ರಾಜ್ಯ

ಮೆಟ್ರೋ ದರ ಹೆಚ್ಚಳ| ರಾಜ್ಯದ ಜನತೆಯ ಮುಂದೆ ಕೆಲ ವಾಸ್ತವಾಂಶಗಳ ಬಿಡುಗಡೆ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಮೆಟ್ರೋ ಪ್ರಯಾಣ ದರ ಹೆಚ್ಚಳಕ್ಕೆ ಸಂಬಂಧಿಸಿದಂತೆ ಕೆಲ ವಾಸ್ತವಾಂಶಗಳನ್ನು ರಾಜ್ಯದ ಜನತೆಯೇ ಮುಂದೆ ಬಿಡುಗಡೆ ಮಾಡುವ ಮೂಲಕ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಅವರು, ಬೆಂಗಳೂರು ಮೆಟ್ರೋ ರೈಲಿನ ಪ್ರಯಾಣ ದರ ಹೆಚ್ಚಳಕ್ಕೆ ವಿರೋಧ ವ್ಯಕ್ತವಾಗುತ್ತಿರುವ ಹಿನ್ನೆಲೆಯಲ್ಲಿ ಕೆಲವು ವಾಸ್ತವಾಂಶಗಳನ್ನು ಬೆಂಗಳೂರು ಜನತೆಯ ಮುಂದಿಡಲು ಬಯಸುತ್ತೇನೆ ಎಂದಿದ್ದಾರೆ.

ಮೆಟ್ರೋ ಪ್ರಯಾಣ ದರ ಹೆಚ್ಚಳವನ್ನು ವಿರೋಧಿಸುತ್ತಿರುವ ವಿರೋಧ ಪಕ್ಷವಾದ ಬಿಜೆಪಿಯ ನಾಯಕರು ಯಥಾಪ್ರಕಾರ ಸುಳ್ಳು ಮತ್ತು ತಿರುಚಿದ ಮಾಹಿತಿಯನ್ನು ಬಳಸಿಕೊಂಡು ರಾಜ್ಯ ಸರ್ಕಾರದ ವಿರುದ್ಧ ಆರೋಪಗಳನ್ನು ಮಾಡಿ ಸಾರ್ವಜನಿಕರ ಹಾದಿ ತಪ್ಪಿಸುತ್ತಿದ್ದಾರೆ. ಸರ್ಕಾರದ ಯಾವುದೇ ನೀತಿ-ನಿರ್ಧಾರಗಳನ್ನು ವಿರೋಧಿಸುವ ಅಧಿಕಾರ ಸಾರ್ವಜನಿಕರಿಗೆ ಇದೆ. ಸಂವಿಧಾನಬದ್ಧವಾದ ಅವರ ಹಕ್ಕನ್ನು ನಾನು ಗೌರವಿಸುತ್ತೇನೆ. ಆದರೆ ವಿರೋಧ ಪಕ್ಷದ ಸ್ಥಾನದಲ್ಲಿ ರಾಜ್ಯದ ಜನತೆ ಕೂರಿಸಿರುವ ಬಿಜೆಪಿ ಪಕ್ಷ ರಾಜಕೀಯ ದುರುದ್ದೇಶದಿಂದ ಸುಳ್ಳು ಮಾಹಿತಿಗಳನ್ನು ನೀಡಿ ಸಾರ್ವಜನಿಕರ ಪ್ರತಿಭಟನೆಗೆ ಕುಮ್ಮಕ್ಕು ನೀಡುತ್ತಿರುವುದು ಅಕ್ಷಮ್ಯವಾಗಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಒಂದೆಡೆ ಮೆಟ್ರೋ ರೈಲು ನಿರ್ಮಾಣದ ಸಾಧನೆ ಕೇಂದ್ರದ ಬಿಜೆಪಿ ಸರ್ಕಾರದ್ದು ಎಂದು ಡಂಗುರ ಬಾರಿಸುತ್ತಿರುವ ಬಿಜೆಪಿ ನಾಯಕರು ದರ ಪರಿಷ್ಕರಣೆ ವಿರುದ್ಧ ಜನಾಕ್ರೋಶ ವ್ಯಕ್ತವಾಗುತ್ತಿರುವುದನ್ನು ಕಂಡು ಅದರ ಜವಾಬ್ದಾರಿಯನ್ನು ರಾಜ್ಯ ಸರ್ಕಾರದ ಮೇಲೆ ಹೊರಿಸುತ್ತಿರುವುದು ಆತ್ಮವಂಚಕ ನಡವಳಿಕೆಯಾಗಿದೆ ಎಂದು ಕಿಡಿಕಾರಿದ್ದಾರೆ.

