ರಾಜ್ಯ

ಬಿಡದಿ ರೈತರ ಹೋರಾಟ; ಡಿಸಿಎಂ ಡಿಕೆಶಿ ವಿರುದ್ಧ ಎಚ್.ಡಿ. ಕುಮಾರಸ್ವಾಮಿ ವಾಗ್ದಾಳಿ

ಹೊಸದಿಲ್ಲಿ : ಬಿಡದಿ ಟೌನ್ ಶಿಪ್ ದೇವೇಗೌಡರ ಪುತ್ರನ ಕೂಸು ಎಂದು ಸುಳ್ಳು ಪ್ರಚಾರ ನಡೆಸುತ್ತಿರುವ ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ಹರಿಹಾಯ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು; ಬಿಡದಿ ಟೌನ್ʼಶಿಪ್ ಗಾಗಿ ರೈತರ ಒಂದು ಇಂಚು ಭೂಮಿಯನ್ನು ಕಿತ್ತುಕೊಳ್ಳಲು ಬಿಡುವುದಿಲ್ಲ ಎಂದು ಗುಡುಗಿದರು.

ಟೌನ್ ಶಿಪ್ ವಿರೋಧಿಸಿ ಬಿಡದಿ ಭಾಗದ ರೈತರು ಭಾನುವಾರ ನಡೆಸಿದ ಬೃಹತ್ ಪ್ರತಿಭಟನೆಯನ್ನು ಉದ್ದೇಶಿಸಿ ನವದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಕೇಂದ್ರ ಸಚಿವರು ಮಾತನಾಡಿದರು.

ಬಡವರು, ರೈತರ ಭೂಮಿಯನ್ನು ಲೂಟಿ ಹೊಡೆಯುತ್ತಿರುವ ವ್ಯಕ್ತಿ ನನ್ನ ಬಗ್ಗೆ ಲಘವಾಗಿ ಮಾತನಾಡುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ನಾನು ಒಬ್ಬ ರೈತನಾಗಿ ಬಿಡದಿಯಲ್ಲಿ ಜೀವನ ಕಟ್ಟಿಕೊಂಡಿದ್ದೇನೆ. ಆತನಂತೆ ಕೊಳ್ಳೆ ಹೊಡೆದ ಬಡವರ ಭೂಮಿಯಲ್ಲಿ ಶಾಲೆ, ಕಾಲೇಜು, ಮುಗಿಲೆತ್ತರದ ಕಟ್ಟಡಗಳನ್ನು ಸೇರಿ ಕೋಟೆ ಕೊತ್ತಲಗಳನ್ನು ಕಟ್ಟಿಕೊಂಡಿಲ್ಲ ಎಂದು ಡಿಕೆಶಿ ವಿರುದ್ಧ ಕಿಡಿಕಾರಿದರು.

ಇದನ್ನೂ ಓದಿ:-ಮೈಸೂರು | ವೆಶ್ಯವಾಟಿಕೆಗೆ ಬಲಿಯಾಗುತ್ತಿದ್ದ ಬಾಲಕಿ ರಕ್ಷಣೆ; ಅಪ್ರಾಪ್ತೆ ಜೊತೆ ಲೈಂಗಿಕ ಸಂಪರ್ಕಕ್ಕೆ 20 ಲಕ್ಷ ಡಿಮ್ಯಾಂಡ್‌

ಬಡವರು, ದುರ್ಬಲರ ಭೂಮಿಯನ್ನು ದಬ್ಬಾಳಿಕೆ ಮಾಡಿ ಕಬಳಿಸಿರುವ ಡಿಕೆಶಿ ಜನ್ಮ ಜಾಲಾಡಿದ ಕುಮಾರಸ್ವಾಮಿ ಅವರು, ಕೆಲವು ಉದಾಹರಣೆಗಳು ಮತ್ತು ನೈಜ ಘಟನೆಗಳ ಸಮೇತ ರೈತರ ಗಮನಕ್ಕೆ ತಂದರು.

