ರಾಜ್ಯ

ನೀಟ್ ಪರೀಕ್ಷಾ ಅಕ್ರಮದ ಬಗ್ಗೆ ತನಿಖೆಯಾಗಲಿ: ಸಿದ್ದರಾಮಯ್ಯ

ಬೆಂಗಳೂರು: ನೀಟ್‌ ಫಲಿತಾಂಶದಲ್ಲಿ ಭಾರಿ ಅಕ್ರಮದ ನಡೆದಿರಬಹುದಾದ ಶಂಕೆ ದೇಶಾದ್ಯಂತ ವ್ಯಕ್ತವಾಗುತ್ತಿದ್ದು, ಪರೀಕ್ಷೆ ಬರೆದಿರುವ 24 ಲಕ್ಷ ಯುವಜನರು, ಅವರ ಪೋಷಕರಲ್ಲಿ ಮೂಡಿರುವ ಆತಂಕಕ್ಕೆ, ಪರೀಕ್ಷೆಯ ವಿಶ್ವಾಸಾರ್ಹತೆ ಬಗ್ಗೆ ಎದ್ದಿರುವ ಪ್ರಶ್ನೆಗಳಿಗೆ ಎನ್‌ಟಿಎ ಆಗಲಿ, ಕೇಂದ್ರದ ನರೇಂದ್ರ ಮೋದಿಯವರ ಸರ್ಕಾರವಾಗಲೀ ಉತ್ತರಿಸದೆ ಲಕ್ಷಾಂತರ ಯುವಜನರ ಭವಿಷ್ಯವನ್ನು ಮಣ್ಣುಪಾಲು ಮಾಡಲು ಹೊರಟಿದೆ. ಈ ನೀಟ್‌ ಪರೀಕ್ಷಾ ಕ್ರಮದ ಬಗ್ಗೆ ತನಿಖೆಯಾಗಬೇಕು ಎಂದು ಸಿಎಂ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ನೀಟ್ ಪರೀಕ್ಷೆಯಲ್ಲಿ 67 ಅಭ್ಯರ್ಥಿಗಳಿಗೆ 720ಕ್ಕೆ 720 ಅಂಕಗಳು ಬಂದಿವೆ. ಅಂದರೆ 100% ಅಂಕಗಳು‌ ಬಂದಿದೆ. ಆದರೆ ಈ ಹಿಂದೆ ಬಂದ ಟಾಪರ್‍‌ಗಳ ಸಂಖ್ಯೆ ಎಷ್ಟು? ಎಂಬುದನ್ನು ಹೋಲಿಕೆ ಮಾಡಿ ನೋಡಿದರೆ ಈ ಬಾರಿಯ ಫಲಿತಾಂಶದಲ್ಲಿ ಅಕ್ರಮದ ವಾಸನೆ ಬಡಿಯುತ್ತದೆ.

2019ರಲ್ಲಿ ಒಬ್ಬ ವಿದ್ಯಾರ್ಥಿ, 2020ರಲ್ಲಿ ಒಬ್ಬ, 2021ರಲ್ಲಿ ಮೂವರು, 2022ರಲ್ಲಿ ಒಬ್ಬ, 2023ರಲ್ಲಿ ಇಬ್ಬರು ವಿದ್ಯಾರ್ಥಿಗಳು ನೂರಕ್ಕೆ ನೂರು ಪ್ರತಿಶತ ಅಂಕ ಪಡೆದಿದ್ದರೆ ಈ ವರ್ಷ – 67 ವಿದ್ಯಾರ್ಥಿಗಳು ಟಾಪರ್‍ಗಳಾಗಿ ಹೊರಹೊಮ್ಮಿದ್ದಾರೆ.

ನೀಟ್‌ ಪರೀಕ್ಷೆಯಲ್ಲಿ ಪ್ರತಿ ತಪ್ಪು ಉತ್ತರಕ್ಕೆ ಋಣಾತ್ಮಕ ಅಂಕಗಳಿರುವ ಕಾರಣ ಇಷ್ಟೊಂದು ಮಂದಿ ನೂರು ಪ್ರತಿಶತ ಅಂಕ ಗಳಿಸುವುದು ಅಸಾಧ್ಯ ಎನ್ನಿಸುತ್ತದೆ. ಇದು ಕಾಕತಾಳೀಯವೋ ಅಥವಾ ಹೊಸ ಪ್ರಯೋಗವೋ? ಇದನ್ನು ಮೋದಿ ಸರ್ಕಾರವೇ ಸ್ಪಷ್ಟಪಡಿಸಬೇಕು.

