ಬೆಂಗಳೂರು : ಅಪಾಯಕಾರಿ ನೀತಿಗಳ ಮೂಲಕ ಅಬಕಾರಿ ಆದಾಯದ ಮೂಲಕ್ಕೆ ಕೊಡಲಿ ಪೆಟ್ಟು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕರಾದ ಆರ್. ಅಶೋಕ್ ಆರೋಪಿಸಿದ್ದಾರೆ.
ಅವೈಜ್ಞಾನಿಕ ಆರ್ಥಿಕ ನೀತಿಗಳಿಂದ ದಿವಾಳಿ ಸ್ಥಿತಿ ತಲುಪಿರುವ ರಾಜ್ಯ ಸರ್ಕಾರ ಸಂಪನ್ಮೂಲ ಸಂಗ್ರಹಕ್ಕೆ ಅನುಸರಿಸುತ್ತಿರುವ ಮಾರ್ಗ ಉದ್ಯಮಕ್ಕೆ ಮಾರಕವಾಗಿದೆ ಎಂದು ಟೀಕಿಸಿದ್ದಾರೆ.
ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ದರ ಮತ್ತು ಸನ್ನದು ಶುಲ್ಕ ಏರಿಕೆಗೂ ಒಂದು ಮಾನದಂಡ ಇರುತ್ತದೆ. ಆದರೆ ಒಂದೇ ವರ್ಷದಲ್ಲಿ ಮದ್ಯ ಮಾರಾಟ ಮತ್ತು ಸನ್ನದು ಶುಲ್ಕವನ್ನು ಅಡ್ಡಾದಿಡ್ಡಿ ಹೆಚ್ಚಿಸುತ್ತಿರುವುದು ಉದ್ಯಮದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದ್ದಾರೆ.
ಎಷ್ಟು ಸಲ ಹೆಚ್ಚಳ : ಬಜೆಟ್ ನಲ್ಲಿ ಯಾವುದೇ ತೆರಿಗೆ ಹಾಕಿಲ್ಲ ಎಂದು ಬೆನ್ನು ತಟ್ಟಿಕೊಂಡು ನಂತರದಲ್ಲಿ ಆಲ್ಕೊಹಾಲ್ ದರಗಳನ್ನು ಯದ್ವಾತದ್ವಾ ಹೆಚ್ಚಿಸಿದ್ದಾರೆ. ಅದರಲ್ಲೂ ಬಿಯರ್ ದರವನ್ನು ವರ್ಷದಲ್ಲಿ ಎರಡೂ – ಮೂರು ಸಲ ಹೆಚ್ಚಿಸಲಾಗಿದೆ. ಗ್ರಾಹಕರಿಗೆ ದೊಡ್ಡ ಹೊರೆ ಹೊರಿಸಲಾಗಿದೆ. ಮದ್ಯಪ್ರಿಯರು ಪ್ರತಿಭಟಿಸುವುದಿಲ್ಲ ಎಂಬ ಕಾರಣಕ್ಕೆ ಇಂತಹ ಕ್ರಮ ಅನುಸರಿಸುವುದು ಒಳ್ಳೆಯದಲ್ಲ.
ಸರಿಯಾದ ಆರ್ಥಿಕ ಶಿಸ್ತು ಮತ್ತು ಸಿದ್ಧತೆಗಳಿಲ್ಲದೆ ಗ್ಯಾರೆಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಇದರಿಂದ ಅಭಿವೃದ್ಧಿ ಕಾರ್ಯಕ್ರಮಗಳು ಸ್ಥಗಿತ ಗೊಂಡಿವೆ. ಬೊಕ್ಕಸ ಬರಿದಾಗಿ ಸರ್ಕಾರ ದಿವಾಳಿಯಾಗಿದೆ.
ಇದನ್ನು ಹೇಗಾದರೂ ಸರಿಪಡಿಸಿಕೊಳ್ಳಲು ಹೆಣಗುತ್ತಿರುವ ಸರ್ಕಾರ, ಸಿಕ್ಕ ಸಿಕ್ಕ ಎಲ್ಲ ವಸ್ತುಗಳ ದರ ಹೆಚ್ಚಳ ಮಾಡಿದೆ. ಆದರೂ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಹೀಗಾಗಿ ಇಂತಹ ದರ ಮತ್ತು ಶುಲ್ಕ ಹೆಚ್ಚಳದಂತಹ ವಾಮ ಮಾರ್ಗಗಳ ಮೂಲಕ ಸರ್ಕಾರ ಉದ್ಯಮವನ್ನು ಶೋಷಣೆ ನಡೆಸುತ್ತಿದೆ ಎಂದು ಆರೋಪಿಸಿದ್ದಾರೆ.