ಡಿಕೆಶಿ ವಿರುದ್ಧ ಗಂಭೀರ ಆರೋಪ ಮಾಡಿದ ಹೆಚ್ಡಿಕೆ
ಬಿಳ್ಳೆಕೆಂಪನಹಳ್ಳಿ ಗ್ರಾಮದ ಕೃಷ್ಣಮೂರ್ತಿ ಎಂಬ ವ್ಯಕ್ತಿ ಕರ್ನಾಟಕ ಹಣಕಾಸು ನಿಗಮ (KFC) ದಿಂದ ಸಾಲ ಪಡೆದು ಬೆಂಗಳೂರು-ಮೈಸೂರು ಮುಖ್ಯರಸ್ತೆಯಲ್ಲಿ ಹೋಟೆಲ್ ಮಾಡಿದ್ದರು. ಆ ಜಾಗವನ್ನು ದಬ್ಬಾಳಿಕೆಯಿಂದ ಖಾಲಿ ಮಾಡಿಸಿ, ಪುನಾ ಕಡಿಮೆ ಬೆಲೆಗೆ ಅದೇ ಜಾಗವನ್ನು ಖರೀದಿ ಮಾಡಿಸಿ ಅಲ್ಲೇ ಶಾಲಾ ಕಟ್ಟಡ ಕಟ್ಟಿಕೊಂಡಿದ್ದಾರೆ ಎಂದು ಡಿಸಿಎಂ ಡಿಕೆಶಿ ವಿರುದ್ಧ ಕೇಂದ್ರ ಸಚಿವರು ಗಂಭೀರ ಆರೋಪ ಮಾಡಿದರು.

ಇನ್ನೊಬ್ಬರು ರಾಮಸ್ವಾಮಿ ಅಂತ ಇದ್ದರು. ಅವರು ಭಾರತೀಯ ಸೇನೆಯಲ್ಲಿ ರಾಷ್ಟ್ರಸೇವೆ ಮಾಡಿ ಬಂದಿದ್ದರು. ಅವರು ತಮ್ಮ ಕಷ್ಟದ ಹಣದಿಂದ ಒಂದಿಷ್ಟು ಜಮೀನು ಖರೀದಿಸಿ ಬದುಕು ಕಟ್ಟಿಕೊಂಡಿದ್ದರು. ಆ ಭೂಮಿಯ ಮೇಲೆ ಡಿಕೆಶಿ ಕಾಕದೃಷ್ಟಿ ಬಿದ್ದಿತು. ಆ ಜಮೀನು ಬಿಟ್ಟುಕೊಡಿ ಎಂದು ಅವರಿಗೆ ಧಮ್ಕಿ ಹಾಕಿದ್ದರು. ಅವರು ಬಿಟ್ಟು ಕೊಡಲಿಲ್ಲ. ಕೊನೆಗೆ ಆ ಸೈನಿಕನ ಮಗಳನ್ನೇ ಕಿಡ್ನಾಪ್ ಮಾಡಿ ಆ ಜಮೀನನ್ನು ಬರೆಸಿಕೊಂಡಿದ್ದಾರೆ. ಇಂತಹ ನೀಚ ಕೆಲಸ ನಾವು ಮಾಡಿದ್ದೇವೆಯೇ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದರು.

ಬೆಂಗಳೂರು ಸುತ್ತಮುತ್ತ ನೈಸ್ ರಸ್ತೆ ಇದೆ. ಹೊಸಕೆರೆಹಳ್ಳಿ ಸುತ್ತಮುತ್ತ ಸಾರ್ವಜನಿಕರಿಂದ ಸ್ವಾಧೀನ ಮಾಡಿಕೊಂಡಿರುವ ಭೂಮಿಯನ್ನೂ ಡಿಕೆಶಿ ಕಬಳಿಸಿದ್ದಾರೆ. ಜತೆಗೆ, ಹಿಂದೆ ಎಸ್.ಎಂ. ಕೃಷ್ಣ ಮುಖ್ಯಮಂತ್ರಿ ಆಗಿದ್ದಾಗ ಇದೇ ಶಿವಕುಮಾರ್ ಸಚಿವರಾಗಿದ್ದರು. ಬೆಂಗಳೂರು-ಮೈಸೂರು ಎಕ್ಸ್‌ ಪ್ರೆಸ್‌ ರಸ್ತೆ ಮಾಡುತ್ತೇವೆ ಭಾರೀ ಪ್ರಮಾಣದಲ್ಲಿ ಭೂಮಿಯನ್ನು ಸ್ವಾಧೀನ ಮಾಡಿಕೊಂಡರು. ಅದಕ್ಕೊಂದು ಪ್ರಾಧಿಕಾರ ಮಾಡಿ ಅದಕ್ಕೆ ಇವರೇ ಅಧ್ಯಕ್ಷರಾದರು. ಇಪ್ಪತ್ತು ವರ್ಷದ ಮೇಲೆ ಆಯಿತು. ರಸ್ತೆ ನಿರ್ಮಾಣ ಮಾಡಿದರಾ? ಇಲ್ಲ.. ಆ ಭೂಮಿಯನ್ನು ನುಂಗಲು ಹೊರಟಿದ್ದಾರೆ. ಆದರೆ ಕೇವಲ ಎರಡು ಮೂರು ವರ್ಷದಲ್ಲಿ ಬೆಂಗಳೂರು-ಮೈಸೂರು ನೂತನ ಹೆದ್ದಾರಿ ನಿರ್ಮಾಣವಾಯಿತು. ನಾನು ಸಿಎಂ ಆಗಿದ್ದಾಗ ಅತ್ಯಂತ ಕ್ಷಿಪ್ರಗತಿಯಲ್ಲಿ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡಲಾಯಿತು ಎಂದು ಕುಮಾರಸ್ವಾಮಿ ಅವರು ಹೇಳಿದರು.

