ಬೆಂಗಳೂರು: ಜನರ ರಕ್ಷಣೆಗೆ ಬರಬೇಕಾದ ರಾಜ್ಯ ಸರ್ಕಾರ ದೌರ್ಜನ್ಯ ಎಸಗುವ ಮೈಕ್ರೋ ಫೈನಾನ್ಸ್ ಸಂಸ್ಥೆಗಳಿಗೆ ಸಂಜೆ 5 ಗಂಟೆ ತನಕ ವಸೂಲಿಗೆ ಹೋಗಲು ಗ್ರೀನ್ ಸಿಗ್ನಲ್ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮೈಕ್ರೋ ಫೈನಾನ್ಸ್ ಸಿಬ್ಬಂದಿಗೆ ವಸೂಲಿ ಮಾಡಬಹುದು ಎಂಬ ಮಾತನ್ನು ರಾಜ್ಯ ಸರ್ಕಾರ ಹೇಳುತ್ತಿರುವುದು ದುರ್ದೈವದ ಸಂಗತಿ.
ಒಂದು ಕಡೆ ತಮ್ಮ ಗ್ಯಾರಂಟಿಗಳಿಂದ ರಾಜ್ಯದಲ್ಲಿ ಜನರು ಸಮೃದ್ಧರಾಗಿದ್ದಾರೆ ಎಂದು ಹೇಳಿಕೊಳ್ಳುತ್ತಾರೆ. ಮತ್ತೊಂದು ಕಡೆ ಮೈಕ್ರೋ ಫೈನಾನ್ಸ್ ಸಂಸ್ಥೆಗಳ ದೌರ್ಜನ್ಯ ಮತ್ತು ಭರಾಟೆಯಿಂದ ರಾಜ್ಯದಲ್ಲಿ ಬಡವರು, ಮಹಿಳೆಯರು, ಕೂಲಿ ಕಾರ್ಮಿಕರು ತತ್ತರಿಸಿ ಹೋಗಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಇಷ್ಟೆಲ್ಲಾ ಬೆಳವಣಿಗೆಗಳಾದರೂ ರಾಜ್ಯ ಸರ್ಕಾರ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಇನ್ನು ಮುಂದಾದರೂ ರಾಜ್ಯ ಸರ್ಕಾರ ದೌರ್ಜನ್ಯಕ್ಕೆ ಅವಕಾಶ ಕೊಡುವುದನ್ನು ಬದಿಗಿಟ್ಟು ಮುಗ್ಧ ಬಡಜನರ, ರೈತರ ರಕ್ಷಣೆಗೆ ಧಾವಿಸಬೇಕು ಎಂದು ಆಗ್ರಹಿಸಿದರು.





