ರಾಜ್ಯ

ಕೇಂದ್ರ ತೆರಿಗೆ ಕಡಿತ; ಸರ್ಕಾರದ ಹೆಸರು ಕೆಡಿಸುವ ಪ್ರಯತ್ನ : ಸಿಎಂ ಸಿದ್ದರಾಮಯ್ಯ ಆರೋಪ

ಬೆಂಗಳೂರು: ರಾಜ್ಯಕ್ಕೆ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲನ್ನು ಇನ್ನಷ್ಟು ಕಡಿತಗೊಳಿಸಲು ಕೇಂದ್ರ ಸರ್ಕಾರ ಮಾಡುತ್ತಿರುವ ಪ್ರಯತ್ನ ಕರ್ನಾಟಕ ವಿರೋಧಿ ಮಾತ್ರವಲ್ಲ ಒಕ್ಕೂಟ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಸಾರುವ ಸಂವಿಧಾನಕ್ಕೆ ಕೂಡಾ ವಿರುದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರತಿಪಾದಿಸಿದ್ದಾರೆ.

ಈ ಕುರಿತು ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದ ತೆರಿಗೆ ಪಾಲನ್ನು ಶೇಕಡಾ 41ರಿಂದ 40ಕ್ಕೆ ಇಳಿಸಲು ಶಿಫಾರಸು ಮಾಡುವಂತೆ ಹಣಕಾಸು ಆಯೋಗಕ್ಕೆ ಕೇಂದ್ರದ ಎನ್‌ಡಿಎ ಸರ್ಕಾರ ಸಿದ್ಧತೆ ನಡೆಸಿದೆ ಎಂದು ವರದಿಯಾಗಿದೆ. ನರೇಂದ್ರ ಮೋದಿ ಅವರು ಪ್ರಧಾನಿಯಾದ ದಿನದಿಂದ ಕೇಂದ್ರ ಸರ್ಕಾರದ ನೀತಿ-ನಿರ್ಧಾರಗಳನ್ನು ಗಮನಿಸುತ್ತಾ ಬಂದರೆ ನಿರಂತರವಾಗಿ ರಾಜ್ಯಗಳ ಸಂವಿಧಾನಬದ್ಧ ಅಧಿಕಾರಗಳನ್ನು ಮೊಟಕುಗೊಳಿಸುತ್ತಾ ಅವುಗಳನ್ನು ದುರ್ಬಲಗೊಳಿಸುತ್ತಾ ಬಂದಿರುವುದನ್ನು ಕಾಣಬಹುದು ಎಂದಿದ್ದಾರೆ.

ರಾಜ್ಯಗಳು ಸಂಗ್ರಹಿಸಿ ಕೇಂದ್ರ ಸರ್ಕಾರಕ್ಕೆ ನೀಡುವ ತೆರಿಗೆಯಲ್ಲಿ ನ್ಯಾಯಬದ್ಧ ಪಾಲು ರಾಜ್ಯಗಳಿಗೆ ಹಂಚಿಕೆಯಾಗುವಂತೆ ನೋಡಿಕೊಳ್ಳಬೇಕಾಗಿರುವ ಜವಾಬ್ದಾರಿಯನ್ನು ಹೊಂದಿರುವ ಕೇಂದ್ರ ಹಣಕಾಸು ಆಯೋಗ ರಾಜ್ಯಗಳ ಹಕ್ಕುಗಳನ್ನು ದಮನಿಸಲು ಹೊರಟ ಕೇಂದ್ರ ಸರ್ಕಾರದ ಕೈಗಳ ಆಯುಧವಾಗಿರುವುದು ದುರಂತವೇ ಸರಿ. ರಾಜ್ಯಗಳು ಕೇಂದ್ರ ಸರ್ಕಾರದ ಮರ್ಜಿ ಕಾಯುವಂತಹ ಪರವಾಲಂಬಿ ಸ್ಥಿತಿಗೆ ನೂಕುವುದು ಈ ಹುನ್ನಾರದ ದುರುದ್ದೇಶವಾಗಿರುವಂತೆ ಕಾಣುತ್ತಿದೆ. ಇದನ್ನ ಸಹಿಸಲು ಸಾಧ್ಯ ಇಲ್ಲ ಎಂದು ಎಚ್ಚರಿಸಿದ್ದಾರೆ.

ಅಧಿಕಾರದ ವಿಕೇಂದ್ರೀಕರಣ ಪ್ರಜಾಪ್ರಭುತ್ವ, ಅಧಿಕಾರದ ಕೇಂದ್ರಿಕರಣ ಸರ್ವಾಧಿಕಾರ. ದೇಶದಲ್ಲಿ ಪ್ರಜಾಪ್ರಭುತ್ವ ಸ್ಥಾಪನೆಯಾಗಿ ಎಂಟು ದಶಕಗಳು ಪೂರ್ಣಗೊಳ್ಳುತ್ತಿರುವ ಇಂದಿನ ಸ್ಥಿತಿಯಲ್ಲಿ ಪ್ರಜಾಪ್ರಭುತ್ವವನ್ನು ಇನ್ನಷ್ಟು ವಿಕಾಸಗೊಳಿಸಿ ಅಧಿಕಾರದ ವಿಕೇಂದ್ರಿಕರಣ ಮಾಡಬೇಕಾದ ಕಾಲದಲ್ಲಿ ಕೇಂದ್ರ ಸರ್ಕಾರ ರಾಜ್ಯಗಳನ್ನು ತಮ್ಮ ಅಧೀನದ ಮಾಂಡಲಿಕರ ರೀತಿ ನಡೆಸಿಕೊಳ್ಳುತ್ತಿರುವುದು ವಿಷಾದನೀಯ.

ಪ್ರತಿ ವರ್ಷ ಕನ್ನಡಿಗರಿಂದ ಸಂಗ್ರಹಿಸಲಾದ ಅಂದಾಜು ನಾಲ್ಕು ಲಕ್ಷ ಕೋಟಿ ರೂಪಾಯಿಗಳನ್ನು ರಾಜ್ಯ ಸರ್ಕಾರ ಕೇಂದ್ರ ಸರ್ಕಾರಕ್ಕೆ ಸಲ್ಲಿಸುತ್ತದೆ. ಅದರಲ್ಲಿ ರಾಜ್ಯಕ್ಕೆ ವಾಪಸು ಬರುವುದು ರೂಪಾಯಿಗೆ 15 ಪೈಸೆ ಮಾತ್ರ. ಹದಿನೈದನೇ ಹಣಕಾಸು ಆಯೋಗ ತೆರಿಗೆ ಹಂಚಿಕೆಯ ಪ್ರಮಾಣವನ್ನು ಶೇಕಡಾ 4.713ರಿಂದ ಶೇಕಡಾ 3.64ಕ್ಕೆ ಇಳಿಸಿದ್ದ ಕಾರಣದಿಂದಾಗಿ ಕರ್ನಾಟಕ ಕಳೆದ ಐದು ವರ್ಷಗಳಲ್ಲಿ 68,775 ಕೋಟಿ ರೂಪಾಯಿಯನ್ನು ಕಳೆದುಕೊಂಡಿದೆ ಎಂದಿದ್ದಾರೆ.

15ನೇ ಹಣಕಾಸು ಆಯೋಗದ ಅವಧಿ ಮುಂದಿನ ವರ್ಷ ಪೂರ್ಣಗೊಳ್ಳಲಿದ್ದರೂ ಇಲ್ಲಿಯ ವರೆಗೆ ಆಯೋಗವೇ ಶಿಫಾರಸು ಮಾಡಿರುವ ವಿಶೇಷ ಅನುದಾನ ರೂ.5495 ಕೋಟಿ ಮತ್ತು ರಾಜ್ಯ ಕೇಂದ್ರಿತ ರೂ.6000 ಕೋಟಿ ಮೊತ್ತದ ವಿಶೇಷ ಅನುದಾನವನ್ನು ಬಿಡುಗಡೆ ಮಾಡಿಲ್ಲ.
ಕೇಂದ್ರ ಹಣಕಾಸು ಆಯೋಗ ತಾನು ಶಿಫಾರಸು ಮಾಡಿದ್ದಕ್ಕಿಂತ ಕಡಿಮೆ ಮೊತ್ತದ ಹಣವನ್ನು ರಾಜ್ಯ ಸರ್ಕಾರಕ್ಕೆ ನೀಡುತ್ತಾ ಬಂದಿದೆ. 2021-22, 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ ನಗರ ಸ್ಥಳೀಯ ಸಂಸ್ಥೆಗಳಿಗೆ ₹1,311 ಕೋಟಿ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳಿಗೆ ₹775 ಕೋಟಿ ಕಡಿಮೆ ಅನುದಾನ ನೀಡಲಾಗಿದೆ. 2022-23 ಮತ್ತು 2023-24ರ ಹಣಕಾಸು ವರ್ಷದಲ್ಲಿ, ಆರೋಗ್ಯ ಅನುದಾನದಲ್ಲಿ ರೂ.826 ಕೋಟಿ, ಎಸ್ ಡಿ ಆರ್ ಎಫ್ ಅಡಿಯಲ್ಲಿ ರೂ.340 ಕೋಟಿ ಹಣವನ್ನು ಕಡಿತ ಮಾಡಲಾಗಿದೆ. ಈ ಒಟ್ಟು ಬಾಕಿ ರೂ.3,300 ಕೋಟಿ ರೂಪಾಯಿ ಮತ್ತು 2024-25 ಮತ್ತು 2025-26ರ ಅವಧಿಯಲ್ಲಿ ಆಯೋಗ ಶಿಫಾರಸು ಮಾಡಿರುವ ವಿಶೇಷ ಅನುದಾನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಗ್ಯಾರಂಟಿ ಯೋಜನೆಗಳಂತಹ ಜನಪ್ರಿಯ ಕಾರ್ಯಕ್ರಗಳ ಮೂಲಕ ಕನ್ನಡಿಗರ ಮನಸ್ಸು ಗೆದ್ದಿರುವ ಕಾಂಗ್ರೆಸ್ ಸರ್ಕಾರಕ್ಕೆ ಹೇಗಾದರೂ ಮಾಡಿ ಅಪಖ್ಯಾತಿ ತರಬೇಕೆಂದು ಕೇಂದ್ರ ಸರ್ಕಾರ ನಿರ್ಧರಿಸಿದಂತಿದೆ. ಇದಕ್ಕಾಗಿ ದುರುದ್ದೇಶದಿಂದ ನ್ಯಾಯಬದ್ಧವಾಗಿ ನೀಡಬೇಕಾಗಿರುವ ತೆರಿಗೆ ಪಾಲು ಮತ್ತಿತರ ಅನುದಾನ ನೀಡದೆ ರಾಜ್ಯದ ಖಜಾನೆಯನ್ನು ಬರಿದುಮಾಡಲು ಹೊರಟಿದೆ. ಇಂತಹ ದಮನಕಾರಿ ನೀತಿಗಳನ್ನು ಎದುರಿಸುವ ಶಕ್ತಿ ಮತ್ತು ಧೈರ್ಯ ರಾಜ್ಯ ಸರ್ಕಾರಕ್ಕಿದೆ. ಈ ಅನ್ಯಾಯವನ್ನು ರಾಜ್ಯದ ಜನತೆಯೂ ಅರ್ಥಮಾಡಿಕೊಂಡಿದ್ದಾರೆ. ರಾಜ್ಯಕ್ಕೆ ಆಗುತ್ತಿರುವ ಅನ್ಯಾಯವನ್ನು ಪರಿಹರಿಸಲು ಮನವಿ – ಮಾತುಕತೆ ಮೂಲಕ ನಡೆಸುತ್ತಾ ಬಂದ ಪ್ರಯತ್ನ ವಿಫಲವಾದಲ್ಲಿ ಬೀದಿಗಿಳಿದು ಜನರ ಜೊತೆ ಸೇರಿ ಹೋರಾಟ ನಡೆಸುವುದು ಅನಿವಾರ್ಯವಾಗಬಹುದು ಎಂದು ಎಚ್ಚರಿಸಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಹದೇಶ್ವರ ಬೆಟ್ಟ ಮುಖ್ಯರಸ್ತೆ ಬದಿಯಲ್ಲಿ ಒಂಟಿಸಲಗ ದರ್ಶನ: ಭಯಭೀತರಾದ ವಾಹನ ಸವಾರರು

