Mysore
18
overcast clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣ ಹಳ್ಳ ಹಿಡಿಯುತ್ತಿದೆ: ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿ

ಬೆಂಗಳೂರು: ಕಾಂಗ್ರೆಸ್‌ ಸಚಿವ ಪ್ರಿಯಾಂಕ್‌ ಖರ್ಗೆ ಅವರ ಕಮಿಷನ್‌ ಬೇಡಿಕೆಯಿಂದಾಗಿ ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌ ಪಾಂಚಾಳ್ ಪ್ರಕರಣ ಹಳ್ಳ ಹಿಡಿಯುತ್ತಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಕಿಡಿಕಾರಿದೆ.

ಈ ಬಗ್ಗೆ ಸಾಮಾಜಿಕ ಜಾಲತಾಣ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ರಾಜ್ಯ ಬಿಜೆಪಿಯು ಸಿಐಡಿ ತನಿಖೆಯಲ್ಲಿ ಖರ್ಗೆ ಕುಟುಂಬದ ಪ್ರಭಾವ ಎದ್ದು ಕಾಣುತ್ತಿದೆ. ಖರ್ಗೆ ಕುಟುಂಬದ ಹಸ್ತಕ್ಷೇಪದಿಂದಾಗಿಯೇ ಪ್ರಕರಣಕ್ಕೆ ಸಂಬಂಧಿಸಿದಂತೆ ಒಬ್ಬರನ್ನೂ ಬಂಧಿಸಿಲ್ಲ.

ಆತ್ಮಹತ್ಯೆ ಮಾಡಿಕೊಂಡ ಗುತ್ತಿಗೆದಾರ ಸಚಿನ್‌ ಪಾಂಚಾಳ್ ಬರೆದಿರುವ ಡೆತ್‌ನೋಟ್‌ನಲ್ಲಿ ಪ್ರಿಯಾಂಕ್‌ ಖರ್ಗೆ ಸೇರಿದಂತೆ ಪ್ರಿಯಾಂಕ್‌ ಖರ್ಗೆಯ 9 ಮಂದಿ ಅತ್ಯಾಪ್ತರ ಹೆಸರು ಉಲ್ಲೇಖಗೊಂಡಿದೆ. ಆದರೆ ಸಿಐಡಿ ತನಿಖೆ ಆರಂಭವಾಗಿ 13 ದಿನ ಕಳೆದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಕಾಣುತ್ತಿಲ್ಲ.

ಪ್ರಕರಣದಲ್ಲಿ ಕೇವಲ ಸಚಿವರ, ಸರ್ಕಾರದ ಪ್ರಭಾವವಲ್ಲದೆ, ಎಐಸಿಸಿ ಪ್ರಭಾವವೂ ಎದ್ದು ಕಾಣುತ್ತಿದೆ. ಕಾಂಗ್ರೆಸ್‌ ರಾಷ್ಟ್ರೀಯ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ತಮ್ಮ ಕುಟುಂಬ ಕೇಂದ್ರೀಕೃತವಾಗಿ ತನಿಖೆ ನಡೆಸದಂತೆ ತನಿಖೆಯ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದೆ.

ಆದಷ್ಟು ಬೇಗ ಆತ್ಮಹತ್ಯೆಗೆ ಶರಣಾಗಿರುವ ಗುತ್ತಿಗೆದಾರ ಸಚಿನ್‌ ಪಾಂಚಾಳ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆ ನಡೆಸಬೇಕು. ಸಚಿನ್‌ ಆತ್ಮಹತ್ಯೆಗೆ ಕಾರಣರಾದ ತಪ್ಪಿತಸ್ಥರನ್ನು ಬಂಧಿಸಬೇಕು ಎಂದು ಆಗ್ರಹಿಸಿದೆ.

Tags:
error: Content is protected !!