ನೀಟ್‌ನ 67 ಟಾಪರ್‌ಗಳಲ್ಲಿ 44 ಮಂದಿ ‘ಗ್ರೇಸ್‌ಮಾರ್ಕ್‌’ ಆಧಾರದ ಮೇಲೆ ಟಾಪರ್‌ಗಳಾಗಿದ್ದಾರೆ. ಗ್ರೇಸ್ ಅಂಕಗಳ ಆಧಾರದ ಮೇಲೆ ಇಷ್ಟೊಂದು ಪರೀಕ್ಷಾರ್ಥಿಗಳು ಟಾಪರ್‌ಗಳಾದಾಗ, “ಮಾರ್ಕಿಂಗ್ ಪ್ರಕ್ರಿಯೆ” ಮತ್ತು “ಪರೀಕ್ಷಾ ವ್ಯವಸ್ಥೆಯ ವಿಶ್ವಾಸಾರ್ಹತೆ ಮತ್ತು ಸಿಂಧುತ್ವ”ದ ಮೇಲೆ ಪ್ರಶ್ನೆ ಹುಟ್ಟುಹಾಕುವುದಿಲ್ಲವೆ?

ಇನ್ನೊಂದು ಅಚ್ಚರಿಯ ವಿಷಯವೇನೆಂದರೆ 62 ರಿಂದ 69 ರವರೆಗಿನ ಸರಣಿ ಸಂಖ್ಯೆಗಳೊಂದಿಗೆ ನೀಟ್‌ ಟಾಪರ್‌ಗಳು ಹರಿಯಾಣದ ಫರಿದಾಬಾದ್‌ನಲ್ಲಿರುವ ಒಂದೇ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದವರು. ಈ ಪೈಕಿ 6 ಜನರು 720/720 ಅಂಕಗಳೊಂದಿಗೆ ನೀಟ್‌ನಲ್ಲಿ ಅಗ್ರಸ್ಥಾನದಲ್ಲಿದ್ದಾರೆ ಮತ್ತು 718 ಮತ್ತು 719 ಅಂಕಗಳನ್ನು 2 ಮಂದಿ ಪಡೆದಿದ್ದಾರೆ.

ಮೇಲ್ನೋಟಕ್ಕೆ ಪರೀಕ್ಷಾ ಅಕ್ರಮ ನಡೆದಿರುವುದು ಕಂಡುಬಂದರೂ ಎನ್‌ಟಿಎ ಮತ್ತು ಮೋದಿ ಸರ್ಕಾರ ಈ ಫಲಿತಾಂಶವನ್ನು ಸಮರ್ಥಿಸುತ್ತಿದೆ. ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡಲು ಹೊರಟಿರುವ ಕೇಂದ್ರ ಬಿಜೆಪಿ ಸರ್ಕಾರವು ಚುನಾವಣಾ ಸೋಲಿನಿಂದಲೂ ಪಾಠ ಕಲಿತಂತೆ ಕಾಣುತ್ತಿಲ್ಲ.

ಫರಿದಾಬಾದ್‌ನ ನೀಟ್‌ ಪರೀಕ್ಷಾ ಕೇಂದ್ರದಲ್ಲಿ ತಪ್ಪು ಪತ್ರಿಕೆಯನ್ನು ವಿತರಿಸಲಾಗಿತ್ತು. ಇದರಿಂದಾಗಿ ಅಭ್ಯರ್ಥಿಗಳು 45 ನಿಮಿಷಗಳನ್ನು ಕಳೆದುಕೊಳ್ಳವಂತಾಯಿತು. ಹಾಗಾಗಿ ಈ ಸಮಯಕ್ಕೆ ಪ್ರತಿಯಾಗಿ ಎನ್‌ಟಿಎ ಈ ಕೇಂದ್ರದ ಅಭ್ಯರ್ಥಿಗಳಿಗೆ ‘ಗ್ರೇಸ್‌ಮಾರ್ಕ್‌’ ನೀಡಿದೆ. ಇದು ನೂರು ಪ್ರತಿಶತ ಅಂಕ ಗಳಿಕೆಗೆ ಕಾರಣ ಎಂದು ಕೇಂದ್ರ ಸರ್ಕಾರ ಸಮಜಾಯಿಷಿ ನೀಡುತ್ತಿದೆ.