ಬಡವರ ಭೂಮಿಗೆ ಕನ್ನ ಹಾಕುವ ಇಂಥ ವ್ಯಕ್ತಿಗಳು ನಮ್ಮ ಮೇಲೆ ಆರೋಪ ಮಾಡುತ್ತಿದ್ದಾರೆ. ಇವರಿಗೆ ಹೋರಾಟದ ಮೂಲಕವೇ ಉತ್ತರ ಕೊಡುತ್ತೇವೆ. ಯಾರೂ ಹೆದರಬೇಕಿಲ್ಲ. ಟೌನ್ ಶಿಪ್ ಹೆಸರಿನಲ್ಲಿ ಆ ಭಾಗದ ಫಲವತ್ತಾದ ಭೂಮಿಯನ್ನು ಲೂಟಿ ಮಾಡಲು ಹೊರಟಿದ್ದಾರೆ. ಅದಕ್ಕೆ ಅವಕಾಶ ನೀಡುವುದಿಲ್ಲ. ಒಂದು ಇಂಚು ಜಮೀನನ್ನು ಬಿಟ್ಟುಕೊಡುವುದಿಲ್ಲ ಎಂದು ಎಂದು ರೈತರಿಗೆ ಧೈರ್ಯ ತುಂಬಿದರು ಕೇಂದ್ರ ಸಚಿವರು.

ಭೂಮಿಯನ್ನು ಬಿಟ್ಟುಕೊಡುವ ಪ್ರಶ್ನೆಯೇ ಇಲ್ಲ. ನಾನೂ ನಿಮ್ಮ ಹೋರಾಟಕ್ಕೆ ಬೆಂಬಲ ನೀಡುತ್ತೇನೆ. ಖುದ್ದಾಗಿ ನಾನೇ ಬಂದು ಹೋರಾಟದಲ್ಲಿ ಭಾಗವಹಿಸುತ್ತೇನೆ. ರೈತರಿಗಾಗಿ ನನ್ನ ಆರೋಗ್ಯದ ಹಂಗು ತೊರೆದು ಹೋರಾಡುತ್ತೇನೆ. ಯಾರು ಬಂದು ಸ್ವಾಧೀನ ಮಾಡಿಕೊಳ್ಳುತ್ತಾರೋ ನೋಡೋಣ ಎಂದು ಕುಮಾರಸ್ವಾಮಿ ಅವರು ರಾಜ್ಯ ಸರಕಾರಕ್ಕೆ ಸವಾಲು ಹಾಕಿದರು.

ಈ ದೇಶದಲ್ಲಿ ರೈತರ ಪರವಾಗಿ ಧ್ವನಿ ಎತ್ತಿದ ರಾಜಕಾರಣಿ ಎಂದರೇ ಅದು ದೇವೇಗೌಡರು. ನಾನು ಎಂದೂ ಹೀಗೆ ಭೂಮಿಯನ್ನು ಕಿತ್ತುಕೊಂಡು ಅಭಿವೃದ್ಧಿ ಮಾಡುತ್ತೇನೆ ಎಂದು ಸುಳ್ಳು ಹೇಳಲಿಲ್ಲ. ನಾನು ಅಂದು ಯೋಜನೆಗಾಗಿ ಭೂಮಿ ಸ್ವಾಧೀನ ಮಾಡಿಕೊಂಡಿರಲಿಲ್ಲ. 40% ಭೂಮಿಯನ್ನು ರೈತರಿಗೇ ಉಳಿಸಿಕೊಳ್ಳಲು ಅವಕಾಶ ನೀಡದ್ದೆ. ನನ್ನ ಜೀವನದ ಕೊನೆಯವರೆಗೂ ರೈತರಿಗೆ ಅನ್ಯಾಯ ಮಾಡಲ್ಲ ಎಂದು ಅವರು ಹೇಳಿದರು

