಉತ್ತೇಜನವೇ ಇಲ್ಲ. ಅಲ್ಲದೇ ಕೃಷಿಕರು, ಕಾರ್ಮಿಕರು, ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರು, NHM ನೌಕರರು ಸೇರಿದಂತೆ ಶ್ರಮಿಕ ವರ್ಗಗಳನ್ನು ಕಡೆಗಣಿಸಿ ಅಧಿಕಾರಕ್ಕೆ ಬರುವ ಮುನ್ನ ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದ ಯಾವುದೇ ಅಂಶಗಳನ್ನು ಬಜೆಟ್ ನಲ್ಲಿ ಕಾರ್ಯಗತಗೊಳಿಸಲು ಯಾವುದೇ ಹೊಸ ಭರವಸೆಯ ಹೆಜ್ಜೆ ಇಡದೇ ಕೊಟ್ಟ ಮಾತು ತಪ್ಪಿದ ಜನ ವಿರೋಧಿ ಬಜೆಟ್ ಅನ್ನು ಸಿದ್ದರಾಮಯ್ಯನವರು ಮಂಡಿಸಿದ್ದಾರೆ ಎಂದದು ಆರೋಪ ಮಾಡಿದ್ದಾರೆ.

ತಾವು ಘೋಷಿಸಿರುವ ಹೊಸ ಕಾರ್ಯಕ್ರಮಗಳಿಗೆ ಹಾಗೂ ಹದಗೆಟ್ಟಿರುವ ಆರ್ಥಿಕ ಪರಿಸ್ಥಿತಿಯನ್ನು ನಿರ್ವಹಿಸುವ ನಿಟ್ಟಿನಲ್ಲಿ ಜನರಿಗೆ ಹೊರೆಯಾಗದ ರೀತಿಯಲ್ಲಿ ಸಂಪನ್ಮೂಲ ಕ್ರೋಡೀಕರಣದ ಮೂಲಗಳನ್ನು ಸ್ಪಷ್ಟವಾಗಿ ಎಲ್ಲಿಯೂ ವಿವರಿಸಿಲ್ಲ, ಆ ಮೂಲಕ ಇದೊಂದು ತೋರಿಕೆಯ ಹಾಗೂ ಜನರ ಕಿವಿಗೆ ಹೂ ಮುಡಿಸುವ ಬಜೆಟ್ ಆಗಿದೆ ಎಂಬುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಟೀಕಿಸಿದ್ದಾರೆ.

ಬಜೆಟ್ ನಲ್ಲಿ ಘೋಷಿಸಿರುವ ಯೋಜನೆಗಳು ಕೇವಲ ಕಾಗದದಲ್ಲೇ ಉಳಿಯುವ ಸಾಧ್ಯತೆ ಗೋಚರವಾಗುತ್ತಿದೆ. ಹೇಳುವುದು ಒಂದು ಮಾಡುವುದು ಇನ್ನೊಂದು ಎಂಬಂತೆ ಈ ಬಜೆಟ್ ಆಗಬಾರದು, ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದವೆಲ್ಲವೂ ಘೋಷಣೆಯಾಗಿಯೇ ಉಳಿದಿದೆ, ಈ ಬಜೆಟ್ ಗೂ ಅದೇ ಗತಿ ಆಗುವ ಸಾಧ್ಯತೆಯೇ ಹೆಚ್ಚು ಎನ್ನುವುದು ರಾಜ್ಯದ ದಯನೀಯ ಆರ್ಥಿಕ ಪರಿಸ್ಥಿತಿ ಹೇಳುತ್ತಿದೆ. ಅಲ್ಲದೇ ತನ್ನ ತೆರಿಗೆ ಪಾಲನ್ನು ಪಡೆಯುವಲ್ಲಿ ಎಡವಿ ಬಿದ್ದಿರುವ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳು ಬಜೆಟ್ ನಲ್ಲಿ ಕೇಂದ್ರ ಸರ್ಕಾರದ ಮೇಲೆ ಆರೋಪ ಹೊರಿಸುವ ಅಂಶಗಳನ್ನು ಸೇರಿಸಿಕೊಂಡು ರಾಜ್ಯದ ಆರ್ಥಿಕ ಸ್ಥಿತಿಯ ನಿರ್ವಹಣೆಯ ವೈಫಲ್ಯವನ್ನು ಮುಚ್ಚಿಕೊಳ್ಳಲು ಹೊರಟಿದ್ದಾರೆ ಎಂದು ವ್ಯಂಗ್ಯ ಮಾಡಿದ್ದಾರೆ.