“ಎನ್‌ಟಿಎ ಪ್ರಾಸ್ಪೆಕ್ಟಸ್”, “ನೀಟ್ ಬ್ರೋಷರ್” ಮತ್ತು “ಸರ್ಕಾರಿ ಸೂಚನೆಗಳಲ್ಲಿ” ಈ ರೀತಿಯಲ್ಲಿ ಗ್ರೇಸ್ ಅಂಕಗಳನ್ನು ನೀಡುವ ಅವಕಾಶ ಇರುವ ಕುರಿತು ಯಾವುದೇ ಮಾಹಿತಿ ಇಲ್ಲ. ಹಾಗಾದರೆ ಈ ಗ್ರೇಸ್ ಮಾರ್ಕ್‌ಗಳನ್ನು ಯಾವ ಆಧಾರದ ಮೇಲೆ ನೀಡಲಾಗಿದೆ? ಈ ಬಗ್ಗೆ ಮೋದಿ ಸರ್ಕಾರದಿಂದ ಸಾರ್ವಜನಿಕ ಸೂಚನೆ ಅಥವಾ ಜಾಹೀರಾತು ನೀಡಲಾಗಿದೆಯೇ? ಬೇರೆ ಯಾವುದಾದರೂ ಕೇಂದ್ರದಲ್ಲಿ ಇದೇ ರೀತಿ ಗ್ರೇಸ್ ಮಾರ್ಕ್ಸ್ ನೀಡಲಾಗಿದೆಯೇ? ಎಂಬಿತ್ಯಾದಿ ಮಾಹಿತಿಯನ್ನು ಆತಂಕದಲ್ಲಿರುವ ವಿದ್ಯಾರ್ಥಿಗಳಿಗೆ ಮತ್ತು ಅವರ ಪೋಷಕರಿಗೆ ನೀಡಬೇಕು.

2019 ರಿಂದ 2023 ರವರೆಗೆ, ನೀಟ್‌ ಪರೀಕ್ಷೆಯಲ್ಲಿ 600 ಅಂಕಗಳನ್ನು ಗಳಿಸಿದವರು ಕೈಗೆಟುಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸುಲಭವಾಗಿ ಪ್ರವೇಶ ಪಡೆದಿದ್ದರು. ಈ ವರ್ಷ ನೀಟ್ ಪರೀಕ್ಷೆಯ ಅಂಕಮಿತಿಯು 137 ಅಂಕಗಳಿಂದ 164 ಕ್ಕೆ ಏರಿಕೆಯಾಗಿದೆ. ಈ ಬಾರಿ 660 ಅಂಕ ಗಳಿಸಿದ ಅಭ್ಯರ್ಥಿಗಳು ಮಾತ್ರ ಕೈಗೆಟಕುವ ಶುಲ್ಕದಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಪ್ರವೇಶ ಪಡೆಯಬಹುದು.

ನೀಟ್ ಪರೀಕ್ಷೆಗೆ ಹಾಜರಾಗಿರುವ 24 ಲಕ್ಷಕ್ಕೂ ಹೆಚ್ಚು ಯುವಕರು ಬಹುತೇಕ ಬಡ-ಮಧ್ಯಮ ವರ್ಗದ ಕುಟುಂಬಗಳಿಂದ ಬಂದವರು. ವೈದ್ಯರಾಗುವ ಹಂಬಲ ಹೊಂದಿದವರು. ಆದರೆ ಈ ಪರೀಕ್ಷಾ ಗೊಂದಲದಿಂದಾಗಿ ಲಕ್ಷಾಂತರ ಯುವಕರ ಕನಸುಗಳು ನುಚ್ಚುನೂರಾಗಿದೆ.