ಬಿಡದಿ ಟೌನ್‌ ಶಿಪ್‌ ನೆಪದಲ್ಲಿ ಜನರಿಗೆ ಸುಳ್ಳು ಅಂಕಿಅಂಶ ಹೇಳುತ್ತಿದ್ದಾರೆ. ಡಿಕೆಶಿ ಜತೆ ಅಧಿಕಾರಿಗಳು ಕುಮ್ಮಕ್ಕಾಗಿ ಭೂಮಿಯನ್ನು ಲೂಟಿ ಮಾಡಲು ಹೊರಟಿದ್ದಾರೆ. ೯,೦೦೦ ಎಕರೆಯಲ್ಲಿ ೩,೦೦೦-೪,೦೦೦ ಎಕರೆಯಷ್ಟು ಸರಕಾರಿ ಭೂಮಿ ಇದೆ ಎಂದು ಸುಳ್ಳು ಹೇಳಿದ್ದರು. ಆದರೆ ಅಸಲಿಗೆ ಅಲ್ಲಿರುವ ಸರಕಾರಿ ಭೂಮಿ 700 ಎಕರೆ ಮಾತ್ರ ಎಂದು ತೋರಿಸುತ್ತಿದ್ದಾರೆ. ಟೌನ್ ಶಿಪ್ ಹೆಸರಲ್ಲಿ ಭೂಮಿ ಲೂಟಿ ಹೊಡೆಯಲು ಹೊರಟಿದ್ದಾರೆ ಅವರು ಆರೋಪಿಸಿದರು.

ಪೊಲೀಸರಿಗೆ ಎಚ್ಚರಿಕೆ ಕೊಟ್ಟ ಹೆಚ್ಡಿಕೆ
ಭೂಮಿ ಕೊಡಲು ನಿರಾಕರಿಸುತ್ತಿರುವ ರೈತರ ಮೇಲೆ ದಬ್ಬಾಳಿಕೆ ನಡೆಸುತ್ತಿರುವ ಅಧಿಕಾರಿಗಳು, ಅದರಲ್ಲಿಯೂ ಪೊಲೀಸ್‌ ಅಧಿಕಾರಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಕುಮಾರಸ್ವಾಮಿ ಅವರು; ನೀವು ತಪ್ಪು ಮಾಡುತ್ತಿದ್ದೀರಿ. ಮುಂದೆ ಅದರ ಫಲ ಅನುಭವಿಸಬೇಕಾಗುತ್ತದೆ. ನೀವು ಮಾಡಿರುವ ತಪ್ಪಿಗೆ ಜೈಲಿಗೂ ಹೋಗಬೇಕಾಗುತ್ತದೆ. ಈ ಸರಕಾರ ಇನ್ನು ಎರಡು ವರ್ಷ ಇರುತ್ತದೆ. ಆಮೇಲೆ ಏನಾಗುತ್ತದೆ ಎನ್ನುವುದು ನನಗೆ ಗೊತ್ತಿದೆ. ಯಾರೋ ಹೇಳುತ್ತಾರೆ ಎಂದು ಸುಖಾಸುಮ್ಮನೆ ರೈತರ ತಂಟೆಗೆ ಹೋಗಬೇಡಿ ಎಂದು ಎಚ್ಚರಿಕೆ ನೀಡಿದರು.

ರೈತರ ಮೇಲೆ ಅಧಿಕಾರಿಗಳು ದಬ್ಬಾಳಿಕೆ ಮಾಡುವುದನ್ನು ನಿಲ್ಲಿಸಬೇಕು. ನಾನು ಕಾಣದ ಅಧಿಕಾರಿಗಳ ನೀವು? ನಿಮ್ಮ ನಡವಳಿಕೆಗಳು ನನಗೆ ಗೊತ್ತಿದೆ. ರೈತರಿಗೆ, ಸ್ಥಳಿಯರಿಗೆ ರಕ್ಷಣೆ ನೀಡುವಲ್ಲಿ ಸಣ್ಣ ಲೋಪವಾದರೂ ನಾನೇ ಅಲ್ಲಿಗೆ ಬರುತ್ತೇನೆ. ಪೋಲಿಸ್ ಅಧಿಕಾರಿಗಳಿಗೆ ಅವರು ಎಚ್ಚರಿಕೆ ನೀಡಿದರು.

ಒಂದು ವೇಳೆ ಅಧಿಕಾರ ದರ್ಪದಿಂದ ನೀವೇನಾದರೂ ರೈತರಿಗೆ ತೊಂದರೆ ಕೊಟ್ಟರೇ ನಾನೇ ಖುದ್ದು ಬರುತ್ತೇನೆ. ನಿಮಗೆ ಮತ್ತೆ ಮತ್ತೆ ಎಚ್ಚರಿಕೆ ನೀಡುತ್ತೇನೆ. ಅಧಿಕಾರ ಯಾರಿಗೂ ಶಾಶ್ವತವಲ್ಲ. ಜೆಡಿಎಸ್ ಮುಗಿದು ಹೋಗುತ್ತದೆ ಎಂದು ನೀವು ಭಾವಿಸಿದ್ದರೆ ಅದು ಮೂರ್ಖತನ ಅಷ್ಟೇ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಹೇಳಿದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

10 hours ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

12 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

13 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

13 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

13 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

13 hours ago