ಬೆಂಗಳೂರು: ರಾಜ್ಯದಲ್ಲಿ ಸಿಎಂ ಬದಲಾವಣೆ ಚರ್ಚೆ ಬಗ್ಗೆ ಹೈಕಮಾಂಡ್ ಹಲವು ಬಾರಿ ಕಟ್ಟುನಿಟ್ಟಿನ ಸೂಚನೆ ನೀಡಿದರೂ ಕಾಂಗ್ರೆಸ್ ಪಕ್ಷದ ವಲಯದಲ್ಲಿ ಅದೇ ಮುಂದುವರೆದಿದೆ.
ಗೃಹ ಸಚಿವ ಜಿ. ಪರಮೇಶ್ವರ್ ಮಾತನಾಡಿ, ಮುಖ್ಯಮಂತ್ರಿ ಬದಲಾವಣೆ ವಿಚಾರದಲ್ಲಿ ಶಾಸಕರ ಅಭಿಪ್ರಾಯ ಮುಖ್ಯ. ಅವರ ಅಭಿಪ್ರಾಯದ ಮೇರೆಗೆ ಹೈಕಮಾಂಡ್ ತೆಗೆದುಕೊಳ್ಳುವ ನಿರ್ಧಾರವೇ ಅಂತಿಮ ಎಂದರು.
ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರು ಡಿಕೆ ಶಿವಕುಮಾರ್ ಸಿಎಂ ಆಗಲು ಶಾಸಕರ ಬೆಂಬಲಬೇಕು ಎಂದು ಹೇಳಿಕೆ ನೀಡಿದ್ದರು. ಈ ಹೇಳಿಕೆಗೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕಮಾರ್, ಸಚಿವರೇ ಆಗಲಿ, ಶಾಸಕರೇ ಅಗಲಿ ಯಾವುದೇ ವಿಚಾರವನ್ನು ಸರ್ಕಾರ ಹಾಗೂ ಪಕ್ಷದ ವೇದಿಕೆಯಲ್ಲಿ ಚರ್ಚಿಸಬೇಕು. ಹಾದಿಬೀದಿಯಲಿ ಈ ರೀತಿಯ ಹೇಳಿಕೆ ನೀಡುವುದು ತಪ್ಪು ಎಂದು ಹೇಳಿದರು.
ಮಂಗಳವಾರ ಮಾತನಾಡಿದ್ದ ಸಹಕಾರ ಸಚಿವ ಕೆ.ಎನ್. ರಾಜಣ್ಣ, ಮುಖ್ಯಮಂತ್ರಿ ಆಯ್ಕೆ ವಿಚಾರದಲ್ಲಿ ಶಾಸಕಾಂಗ ಪಕ್ಷದ ಅಭಿಪ್ರಾಯ ಸಂಗ್ರಹಿಸಿದ ನಂತರವೇ ಹೈಕಮಾಂಡ್ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ. ಎಲ್ಲ ಶಾಸಕರದ್ದು ಒಂದೇ ಅಭಿಪ್ರಾಯವಿರುವುದಿಲ್ಲ. ಕಾಂಗ್ರೆಸ್ ಪಕ್ಷದಲ್ಲಿ ಮುಖ್ಯಮಂತ್ರಿಯಾಗುವವರು ಬಹಳಷ್ಟು ಜನ ಇದ್ದಾರೆ. ಹೈಕಮಾಂಡ್ ಎಲ್ಲರ ಅಭಿಪ್ರಾಯ ಕೇಳುತ್ತದೆ. ಅವರ ನಿರ್ಣಯಕ್ಕೆ ನಾವು ಬದ್ದರಾಗಿರುತ್ತೇವೆ ಎಂದು ಹೇಳಿದ್ದರು.