ನಿಗದಿತ ವೇಳಾಪಟ್ಟಿಯಂತೆ ನೀಟ್ ಪರೀಕ್ಷೆಯನ್ನು ಮೇ 5, 2024 ರಂದು ನಡೆಸಲಾಯಿತು ಮತ್ತು ಅದರ ಫಲಿತಾಂಶವನ್ನು ಜೂನ್ 14, 2024 ರಂದು ಪ್ರಕಟವಾಗಬೇಕಿತ್ತು. ಆದರೆ ಇದ್ದಕ್ಕಿದ್ದಂತೆ ಫಲಿತಾಂಶವನ್ನು ಜೂನ್ 4, 2024 ರಂದು ಪ್ರಕಟಿಸಲಾಯಿತು. ಇದೇ ದಿನ ದೇಶದ ಸಂಸತ್ ಚುನಾವಣೆಯ ಫಲಿತಾಂಶ ಬಂದಿದ್ದು, ಇಡೀ ದೇಶವೇ ಲೋಕಸಭೆ ಚುನಾವಣೆಯ ಫಲಿತಾಂಶವನ್ನು ಕೇಳುವುದರಲ್ಲಿ ನಿರತವಾಗಿತ್ತು. ಈ ಗದ್ದಲದಲ್ಲಿ ನೀಟ್‌ ಫಲಿತಾಂಶವನ್ನು ತರಾತುರಿಯಲ್ಲಿ ಬಿಡುಗಡೆ ಮಾಡಿದ್ದು, ಪರೀಕ್ಷೆಯ ಅಕ್ರಮಗಳನ್ನು ಮುಚ್ಚಿಹಾಕಬಹುದು ಎಂಬ ಕಾರಣಕ್ಕಾಗಿಯೇ? ಅಲ್ಲದಿದ್ದರೆ ತರಾತುರಿಯಲ್ಲಿ ಫಲಿತಾಂಶ ಬಿಡುಗಡೆ ಮಾಡಿದ್ದು ಯಾಕೆ?

ಕೇಂದ್ರ ಸರ್ಕಾರ ಮತ್ತು ಎನ್‌ಟಿಎ ಮಾಡಿರುವ ಯಡವಟ್ಟಿನಿಂದಾಗಿ ನೀಟ್ ಫಲಿತಾಂಶ ಪ್ರಕಟವಾದ ನಂತರ ದೌಸಾದಲ್ಲಿ ಅಜಿತ್ ಎಂಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮಧ್ಯಪ್ರದೇಶದ ರೇವಾ ಯುವತಿ ಬಗೀಶಾ ತಿವಾರಿ ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಬರೀ ವಿವಾದಗಳಿಂದಲೇ ತುಂಬಿರುವ ಮತ್ತು ಯುವಜನರು ಆತ್ಮಹತ್ಯೆಗೆ ಶರಣಾಗುವಂತೆ ಮಾಡಿರುವ ಎನ್‌ಟಿಎಯ ನೀಟ್ ಪರೀಕ್ಷಾ ವ್ಯವಸ್ಥೆ ನಿಜಕ್ಕೂ ಎಂತಹದ್ದು ಎಂಬ ಪ್ರಶ್ನೆ ಕಾಡಲಾರಂಭಿಸಿದೆ. ನರೇಂದ್ರ ಮೋದಿಯವರ ಸರ್ಕಾರ ರಚನೆ ಮತ್ತು ಸಂಸದರ ಖರೀದಿಯ ಕಸರತ್ತು ಮುಗಿದಿದ್ದರೆ ಮತ್ತಷ್ಟು ಯುವಜನರು ಪ್ರಾಣ ಕಳೆದುಕೊಳ್ಳುವ ಮುನ್ನ ಪರೀಕ್ಷಾ ಅಕ್ರಮದ ಬಗ್ಗೆ ಸೂಕ್ತ ತನಿಖೆ ನಡೆಸಬೇಕು ಮತ್ತು ನೊಂದ ಪರೀಕ್ಷಾರ್ಥಿಗಳ ಅಹವಾಲು ಆಲಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರ ಸರ್ಕಾರಕ್ಕೆ ತಿವಿದಿದ್ದಾರೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ನೂತನ ಸಚಿವರಿಗೆ ಖಾತೆ ಹಂಚಿಕೆ : ಯಾರಿಗೆ ಯಾವ ಹೊಣೆ? ಇಲ್ಲಿದೆ ಮಾಹಿತಿ

