ಬೆಳಗಾವಿ : ಬೆಳಗಾವಿ ಕಂಟೊನ್ಮೆಂಟ್ ಬೋರ್ಡ್ನ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ತಮ್ಮ ನಿವಾಸದಲ್ಲಿ ಶನಿವಾರ ಬೆಳಿಗ್ಗೆ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ತಮಿಳುನಾಡು ಮೂಲದ ಕೆ.ಆನಂದ್ (40 ವರ್ಷ) ಮೃತರಾಗಿದ್ದಾರೆ. ಕಳೆದ ಒಂದೂವರೆ ವರ್ಷದಿಂದ ಬೆಳಗಾವಿಯಲ್ಲಿ ಸಿಇಒ ಆಗಿ ನಿಯೋಜನೆಗೊಂಡಿದ್ದರು.
ಕೆ.ಆನಂದ್ ಬೆಳಗಾವಿಯ ಮನೆಯಲ್ಲಿ ಒಬ್ಬರೆ ವಾಸಿಸುತ್ತಿದ್ದರು. ಶನಿವಾರ ಬೆಳಿಗ್ಗೆಯಿಂದಲೂ ಮನೆ ಬಾಗಿಲು ತೆರೆಯದ ಕಾರಣ ಕ್ಯಾಂಪ್ ಪೊಲೀಸರಿಗೆ ಮಾಹಿತಿ ನೀಡಲಾಯಿತು. ಮಾಹಿತಿ ಪಡೆದ ಪೊಲೀಸರು ಮನೆಯ ಬಾಗಿಲನ್ನು ಒಡೆದಾಗ ಆನಂದ್ ಶವವಾಗಿ ಪತ್ತೆಯಾಗಿದ್ದಾರೆ.
ದೇಹದ ಮೇಲೆ ಯಾವುದೇ ಗಾಯದ ಗುರುತುಗಳು ಕಂಡು ಬಾರದ ಹಿನ್ನೆಲೆಯಲ್ಲಿ ಇದು ಆತ್ಮಹತ್ಯೆ ಇರಬಹುದೆಂದು ಪೊಲೀಸರು ಶಂಕಿಸಿದ್ದಾರೆ.
ಕಳೆದೆರೆಡು ದಿನಗಳಿಂದ ಆನಂದ್ ಕಚೇರಿಗೆ ಹೋಗುತ್ತಿರಲಿಲ್ಲ. ಇಂದು ಬೆಳಿಗ್ಗೆ ಬಾಗಿಲು ತೆಗೆಯದ ಕಾರಣ ಕದ ಒಡೆಯಲಾಯಿತು. ಬಾಗಿಲು ಒಡೆದು ನೋಡಿದಾಗ ಶವವಾಗಿ ಪತ್ತೆಯಾಗಿರುವುದು ಕಂಡುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ದಂಡು ಮಂಡಳಿಯ ನೇಮಕಾತಿಯಲ್ಲಿನ ಅಕ್ರಮ ಆರೋಪ ಹಿನ್ನೆಲೆಯಲ್ಲಿ ಸಿಬಿಐ ಅಧಿಕಾರಿಗಳು ದಂಡು ಮಂಡಳಿ ಕಚೇರಿ ಮೇಲೆ ದಾಳಿ ನಡೆಸಿದ್ದರು. ಈ ದಾಳಿಯ ಬೆನ್ನಲ್ಲೇ ಸಿಇಒ ಆನಂದ್ ಆತ್ಮಹತ್ಯೆ ಪ್ರಕರಣ ಚರ್ಚೆಗೆ ಗ್ರಾಸವಾಗಿದೆ.





