ಬೆಂಗಳೂರು: ಮಕ್ಕಳ ಭವಿಷ್ಯ ರೂಪಿಸಬೇಕಾದ ರಾಜ್ಯ ಸರ್ಕಾರವು ಮಕ್ಕಳ ಭವಿಷ್ಯ ರೂಪಿಸುವ ಶಿಕ್ಷಕರ ಜೊತೆ ಚಲ್ಲಾಟ ಆಡುತ್ತಿದೆ. ಇದು ಅಕ್ಷಮ್ಯ ಅಪರಾಧ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಖಂಡಿಸಿದ್ದಾರೆ.
ಈ ಬಗ್ಗೆ ಬೆಂಗಳೂರಿನಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ವಿಶ್ವವಿದ್ಯಾಲಯಗಳಿಗೆ 300 ಕೋಟಿಯಿಂದ 400 ಕೋಟಿ ರೂ ಅನುದಾನ ನೀಡಬೇಕಿದೆ. ಆ ಅನುದಾನ ಕೊಡಲು ಸಾಧ್ಯವಾಗುತ್ತಿಲ್ಲ ಎಂಬ ಕಾರಣಕ್ಕಾಗಿ ಹಿಂದಿನ ಸರ್ಕಾರದ ಮೇಲೆ ಗೂಬೆ ಕೂರಿಸಿ ಆ ವಿವಿಗಳನ್ನು ಮುಚ್ಚಿಸಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಇನ್ನು ರಾಜ್ಯ ಸರ್ಕಾರವು ಅತಿಥಿ ಶಿಕ್ಷಕರ ವಿಚಾರದಲ್ಲಿ ಮಾನವೀಯತೆಯಿಂದ ನಡೆದುಕೊಳ್ಳಬೇಕಿತ್ತು ಎಂದು ತಿಳಿಸಿದ ಅವರು, ಅತಿಥಿ ಶಿಕ್ಷಕರ ಹೋರಾಟಕ್ಕೆ ನಮ್ಮ ಬೆಂಬಲ ಇದ್ದೇ ಇದೆ ಎಂದರು.
ಈ ಹಿಂದೆ 5 ಸಾವಿರ ಇದ್ದ ಗೌರವಧನವನ್ನು 2500ರೂ ಹೆಚ್ಚಿಸಿ, 7500 ಕೊಡುವ ಕೆಲಸವನ್ನು ಬಿಜೆಪಿ ಸರ್ಕಾರ ಮಾಡಿತ್ತು. ಬಳಿಕ ಅದನ್ನು 10 ಸಾವಿರಕ್ಕೆ ಬಿಜೆಪಿ ಸರ್ಕಾರ ಏರಿಸಿದ್ದನ್ನು ತಾವು ತಮ್ಮ ಕರಪತ್ರದಲ್ಲಿ ಪ್ರಸ್ತಾಪಿಸಿದ್ದೀರಿ. ಅತಿಥಿ ಶಿಕ್ಷಕರು ನಾಡಿನ ಭವಿಷ್ಯ ರೂಪಿಸುವ ಮಹತ್ವದ ಜವಾಬ್ದಾರಿ ನಿರ್ವಹಿಸುತ್ತಿದ್ದಾರೆ. ಕನಿಷ್ಠ ಬೇಡಿಕೆಗಳಿಗಾದರೂ ಸ್ಪಂದಿಸುವುದು ಸರ್ಕಾರದ ಕರ್ತವ್ಯ ಎಂದು ನುಡಿದರು.