ಬೆಂಗಳೂರು : ಹಲವು ಸುತ್ತಿನ ಸಭೆಯ ಬಳಿಕ ಡಿ.ಕೆ.ಶಿವಕುಮಾರ್ ಸಚಿವ ಸಂಪುಟದ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ…

8 hours ago

ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ ಸಾಗಾಟ : ಇಬ್ಬರ ಬಂಧನ

ಗುಂಡ್ಲುಪೇಟೆ : ಬೆಂಗಳೂರಿನಿಂದ ಕೇರಳಕ್ಕೆ ಎಂಡಿಎಂಎ (MDMA) ಮಾದಕವಸ್ತು ಸಾಗಿಸುತ್ತಿದ್ದ ಆರೋಪದ ಮೇರೆಗೆ ಮುತ್ತಂಗ ಚೆಕ್‌ಪೋಸ್ಟ್‌ನಲ್ಲಿ ಇಬ್ಬರನ್ನು ಕೇರಳದ ಪೊಲೀಸರು…

10 hours ago

ಮಾನವ ಕಲಿಯಬೇಕಾದ ಬದುಕಿನ ಪಾಠಗಳು

ಶ್ರೇಯಸ್ ದೇವನೂರು ಇಂದು ವಿಶ್ವ ಆನೆ ದಿನಾಚರಣೆ  ಭೂಮಿಯ ಮೇಲಿರುವ ಜೀವಿಗಳಲ್ಲಿ ಆನೆ, ಅತಿ ದೊಡ್ಡ ಪ್ರಾಣಿ ಮಾತ್ರವಲ್ಲ ,…

18 hours ago

ಸಾವಿರಾರು ಹೆರಿಗೆ ಮಾಡಿಸಿದ ಫ್ಲಾರೆನ್ಸ್ ನೈಟಿಂಗೇಲ್ ಗೀತಾ ‘ಮಾ’

ಪಂಜುಗಂಗೊಳ್ಳಿ ಅವರ ವಾರದ ಅಂಕಣ  ಕಡು ಬಡತನದ ಕುಟುಂಬದಿಂದ ಬಂದ ಶುಶ್ರೂಷಕಿ ಪ. ಬಂಗಾಳದ ಗೀತಾ ಕಾರ್ಮಕಾರ್ ನರ್ಸಿಂಗ್ ತರಬೇತಿ…

18 hours ago

ಸಿದ್ದರಾಮಯ್ಯ ಸಿದ್ಧಾಂತದ ಹೋರಾಟಕ್ಕೆ ಅಂತ್ಯವೆಂಬುದೇ ಇಲ್ಲ

ಆರ್.ಟಿ.ವಿಠ್ಠಲಮೂರ್ತಿ ಕರ್ನಾಟಕದ ರಾಜಕೀಯ ಚರಿತ್ರೆಯಲ್ಲಿ ಹೊಸ ಮೈಲಿಗಲ್ಲಾಗಿ ದಾಖಲಾಗಿರುವ ಸಿದ್ದರಾಮಯ್ಯ ಅವರೀಗ ಮತ್ತೊಂದು ಪಯಣಕ್ಕೆ ಸಜ್ಜಾಗಬೇಕಿದೆ. ಇನ್ನು ಚುನಾವಣೆಗಳಲ್ಲಿ ಸ್ಪರ್ಧಿಸುವು…

18 hours ago

ಕಣ್ಮನ ಸೆಳೆಯುತ್ತಿದೆ ಮಲ್ಲಳ್ಳಿ ಜಲಪಾತ!

ಲಕ್ಷ್ಮೀಕಾಂತ್ ಕೊಮಾರಪ್ಪ ಪ್ರಾಕೃತಿಕ ಸೌಂದರ್ಯಕ್ಕೆ ಮಾರುಹೋಗುತ್ತಿರುವ ಪ್ರವಾಸಿಗರು ಸೋಮವಾರಪೇಟೆ: ಎತ್ತ ನೋಡಿದರೂ ಅಚ್ಚಹಸಿರಿನ ಕಾಡು ಸುಂದರ ಪ್ರಕೃತಿಯ ಸೊಬಗು... ನಿಮಿಷಕ್ಕೊಮ್ಮೆ…

18 hours ago