ಬೆಂಗಳೂರು: ಕಾವೇರಿ ಆರತಿ ನಡೆಸುವ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ಹಂತದಲ್ಲಿದ್ದು, ನ್ಯಾಯಾಲಯದಿಂದ ಇತ್ಯರ್ಥವಾದ ನಂತರ ನಾವು ಕಾವೇರಿ ಆರತಿ ಪ್ರಕ್ರಿಯೆಯನ್ನು ಪ್ರಾರಂಭಿಸುತ್ತೇವೆ ಎಂದು ಕೃಷಿ ಸಚಿವ ಚೆಲುವರಾಯಸ್ವಾಮಿ ತಿಳಿಸಿದ್ದಾರೆ.
ಈ ಕುರಿತು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗಂಗಾರತಿ ಮಾದರಿಯಲ್ಲಿ ಕಾವೇರಿ ಆರತಿ ಮಾಡಲು ಉದ್ದೇಶಿಸಲಾಗಿದೆ. ಈ ವಿಚಾರ ನ್ಯಾಯಾಲಯದಲ್ಲಿ ವಿಚಾರಣೆ ನಡೆಯುತ್ತಿದ್ದು, ಅದು ಮುಗಿದ ಬಳಿಕ ನಾವು ಸೂಕ್ತ ತೀರ್ಮಾನ ಮಾಡುತ್ತೇವೆ ಎಂದರು.
ಇನ್ನು ರಾಜ್ಯ ಸರ್ಕಾರ ಜಾರಿಗೆ ತಂದ ಗ್ಯಾರಂಟಿ ಯೋಜನೆಗಳನ್ನು ಬಿಜೆಪಿಯವರು ವಿರೋಧಿಸಿದರು. ಆದರೆ ದೆಹಲಿಯಲ್ಲಿ ಅವರೇ ಜಾರಿಗೆ ತಂದರು. ಬಿಜೆಪಿಯವರು ಹೇಳಿದಂತೆ ನಡೆದುಕೊಂಡಿಲ್ಲ. ಗ್ಯಾರಂಟಿ ಯೋಜನೆಗಳು ಜನರಿಗೆ ತುಂಬಾ ಅನುಕೂಲವಾಗಿವೆ. ಈಗ ಬಿಹಾರ ರಾಜ್ಯದಲ್ಲೂ ಗ್ಯಾರಂಟಿಯನ್ನು ಘೋಷಣೆ ಮಾಡಿದ್ದಾರೆ ಎಂದು ಬಿಜೆಪಿ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಮುಂದುವರಿದು ಮಾತನಾಡಿದ ಅವರು, ರಾಜ್ಯವನ್ನು ಅಭಿವೃದ್ಧಿಯತ್ತ ಕೊಂಡೊಯ್ಯಲಾಗುತ್ತಿದ್ದು, ಬಿಜೆಪಿಯವರ ಗ್ಯಾರಂಟಿಗಳಿಗೆ ನಮ್ಮ ವಿರೋಧವೇನೂ ಇಲ್ಲ. ಅವರು ಕೂಡ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತಂದು ಜನರಿಗೆ ಒಳ್ಳೆಯದನ್ನು ಮಾಡಲಿ ಎಂದರು.