ಶಿಕ್ಷಣ ತರಬೇತಿ ಪಡೆದು ಉದ್ಯೋಗಕ್ಕಾಗಿ ಕಾದು ಕುಳಿತಿರುವ ಶಿಕ್ಷಕ ಸಮುದಾಯವನ್ನು ಸಂಪೂರ್ಣ ನಿರಾಸೆಗೊಳಿಸುವ ಮೂಲಕ ಶಿಕ್ಷಣ ಕ್ಷೇತ್ರವನ್ನು ಗಟ್ಟಿಗೊಳಿಸುವಲ್ಲಿ ತನ್ನ ನಿರಾಸಕ್ತಿಯನ್ನು ಮುಖ್ಯಮಂತ್ರಿ ಬಜೆಟ್ ಮೂಲಕ ತೋರಿಸಿದ್ದಾರೆ. ಕೆಳ ಮಧ್ಯಮ ವರ್ಗಗಳ ಅಭ್ಯುದಯ ಕೇಂದ್ರೀಕರಿಸುವ ಯಾವ ಯೋಜನೆಯೂ ಇಲ್ಲ. ವಸತಿ ಸಮಸ್ಯೆ ನೀಗಿಸಲು ಈ ಬಜೆಟ್ ನಲ್ಲಿ ಯಾವುದೇ ಯೋಜನೆ ಪ್ರಕಟಿಸಿಲ್ಲದಿರುವುದು ಈ ಸರ್ಕಾರ ಕೇವಲ ಬಡವರ ವಿರೋಧಿ ಅಷ್ಟೇ ಅಲ್ಲ, ಮಧ್ಯಮ ಹಾಗೂ ಕೆಳವರ್ಗಗಳ ವಿರೋಧಿ ಎನ್ನುವುದನ್ನು ಮುಖ್ಯಮಂತ್ರಿಗಳು ಬಜೆಟ್‌ನಲ್ಲಿ ತೋರಿಸಿದ್ದಾರೆ ಎಂದು ಹೇಳಿದ್ದಾರೆ.

ಪರಿಶಿಷ್ಟ, ಹಿಂದುಳಿದ ಹಾಗೂ ಅತಿ ಹಿಂದುಳಿದ ಸಮುದಾಯದವರ ಜಪ ಮಾಡಿ ರಾಜಕೀಯವಾಗಿ ಬೆಳೆದು ಬಂದ ಸಿದ್ದರಾಮಯ್ಯನವರು ಈ ಸಮುದಾಯಗಳ ಏಳಿಗೆಗೆ ಯಾವ ಯೋಜನೆಗಳನ್ನೂ ಪ್ರಕಟಿಸಿಲ್ಲ. ವಿವಿಧ ಹಿಂದುಳಿದ ವರ್ಗಗಳ ನಿಗಮಗಳಿಗೆ ಈ ಹಿಂದಿನ ಬಜೆಟ್ ನಲ್ಲಿ ಘೋಷಣೆಯಾದ ಪೂರ್ಣ ಪ್ರಮಾಣದ ಅನುದಾನವನ್ನೇ ಬಿಡುಗಡೆ ಮಾಡಿಲ್ಲ. ಕುಲಕಸುಬು ಆಧಾರಿತ ಸಮುದಾಯಗಳ ಬದುಕು ರಕ್ಷಿಸಲು ಯಾವುದೇ ಕಾರ್ಯಕ್ರಮಗಳನ್ನು ಕೊಡದೇ ಕೇವಲ ಅಧಿಕಾರಕ್ಕೆ ಬರಲು ಮಾತ್ರ ದಲಿತ, ಹಿಂದುಳಿದವರ ಜಪ ಎಂಬುದನ್ನು ಮತ್ತೊಮ್ಮೆ ಸಾಬೀತುಪಡಿಸಿದ್ದಾರೆ. ಅಭಿವೃದ್ಧಿಯಲ್ಲಿ ಹಿಂದುಳಿದ ಸಮುದಾಯಗಳ ಕಷ್ಟದ ತಾಪವನ್ನು ಕಡಿಮೆ ಮಾಡುವ ಯಾವುದೇ ಯೋಜನೆ ಪ್ರಕಟಿಸದೇ OBC ಸಮುದಾಯಗಳ ಹಿತಾಸಕ್ತಿಯನ್ನು ಪೂರ್ಣ ಕಡೆಗಣಿಸಲಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಸರ್ಕಾರಿ ಶಾಲೆಗಳ ಕಟ್ಟಡಗಳ ವಿಸ್ತರಣೆ ಹಾಗೂ ನವೀಕರಣಕ್ಕೆ ಬಜೆಟ್ ನಲ್ಲಿ ಯಾವುದೇ ಹಣ ನೀಡದೇ, ಕೇವಲ 5,000 ರೂ. ಪೂರ್ವ ಪ್ರಾಥಮಿಕ ತರಗತಿಗಳನ್ನು ಆರಂಭಿಸುವುದಾಗಿ ಘೋಷಿಸಿ ಗುಣಮಟ್ಟದ ಶಿಕ್ಷಣ ಹಾಗೂ ಮೂಲ ಸೌಕರ್ಯದತ್ತ ದೃಷ್ಟಿ ಹರಿಸದೆ ಕೈ ತೊಳೆದುಕೊಳ್ಳಲಾಗಿದೆ. ಸಾಂಸ್ಕೃತಿಕ ವಲಯ ಹಾಗೂ ಪ್ರವಾಸೋದ್ಯಮವನ್ನು ಬಹುವಾಗಿ ವಿಸ್ತರಿಸುವ ನಿರ್ದಿಷ್ಟವಾದ ಯೋಜನೆಗಳನ್ನು ಬಜೆಟ್ ನಲ್ಲಿ ಪ್ರಕಟಿಸದೇ ಈ ಕ್ಷೇತ್ರಗಳ ಬೆಳವಣಿಗೆ ಪ್ರೋತ್ಸಾಹ ನೀಡುವ ಪೊಳ್ಳು ಭರವಸೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಗುಂಡ್ಲುಪೇಟೆ: ಮನೆಯೊಳಗೆ ನುಗ್ಗಿದ್ದ ನಾಗರಹಾವಿನ ರಕ್ಷಣೆ

