Mysore
27
few clouds

Social Media

ಗುರುವಾರ, 16 ಜನವರಿ 2025
Light
Dark

ಕಾಂಗ್ರೆಸ್‌ ನಾಯಕರು ಕುರ್ಚಿ ಭದ್ರತೆಗಾಗಿ ಆಟ ಆಡ್ತಿದ್ದಾರೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ

ಬಾಗಲಕೋಟೆ: ರಾಜ್ಯ ಕಾಂಗ್ರೆಸ್‌ ನಾಯಕರು ಜನರ ಸಮಸ್ಯೆಗೆ ಸ್ಪಂದಿಸುವ ಬದಲು ತಮ್ಮ ತಮ್ಮ ಕುರ್ಚಿ ಭದ್ರತೆಗೆ ಆಟ ಆಡುತ್ತಿದ್ದಾರೆ ಎಂದು ಮಾಜಿ ಸಿಎಂ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆರೋಪ ಮಾಡಿದ್ದಾರೆ.

ಈ ಕುರಿತು ಬಾಗಲಕೋಟೆ ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದವರು ಔತಣಕೂಟನಾದರೂ ಮಾಡಲಿ, ಏನಾದರೂ ಮಾಡಿಕೊಳ್ಳಲಿ. ಅದು ಅವರ ಆಂತರಿಕ ವಿಚಾರ. ರಾಜ್ಯ ಆರ್ಥಿಕವಾಗಿ ಸಂಕಷ್ಟದಲ್ಲಿದೆ. ಕಾನೂನು ಸುವ್ಯವಸ್ಥೆ ಹಾಳಾಗಿರುವ ಜೊತೆಗೆ ದಲಿತರ ಮೇಲೆ ದೌರ್ಜನ್ಯ ಆಗುತ್ತಿದೆ. ವಿದ್ಯಾರ್ಥಿಗಳಿಗೆ ಸರಿಯಾದ ಶಿಷ್ಯ ವೇತನ ಸಿಗುತ್ತಿಲ್ಲ ಎಂದು ದೂರಿದರು.

ರಾಜ್ಯದಲ್ಲಿ ಅನ್ನದಾತರಿಗೆ ಪರಿಹಾರ ಸಿಗುತ್ತಿಲ್ಲ. ಬಾಣಂತಿಯರ ಸಾವು ಹೆಚ್ಚಾಗುತ್ತಿದೆ. ಆದರೆ ಕಾಂಗ್ರೆಸ್‌ ನಾಯಕರಿಗೆ ಇವೆಲ್ಲಾ ಬೇಕಿಲ್ಲ. ಬರೀ ರಾಜಕಾರಣವೇ ಮುಖ್ಯವಾಗಿದೆ. ಯಾರು ಮುಂದಿನ ದಿನಗಳಲ್ಲಿ ಸಿಎಂ ಆಗಬೇಕು ಎಂಬುದೇ ಚರ್ಚೆಯಾಗುತ್ತಿದೆ. ಎಲ್ಲರೂ ಕೂಡ ಕುರ್ಚಿಯ ಭದ್ರತೆಗಾಗಿ ಆಟ ಆಡುತ್ತಿದ್ದಾರೆ. ಇವರಿಗೆ ರಾಜ್ಯದ ಜನರ ಸಂಕಷ್ಟ ದೂರ ಮಾಡಲು ಸಾಧ್ಯವಾಗುತ್ತಿಲ್ಲ ಎಂದು ಕಿಡಿಕಾರಿದರು.

ಇನ್ನು ಮುಂದುವರಿದು ಮಾತನಾಡಿದ ಅವರು, ಕಾಂಗ್ರೆಸ್‌ ಪಕ್ಷದ ಶಾಸಕರು ಅಭಿವೃದ್ಧಿಗೆ ಅವಕಾಶ ಸಿಗುತ್ತಿಲ್ಲ ಎನ್ನುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ಉತ್ತರ ಕೊಡಲಿ. ರಾಜ್ಯದ ಆರ್ಥಿಕ ಸ್ಥಿತಿ ಸಂಪೂರ್ಣ ಹದಗೆಟ್ಟಿದೆ. ರಾಜ್ಯದಲ್ಲಿ ಅಭಿವೃದ್ಧಿ ಮಾಡಲು ಹಣವಿಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

Tags: