Mysore
26
broken clouds

Social Media

ಸೋಮವಾರ, 16 ಫೆಬ್ರವರಿ 2026
Light
Dark

ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ : ತ್ವರಿತ ಸೇವೆಗೆ ಕ್ರಮ

ಬೆಂಗಳೂರು : ಇ-ಸ್ವತ್ತು 2.0 ತಂತ್ರಾಂಶದಲ್ಲಿ ಕೆಲವು ಬದಲಾವಣೆಗಳನ್ನು ಮಾಡುವ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಯನ್ನು ನೀಡಲು ಕ್ರಮ ಕೈಗೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ತಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಅದರಂತೆ ನಮೂನೆ–11ಬಿ ಖಾತೆಗಳನ್ನು ನಮೂನೆ–11ಎ ಗಳಾಗಿ ಪರಿವರ್ತನೆ ಮಾಡಿಕೊಳ್ಳಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ನೀಡಲಾಗಿದೆ ಎಂದು ತಿಳಿಸಿರುವ ಸಚಿವರು ಹೊಸ ಬಹುಮಹಡಿ (ಅಪಾರ್ಟ್ಮೆಂಟ್) ಗಳಿಗೆ ಅರ್ಜಿಗಳನ್ನು ಸಲ್ಲಿಸಲು ಗ್ರಾಮ ಪಂಚಾಯತಿ ಹಂತದಲ್ಲಿ ಅವಕಾಶ ಕಲ್ಪಸಿಕೊಡುವ ಮೂಲಕ ತ್ವರಿತ ಸೇವೆಗೆ ಅವಕಾಶ ಒದಗಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಗುಂಟೆ ಮತ್ತುಸೆಂಟ್ಸ್ ನಲ್ಲಿರುವ ವಿಸ್ತೀರ್ಣವನ್ನು ಚ.ಮೀ ನಲ್ಲಿ ಪರಿವರ್ತಿಸಿ, ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದೂ ಸಚಿವರು ಹೇಳಿದ್ದು, ಹೊಸ ಬಡಾವಣೆಗಳಿಗೆ ಅರ್ಜಿಗಳನ್ನು ಸಲ್ಲಿಸಲು ಮತ್ತು ಇ-ಸ್ವತ್ತು ತಂತ್ರಾಂಶದ ಸಿಟಿಜನ್ ಇಂಟರ್ ಫೇಸ್ (citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳನ್ನು ಮುಂದಿನ 10 ದಿನದೊಳಗೆ ಬಗೆಹರಿಸಲಾಗುವುದು ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದಡಿ ಸಾರ್ವಜನಿಕರಿಂದ ಇದುವರೆಗೆ ಒಟ್ಟು 1,16,296 ಅರ್ಜಿಗಳು ಸ್ವೀಕೃತವಾಗಿವೆ, ಪ್ರಸ್ತುತ, 4,705 ಅರ್ಜಿಗಳು ಗ್ರಾಮ ಪಂಚಾಯತಿ ಕಾರ್ಯದರ್ಶಿಗಳ ಲಾಗಿನ್ನಲ್ಲಿ, 12,378 ಅರ್ಜಿಗಳು ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳ ಲಾಗಿನ್ನಲ್ಲಿ, 3,069 ಅರ್ಜಿಗಳು ಗ್ರಾಮ ಪಂಚಾಯತಿ ಅಧ್ಯಕ್ಷರ ಲಾಗಿನ್ನಲ್ಲಿ ಹಾಗೂ 883 ಅರ್ಜಿಗಳು ತಾಲ್ಲೂಕು ಪಂಚಾಯತಿಯ ಕಾರ್ಯನಿರ್ವಾಹಕ ಅಧಿಕಾರಿಗಳ ಲಾಗಿನ್ನಲ್ಲಿ ಅನುಮೋದನೆಗಾಗಿ ಬಾಕಿ ಇವೆ. ಈ ರೀತಿ, ವಿವಿಧ ಹಂತಗಳಲ್ಲಿ ಒಟ್ಟು 21,035 ಅರ್ಜಿಗಳು ಅನುಮೋದನೆಗಾಗಿ ಬಾಕಿ ಇರುತ್ತವೆಯಲ್ಲದೆ, ಇದುವರೆಗೆ ಇ-ಸ್ವತ್ತು 2.0 ತಂತ್ರಾಂಶದಡಿ ಒಟ್ಟು 95,261 ಅರ್ಜಿಗಳು ಅನುಮೋದನೆಗೊಂಡು ವಿಲೇವಾರಿ ಮಾಡಲಾಗಿದೆ ಎಂಬ ವಿವರಗಳನ್ನು ಸಚಿವರು ನೀಡಿದ್ದಾರೆ.

ಇ-ಸ್ವತ್ತು 2.0 ತಂತ್ರಾಂಶದ ಸಿಟಿಜನ್ ಇಂಟರ್ ಫೇಸ್ (Citizen Interface) ಮೂಲಕ ಅರ್ಜಿಗಳನ್ನು ಸಲ್ಲಿಸುವಲ್ಲಿ ಮತ್ತು ಬಳಕೆದಾರರು ಅರ್ಜಿಗಳನ್ನು ಅನುಮೋದನೆ ಮಾಡುವಂತಹ ಸಂದರ್ಭದಲ್ಲಿ ಉಂಟಾಗುತ್ತಿರುವ ತಾಂತ್ರಿಕ ಸಮಸ್ಯೆಗಳು ಸರ್ಕಾರದ ಗಮನಕ್ಕೆ ಬಂದಿದೆ ಎಂದು ಹೇಳಿರುವ ಸಚಿವರು ಕೇಂದ್ರ ಸರ್ಕಾರ ನಿರ್ವಹಿಸುತ್ತಿರುವ ಎನ್.ಐ.ಸಿ (NIC) ತಂತ್ರಾಂಶದಲ್ಲಿನ ತೊಡಕುಗಳಿಂದ ಇ-ಸ್ವತ್ತು ಮಂಜಾರಾತಿಯಲ್ಲಿ ವಿಳಂಬವಾಗುತ್ತಿದ್ದು, ಈಗಾಗಲೆ ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ಸಚಿವರಿಗೆ ಪತ್ರ ಬರೆದು, ಇ-ಸ್ವತ್ತು 2.0 ತಂತ್ರಾಂಶದ ಸಮಸ್ಯೆಗಳನ್ನು ತ್ವರಿತವಾಗಿ ಬಗೆಹರಿಸಲು ಮತ್ತು ಉಳಿದ ಮಾಡ್ಯುಲ್ ಗಳನ್ನು ಆದ್ಯತೆ ಮೇರೆಗೆ ಅಭಿವೃದ್ದಿಪಡಿಸಲು ಕೋರಲಾಗಿದೆ ಎಂದಿದ್ದಾರೆ.

ಸಾರ್ವಜನಿಕರಿಗೆ ಅರ್ಜಿ ಸಲ್ಲಿಸಲು ಯಾವುದೇ ಕಾಲಾವಧಿಯನ್ನು ನಿಗದಿಪಡಿಸಲಾಗಿರುವುದಿಲ್ಲ, ಸಾರ್ವಜನಿಕರು ಗ್ರಾಮ ಪಂಚಾಯಿತಿಗೆ ಭೇಟಿ ನೀಡದೆಯೇ ತಾವಿರುವಲ್ಲಿಯೇ ತಮ್ಮ ಆಸ್ತಿಗೆ ಸಂಬಂಧಿಸಿದಂತೆ ನಮೂನೆಗಳನ್ನು ಇ-ಸ್ವತ್ತು ತಂತ್ರಾಂಶದ ಮೂಲಕ ಪಡೆಯಲು ಅವಕಾಶ ಕಲ್ಪಿಸಲಾಗಿದ್ದು ಸಮಸ್ಯೆ / ಸಂದೇಹಗಳನ್ನು ಬಗೆಹರಿಸಲು ಸರ್ಕಾರ ಬದ್ದವಾಗಿದ್ದು, ಈ ಬಗ್ಗೆ ಸಾರ್ವಜನಿಕರು ಸಹಕರಿಸಬೇಕೆಂದು ಸಚಿವ ಪ್ರಿಯಾಂಕ್ ಖರ್ಗೆ ಕೋರಿದ್ದಾರೆ.

ನಿಯಮಗಳಿಗೆ ಹಾಗೂ ಇ-ಸ್ವತ್ತು ತಂತ್ರಾಂಶದ ಬಳಕೆಗೆ ಸಂಬಂಧಿಸಿದಂತೆ ಸಾರ್ವಜನಿಕರ ಸಹಾಯಕ್ಕಾಗಿ ಇಲಾಖೆಯಿಂದಸಹಾಯವಾಣಿ (9483476000) ಪ್ರಾರಂಭಿಸಲಾಗಿದೆ. ಇ-ಸ್ವತ್ತು 2.0 ರಡಿ ಅರ್ಜಿ ಸಲ್ಲಿಸಲು, ಸಂಬಂಧಿತ ದಾಖಲಾತಿ / ಪ್ರಕ್ರಿಯೆಯಲ್ಲಿ / ತಂತ್ರಾಂಶದ ಬಳಕೆಯ ಕುರಿತು ಸಂದೇಹಗಳಿದ್ದಲ್ಲಿ ತಮ್ಮ ಜಿಲ್ಲಾ ಸಹಾಯವಾಣಿಗೆ ಕರೆ ಮಾಡಬಹುದಾಗಿದೆ. ಜಿಲ್ಲಾ ಸಹಾಯವಾಣಿಗಳ ಸಂಖ್ಯೆಯನ್ನು https://eswathu.karnataka.gov.in/Login.aspx  ರಲ್ಲಿ “ಸಂಪರ್ಕಿಸಿ” ಶೀರ್ಷಿಕೆಯಡಿ ಹಾಗೂ  https://panchatantra.karnataka.gov.in ರಲ್ಲಿ ಪ್ರಕಟಿಸಲಾಗಿದೆ.

Tags:
error: Content is protected !!