ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಐಪಿಎಲ್ ಪಂದ್ಯಾವಳಿಗೆ ಅನುಮತಿ ನೀಡುವ ಸಂಬಂಧ ಪಟ್ಟಂತೆ ಬುಧವಾರ ಹಿರಿಯ ಅಧಿಕಾರಿಗಳು ಹಾಗೂ ಕಾನೂನು ತಜ್ಞರ ಜೊತೆ ಮಹತ್ವದ ಸಭೆ ನಡೆಸುವುದಾಗಿ ಗೃಹ ಸಚಿವ ಡಾ. ಜಿ ಪಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕರ್ನಾಟಕ ಕ್ರಿಕೆಟ್ ಸಂಸ್ಥೆಯ ಅಧ್ಯಕ್ಷ ವೆಂಕಟೇಶ್ ಪ್ರಸಾದ್, ವಕ್ತಾರರಾದ ವಿನಯ್ ಕುಮಾರ್ ಹಾಗೂ ಸಂಸ್ಥೆಯ ಪದಾಧಿಕಾರಿಗಳು, ಆರ್ಸಿಬಿಯ ಪ್ರತಿನಿಧಿಗಳು ತಮ್ಮನ್ನು ಭೇಟಿ ಮಾಡಿದ್ದಾರೆ. ಈ ಹಿಂದೆ ಆರ್ಸಿಬಿ ವಿಜಯೋತ್ಸವದ ವೇಳೆಯಲ್ಲಿ ಕಾಲ್ತುಳಿತದಲ್ಲಿ 11 ಮಂದಿ ಜೀವಹಾನಿಯಾಗಿದೆ. ಆ ಪ್ರಕರಣದ ತನಿಖೆಗೆ ನಿವೃತ್ತ ನ್ಯಾಯಮೂರ್ತಿ ಮೈಕಲ್ ಕುನ್ಹಾ ಅವರ ನೇತೃತ್ವದಲ್ಲಿ ನ್ಯಾಯಾಂಗ ಸಮಿತಿಯನ್ನು ರಚಿಸಲಾಗಿತ್ತು. ಸಮಿತಿ ವರದಿ ಆಧರಿಸಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಕ್ರಿಕೆಟ್ ಸಂಸ್ಥೆಗೆ ಪತ್ರ ಬರೆಯಲಾಗಿದೆ. ಜೊತೆಗೆ ಮುಂಜಾಗ್ರತಾ ಕ್ರಮಗಳನ್ನು ಪರಿಶೀಲನೆ ನಡೆಸಲು ಜಿಬಿಎ ಮುಖ್ಯ ಆಯುಕ್ತರಾದ ಮಹೇಶ್ವರರಾವ್, ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರನ್ನು ಒಳಗೊಂಡ ಹಿರಿಯ ಅಧಿಕಾರಿಗಳ ಸಮಿತಿಯನ್ನು ರಚಿಸಲಾಗಿತ್ತು. ಅವರು ಕಾಲಕಾಲಕ್ಕೆ ಕ್ರೀಡಾಂಗಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸುಮಾರು 18 ಅಂಶಗಳನ್ನು ಅನುಷ್ಠಾನಗೊಳಿಸಲು ಸೂಚನೆ ನೀಡಲಾಗಿದೆ ಎಂದರು.
ಈ ನಡುವೆ ಐಪಿಎಲ್ ಮತ್ತು ಅಂತಾರಾಷ್ಟ್ರೀಯ ಕ್ರಿಕೆಟ್ ಪಂದ್ಯಾವಳಿಗಳು ಎದುರಾಗಿವೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯಾವಳಿಯನ್ನು ನಡೆಸಲು ಪೊಲೀಸ್ ಇಲಾಖೆಯ ಪೂರ್ವ ಅನುಮತಿ ದೊರೆತರೆ ಮಾತ್ರ ಪಂದ್ಯಾವಳಿಗಳ ವೇಳಾಪಟ್ಟಿಯಲ್ಲಿ ಬೆಂಗಳೂರು ಸೇರ್ಪಡೆಯಾಗುತ್ತದೆ. ಈ ಹಿನ್ನಲೆಯಲ್ಲಿ ತಾವು ಬಿಬಿಎಂಪಿ ಮತ್ತು ಪೊಲೀಸ್ ಇಲಾಖೆಯ ಆಯುಕ್ತರು ಹಾಗೂ ಕಾನೂನು ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಚರ್ಚೆ ನಡೆಸುವುದಾಗಿ ಹೇಳಿದರು.