ಮಹಾದೇಶ್‌ ಎಂ ಗೌಡ, ಹನೂರು ತಾಲ್ಲೂಕು ವರದಿಗಾರರು ಹನೂರು: ಶ್ರೀಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಬಾಲಕನ…

2 hours ago

ಸೈಬರ್ ಕ್ರೈಂ ಪೊಲೀಸರ ಕ್ಷಿಪ್ರ ಕಾರ್ಯಾಚರಣೆ: ಕಳೆದುಹೋಗಿದ್ದ 104 ಮೊಬೈಲ್ ವಶಕ್ಕೆ

ಮಡಿಕೇರಿ: ಕೊಡಗು ಜಿಲ್ಲೆಯ ಸೈಬರ್ ಕ್ರೈಂ ಪೊಲೀಸರು ಒಂದು ತಿಂಗಳ ಕಾಲ ಕ್ಷಿಪ್ರ ಕಾರ್ಯಾಚರಣೆ ಮಾಡುವ ಮೂಲಕ ನಾಗರಿಕರು ಕಳೆದುಕೊಂಡ…

2 hours ago

ಮಕ್ಕಳಿಗೆ ಜಂತುಹುಳು ಮಾತ್ರೆ ನೀಡಿದ ಶಾಸಕ ಅನಿಲ್ ಚಿಕ್ಕಮಾದು

ಎಚ್.ಡಿ.ಕೋಟೆ: ಮಾದಾಪುರ ಗ್ರಾಮದ ಚಂದ್ರಮೌಳೇಶ್ವರ ಮಲ್ಲಿಕಾರ್ಜುನ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ರಾಷ್ಟ್ರೀಯ ಜಂತುಹುಳು ನಿವಾರಣಾ ದಿನದ ಪ್ರಯುಕ್ತ ಅರಣ್ಯ ಮತ್ತು…

2 hours ago

ಕಾಯಕ ಶರಣರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು: ಡಾ.ಬಿ.ವಿ.ನಂದೀಶ್

ಮಂಡ್ಯ: ಕಾಯಕ ಶರಣರು ಸಮಾಜಕ್ಕೆ ವಚನಗಳ ಮೂಲಕ ಅನೇಕ ಕೊಡುಗೆಗಳನ್ನು ನೀಡಿದ್ದಾರೆ. ಯುವ ಜನತೆಯೂ ಕಾಯಕ ಶರಣರ ಆದರ್ಶ, ಮೌಲ್ಯಗಳನ್ನು…

3 hours ago

ಮಕ್ಕಳು ಅಂತರ್ಜಾಲದ ಬಳಕೆ ಕಡಿಮೆ ಮಾಡಬೇಕು: ಬಿ.ಸಿ.ಶಿವಾನಂದ ಮೂರ್ತಿ

ಮಂಡ್ಯ: ಪ್ರಸ್ತುತ ಕಾಲದಲ್ಲಿ ಮಕ್ಕಳು ಅಂತರ್ಜಾಲ ಬಳಕೆಯನ್ನು ಹೆಚ್ಚು ಮಾಡುತ್ತಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಮುಳುಗಿ ಹೋಗಿದ್ದಾರೆ ಇದರಿಂದ ಮಕ್ಕಳ ಮನಸ್ಥಿತಿ…

3 hours ago

ಮಂಡ್ಯ ಜಿಲ್ಲೆ ಇ-ಪೌತಿ ಖಾತಾ ಆಂದೋಲನದಲ್ಲಿ ರಾಜ್ಯಕ್ಕೆ ಪ್ರಥಮ

ಮಂಡ್ಯ: ಪೌತಿ ಖಾತೆ ಪ್ರಕ್ರಿಯೆಯನ್ನು ಮಂಡ್ಯ ಜಿಲ್ಲೆಯು ಈ ಪೌತಿ ಖಾತೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದು, ಈ ಪೌತಿ ಖಾತೆಯನ್ನು…

3 hours ago