ಚನ್ನಪಟ್ಟಣ: ಇಲ್ಲಿನ ಬಾಲಕರ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಪಕ್ಷದ ಮೂರನೇ ದಿನದ ಜನಾಂದೋಲನ ಸಮಾವೇಶದಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಮ್ಮ ಭಾಷಣದುದ್ದಕ್ಕೂ ಬಿಜೆಪಿ-ಜೆಡಿಎಸ್ ವಿರುದ್ದ ವಾಗ್ದಾಳಿ ನಡೆಸಿದರು.
ಜೆಡಿಎಸ್ ಮುಗಿಸುವುದಕ್ಕಾಗಿಯೇ ಬಿಜೆಪಿಯವರು ಮೈಸೂರಿನವರೆಗೆ ಪಾದಯಾತ್ರೆ ಮಾಡುತ್ತಿದ್ದಾರೆ. ಇದೆಲ್ಲಾ ತಿಳಿದಿರುವ ಕುಮಾರಸ್ವಾಮಿ ಅವರು ವಿಧಿ ಇಲ್ಲದೆ ಅವರೊಂದಿಗೆ ಕೈ ಜೋಡಿಸಿದ್ದಾರೆ ಎಂದು ಟೀಕಿಸಿದರು.
ಭ್ರಷ್ಟಾಚಾರದಿಂದಲೇ ಅಧಿಕಾರ ಕಳೆದುಕೊಂಡ ಬಿಜೆಪಿಯ ಜೊತೆ ಜೆಡಿಎಸ್ ಸೇರಿಕೊಂಡು ಕಾಂಗ್ರೆಸ್ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದೆ. ಜನಪರ ಕಾಂಗ್ರೆಸ್ ಸರ್ಕಾರದ ಮೇಲೆ ಹುಸಿ ಆರೋಪಗಳನ್ನು ಹೊರಿಸಿ ಅನೈತಿಕ ಪಾದಯಾತ್ರೆ ಮಾಡುತ್ತಿರುವುದು ಇಬ್ಬರಿಗೂ ನಾಚಿಕೆಗೇಡು ಎಂದು ವಾಗ್ದಾಳಿ ನಡೆಸಿದರು.
ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿಗಳು ಜನರ ಮನವನ್ನು ಗೆದ್ದಿರುವುದನ್ನ ಸಹಿಸದ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ರಾಜ್ಯಕ್ಕೆ ತಪ್ಪು ಸಂದೇಶ ನೀಡಲು ಹೊರಟಿವೆ. ಆದರೆ ಇಂದಿನ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ನಮಗೆ ದೊರೆತಿರುವ ಸಾರ್ವಜನಿಕರ ಅಭೂತಪೂರ್ವ ಬೆಂಬಲ ಬಿಜೆಪಿಗರ ನಿರೀಕ್ಷೆಯನ್ನು ಹುಸಿಯಾಗಿಸಿದೆ ಎಂದರು.





