ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರದ ಅಮಿಲಿನಲ್ಲಿದ್ದಾರೆ. ಪಂಚಮಸಾಲಿ ಲಿಂಗಾಯತ ಸಮುದಾಯ 2A ಮೀಸಲಾತಿಗಾಗಿ ಪ್ರತಿಭಟನೆ ನಡೆಸುತ್ತಿದ್ದರೆ, ಸಿಎಂ ಅಧಿಕಾರದ ಮದದಿಂದ ಮೆರೆಯುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಕಿಡಿಕಾರಿದ್ದಾರೆ.
ಸುವರ್ಣ ಸೌಧದ ಮುಂದೆ ಇರುವ ಡಾ.ಬಿ.ಆರ್.ಅಂಬೇಡ್ಕರ್ ಪ್ರತಿಮೆ ಬಳಿ ಪ್ರತಿಭಟನೆ ವೇಳೆ ಮಾತನಾಡಿದ ಅವರು, ಸ್ವಾಮೀಜಿ, ರೈತಾಪಿ ಜನತೆ ಹಾಗೂ ಲಿಂಗಾಯತ ಸಮುದಾಯದವರು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರು ಹೋರಾಟಗಾರರ ಮನವಿಗೆ ಸ್ಪಂದಿಸಬೇಕಿತ್ತು. ಆದರೆ ಅವರು ಕನಿಷ್ಠ ಸೌಜನ್ಯವನ್ನು ತೋರದೆ ಅಮಾಯಕರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಾರೆ. ಚನ್ನಮ್ಮನ ನಾಡಿನಲ್ಲಿ ಈ ತರಹದ ಘಟನೆ ನಡೆದಿರುವುದು ಖಂಡನೀಯ ಎಂದು ಕಿಡಿಕಾರಿದರು.
ಯಾವ ಉದ್ದೇಶದಿಂದ ಲಾಠಿ ಚಾರ್ಜ್ ನಡೆಯಿತು? ಸೊಕ್ಕಿನಿಂದ ವರ್ತಿಸಿದ ಪೊಲೀಸರ ಮೇಲೆ ಸೂಕ್ತ ಕ್ರಮ ತೆಗೆದುಕೊಳ್ಳಬೇಕು. ಇಲ್ಲದಿದ್ದರೆ ಸದನದಲ್ಲಿ ಈ ಬಗ್ಗೆ ನಾವು ಧ್ವನಿ ಎತ್ತುತ್ತೇನೆ ಎಂದು ಎಚ್ಚರಿಕೆ ನೀಡಿದರು.
136 ಶಾಸಕರು ಇರುವ ಕಾರಣ ನಮ್ಮ ಅಧಿಕಾರವನ್ನು ಯಾರ ಕೈಯಿಂದಲೂ ಅಲುಗಾಡಿಸಲು ಸಾಧ್ಯವಿಲ್ಲ. ಈ ಅಧಿಕಾರ ಶಾಶ್ವತ ಎಂಬ ಭ್ರಮೆಯಲ್ಲಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಇದೆ. ಮುಂದಿನ ದಿನದಲ್ಲಿ ಇದರ ಪರಣಾಮವನ್ನು ಸದನದಲ್ಲಿ ಎದುರಿಸಲು ಸಿದ್ಧರಾಗಿರಿ ಎಂದು ಆಕ್ರೋಶ ವ್ಯಕ್ತಪಡಿಸಿದರು.