ಗುಂಡ್ಲುಪೇಟೆ: ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದ ಮನೆಯೊಳಗೆ ನುಗ್ಗಿದ್ದ ನಾಗರಹಾವನ್ನು ಉರಗಪ್ರೇಮಿ ಸ್ವಾಮಿ ಅವರು ಸುರಕ್ಷಿತವಾಗಿ ರಕ್ಷಿಸಿ ಅರಣ್ಯ ಪ್ರದೇಶಕ್ಕೆ ಬಿಟ್ಟಿದ್ದಾರೆ.…

37 mins ago

ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ

ಮಡಿಕೇರಿ: ತಾಲ್ಲೂಕಿನ ಕೆದಕಲ್ ಸಮೀಪದ ಕೋಟೆಕಾಡು ಪ್ರದೇಶದಲ್ಲಿ ಬೈಕ್ ಸವಾರನ ಮೇಲೆ ಕಾಡುಕೋಣ ದಾಳಿ ನಡೆಸಿದ ಘಟನೆ ನಡೆದಿದೆ. ಕಕ್ಕಬ್ಬೆ…

2 hours ago

ಹನೂರು: ಹುಚ್ಚು ನಾಯಿ ದಾಳಿಗೆ ಹಲವರು ಗಾಯ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಮಹದೇಶ್ವರಬೆಟ್ಟ ಮುಖ್ಯರಸ್ತೆಯ ಸಮೀಪ ಶನಿವಾರ ಬೆಳಿಗ್ಗೆ ಹುಚ್ಚು ನಾಯಿಯೊಂದು…

2 hours ago

ರೀಲ್ಸ್‌ಗಾಗಿ ಡ್ರಿಫ್ಟಿಂಗ್:‌ ಜಾನುವಾರುಗಳ ಮೇವನ್ನು ಮಣ್ಣುಪಾಲು ಮಾಡಿದ ಪ್ರವಾಸಿಗರು

ಹಾಸನ: ಜಿಲ್ಲೆಯ ಸಕಲೇಶಪುರ ಗವಿಬೆಟ್ಟದಲ್ಲಿ ಪ್ರವಾಸಿಗರು ರೀಲ್ಸ್‌ಗಾಗಿ ಥಾರ್‌ ಕಾರನ್ನು ಡ್ರಿಫ್ಟಿಂಗ್‌ ಮಾಡಿದ್ದಾರೆ. ಇದರಿಂದ ಜಾನುವಾರುಗಳ ಮೇವು ಹಾಗೂ ರಸ್ತೆಗೆ…

2 hours ago

ವಿಯೆಟ್ನಾಂ ದ್ವೀಪದಲ್ಲಿ 32 ಭಾರತೀಯ ಪ್ರವಾಸಿಗರಿದ್ದ ಬೋಟ್‌ ಮುಳುಗಡೆ: 15 ಮಂದಿ ಸಾವು

ಹನೋಯ್:‌ ವಿಯೆಟ್ನಾಂ ಫು ಕ್ವಾಕ್‌ ದ್ವೀಪದ ಬಳಿ 32 ಮಂದಿ ಭಾರತೀಯ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಸ್ಪೀಡ್‌ ಬೋಟ್‌ ಮುಳುಗಡೆಯಾಗಿದ್ದು, ಕನಿಷ್ಠ…

3 hours ago

ಬಡ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಗುಡ್‌ನ್ಯೂಸ್:‌ 39 ಅಗತ್ಯ ಔಷಧಿಗಳ ಬೆಲೆ ಇಳಿಕೆ

ನವದೆಹಲಿ: ಕೇಂದ್ರ ಸರ್ಕಾರ ಬಡ ರೋಗಿಗಳಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, 39 ಅಗತ್ಯ ಔಷಧಿಗಳ ಬೆಲೆ ಇಳಿಕೆ ಮಾಡಿ ಆದೇಶ ಹೊರಡಿಸಿದೆ.…

3 hours ago