ನೂರು ಪಟ್ಟು ಹೆಚ್ಚಳ: ಮದ್ಯ ಉತ್ಪಾದನೆ, ಬಾಟ್ಲಿಂಗ್, ಮಾರಾಟ ಮಳಿಗೆಗಳು ಸೇರಿ ಎಲ್ಲ ಸ್ವರೂಪದ ಶುಲ್ಕಗಳನ್ನು ಶೇಕಡಾ ನೂರರಷ್ಟು ಹೆಚ್ಚಳಕ್ಕೆ ಮುಂದಾಗಿದೆ. ಇದಕ್ಕಾಗಿ ಅಬಕಾರಿ ಕಾನೂನುಗಳಿಗೆ ತಿದ್ದುಪಡಿ ಮಾಡಿ ಕರಡು ನಿಯಮಗಳ ಅಧಿಸೂಚನೆಯನ್ನು ಪ್ರಕಟಿಸಿದೆ. ಜುಲೈ 1 ರಿಂದ ಪರಿಷ್ಕೃತ ದರಗಳು ಜಾರಿಗೊಳ್ಳಲಿವೆ. ಆ ಮೂಲಕ ಉದ್ಯಮದ ಅಂತ್ಯಕ್ಕೆ ಮೊಳೆ ಹೊಡೆದಂತಾಗಲಿದೆ ಎಂದಿದ್ದಾರೆ.
ಇಲಾಖೆಗೆ 40 ಸಾವಿರ ಕೋಟಿಯ ಗುರಿ ನಿಗದಿ ಮಾಡಲಾಗಿದೆ. ಇದನ್ನು ತಲುಪಲು ಅಧಿಕಾರಿಗಳು ಇದ್ದಬದ್ದ ಎಲ್ಲಾ ಅವಕಾಶಗಳನ್ನು ಬಳಕೆ ಮಾಡುತ್ತಿದ್ದಾರೆ. ಆ ಮೂಲಕ ಉದ್ಯಮವನ್ನು ಸಂಕಷ್ಟಕ್ಕೆ ದೂಡಲಾಗುತ್ತಿದೆ ಎಂದು ಟೀಕಿಸಿದ್ದಾರೆ.
ಈಗಲೂ ಕಾಲ ಮಿಂಚಿಲ್ಲ ಉದ್ಯಮದ ಹಿತದೃಷ್ಟಿಯಿಂದ ಈಗಲೂ ಕಾಲ ಮಿಂಚಿಲ್ಲ. ಸರ್ಕಾರ ಅವೈಜ್ಞಾನಿಕ ಕ್ರಮಗಳನ್ನು ಬಿಟ್ಟು ಉದ್ಯಮ, ಮಾರಾಟಗಾರರು ಮತ್ತು ಗ್ರಾಹಕರ ಹಿತದೃಷ್ಟಿಯಿಂದ ನಿರ್ಧಾರ ಕೈಗೊಳ್ಳಬೇಕು. ಸನ್ನದು ಶುಲ್ಕ ಪರಿಷ್ಕರಣೆಯನ್ನು ಮರು ಪರಿಶೀಲಿಸಬೇಕು ಎಂದು ಅಶೋಕ್ ಅವರು ಆಗ್ರಹಿಸಿದ್ದಾರೆ.
ಮೈಸೂರು: ಮೈಸೂರು ದಸರಾ ಮಹೋತ್ಸವದ ಯಶಸ್ವಿ ಆಯೋಜನೆಗಾಗಿ 17 ಉಪಸಮಿತಿಗಳನ್ನು ರಚಿಸಲಾಗಿದ್ದು, ಕಾರ್ಯಾಧ್ಯಕ್ಷರಿಗೆ ಜವಾಬ್ದಾರಿ ವಹಿಸಲಾಗಿದೆ ಎಂದು ನಗರಾಭಿವೃದ್ಧಿ ಸಚಿವರಾದ…
ದೇಶ ಆಳುವ ವರ್ಗದ ಏಕಚಕ್ರಾಧಿಪತ್ಯವನ್ನು ವಿರೋಧಿಸಿ ನಡೆದ ಚಳವಳಿ ಸರ್ಕಾರವನ್ನು ಮಂಡಿಯೂರುವಂತೆ ಮಾಡಿದೆ. ದೇಶಾದ್ಯಂತ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಸರ್ಕಾರ ಟೇಕಾಫ್ ಆಗಲು ಪೂರ್ಣ ಪ್ರಮಾಣದ ಸಚಿವ ಸಂಪುಟ ರಚನೆ ಅನಿವಾರ್ಯ ಕಳೆದ ವಾರ…
ಆನಂದ್ ಹೊಸೂರು ಚುಂಚನಕಟ್ಟೆ ಹೋಬಳಿಯಲ್ಲಿ ಭತ್ತ ಬೆಳೆಯುತ್ತಿದ್ದ ರೈತರಿಗೆ ಈಗ ಸಂಕಷ್ಟದ ಸ್ಥಿತಿ ಹೊಸೂರು: ಕಾವೇರಿ ನೀರು ಕುಡಿಯಲು ಮಾತ್ರ,…
ಮಹೇಂದ್ರ ಹಸಗೂಲಿ ಸಂಚಾರಕ್ಕೆ ಅಡಚಣೆ; ಬಿಎಸ್ಎನ್ಎಲ್ ಗುತ್ತಿಗೆದಾರರ ವಿರುದ್ಧ ಕ್ರಮಕ್ಕೆ ಸಾರ್ವಜನಿಕರ ಒತ್ತಾಯ ಗುಂಡ್ಲುಪೇಟೆ: ಬಿಎಸ್ಎನ್ಎಲ್ನಿಂದ ನೇಮಿಸಲ್ಪಟ್ಟಿರುವ ಗುತ್ತಿಗೆದಾರರು ಕೇಬಲ್…