ಕೇಂದ್ರ ಮತ್ತು ಕರ್ನಾಟಕ ಸರ್ಕಾರ ಜೊತೆಗೂಡಿ ಬೆಂಗಳೂರು ಮೆಟ್ರೊ ರೈಲು ನಿಗಮವನ್ನು ಸ್ಥಾಪಿಸಿದ್ದು, ಇದರಲ್ಲಿ ಎರಡೂ ಸರ್ಕಾರಗಳ ಸಮ (50:50) ಪಾಲುದಾರಿಕೆ ಇದೆ. ಕೇಂದ್ರ ನಗರ ಮತ್ತು ವಸತಿ ವ್ಯವಹಾರ ಇಲಾಖೆಯ ಕಾರ್ಯದರ್ಶಿಯಾಗಿರುವ ಶ್ರೀನಿವಾಸ ಕಟಿಕಿಥಲ ಅವರು ನಿಗಮದ ಈಗಿನ ಅಧ್ಯಕ್ಷರು. ವ್ಯವಸ್ಥಾಪಕ ನಿರ್ದೇಶಕ ಮತ್ತು ನಿರ್ದೇಶಕರ ಸ‍್ಥಾನದಲ್ಲಿ ಕೇಂದ್ರ ಮತ್ತು ರಾಜ್ಯದ ಅಧಿಕಾರಿಗಳಿದ್ದಾರೆ. ಅಲ್ಲದೇ ಇದೊಂದು ಸ್ವಾಯತ್ತ ಸಂಸ್ಥೆಯಾಗಿದ್ದು ಇದರ ಮೇಲೆ ರಾಜ್ಯ ಸರ್ಕಾರಕ್ಕೆ ಪೂರ್ಣ ನಿಯಂತ್ರಣಾಧಿಕಾರ ಇಲ್ಲ. ಉಳಿದೆಲ್ಲ ನಗರಗಳ ಮೆಟ್ರೋ ರೈಲು ನಿಗಮಗಳಂತೆ ಬೆಂಗಳೂರು ಮೆಟ್ರೊ ರೈಲು ನಿಗಮ ಕೂಡಾ ಕೇಂದ್ರ ಸರ್ಕಾರದ ಮೆಟ್ರೋ ರೈಲು (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯ್ದೆ 2002ರ ಅಡಿಯಲ್ಲಿ ಕಾರ್ಯ ನಿರ್ವಹಿಸಬೇಕಾಗುತ್ತದೆ ಎಂದು ತಿಳಿಸಿದ್ದಾರೆ.

2017ರ ನಂತರ ಮೆಟ್ರೊ ರೈಲಿನ ಪ್ರಯಾಣ ದರ ಪರಿಷ್ಕರಣೆ ಮಾಡದೆ ಇರುವ ಕಾರಣ ದರ ಪರಿಷ್ಕರಣೆ ನಡೆಸುವಂತೆ ಬಿಎಂಆರ್‌ಸಿಎಲ್ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿತ್ತು. ಪ್ರಯಾಣ ದರ ಹೆಚ್ಚಳದ ಅಧಿಕಾರ ರಾಜ್ಯ ಸರ್ಕಾರದ ಕೈಯಲ್ಲೇ ಇದ್ದಿದ್ದರೆ ಬಿಎಂಆರ್‌ಸಿಎಲ್ ನಮಗೆ ಪತ್ರ ಬರೆಯದೆ, ಕೇಂದ್ರ ಸರ್ಕಾರಕ್ಕೆ ಯಾಕೆ ಪತ್ರ ಬರೆಯುತ್ತಿತ್ತು? ಎಂದು ಪ್ರಶ್ನಿಸಿದ್ದಾರೆ.

ಇನ್ನೂ ಬಿಎಂಆರ್‌ಸಿಎಲ್ ಪತ್ರಕ್ಕೆ ಪ್ರತಿಕ್ರಿಯಿಸಿದ್ದ ಕೇಂದ್ರ ಬಿಜೆಪಿ ಸರ್ಕಾರ ಮದ್ರಾಸ್ ಹೈಕೋರ್ಟ್‌ನ ನಿವೃತ್ತ ನ್ಯಾಯಮೂರ್ತಿ ಆರ್. ಥರಾನಿ ಅವರ ಅಧ್ಯಕ್ಷತೆಯಲ್ಲಿ ದರ ಪರಿಷ್ಕರಣಾ ಸಮಿತಿ ರಚಿಸಿತ್ತು. ಈ ಸಮಿತಿಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರ ಪ್ರತಿನಿಧಿಗಳು ಸದಸ್ಯರಾಗಿದ್ದರು. 2024ರ ಸೆಪ್ಟೆಂಬರ್ 16ರಂದು ಅಧಿಕಾರ ಸ್ವೀಕರಿಸಿದ ಈ ಸಮಿತಿಗೆ ಮೂರು ತಿಂಗಳೊಳಗೆ ತನ್ನ ಶಿಫಾರಸನ್ನು ಸಲ್ಲಿಸಬೇಕೆಂದು ಕೇಂದ್ರ ಸರ್ಕಾರ ಪತ್ರದಲ್ಲಿ ತಿಳಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

ಮೂರು ತಿಂಗಳ ಅವಧಿಯಲ್ಲಿ ದರ ಪರಿಷ್ಕರಣ ಸಮಿತಿ ಬಿಎಂಆರ್‌ಸಿಎಲ್ ಅಧಿಕಾರಿಗಳ ಜೊತೆ ಮಾತ್ರವಲ್ಲ ದೆಹಲಿ ಮತ್ತು ಚನ್ನೈಗಳಿಗೆ ತೆರಳಿ ಅಲ್ಲಿನ ಮೆಟ್ರೋ ಸಂಸ್ಥೆಗಳ ಅಧಿಕಾರಿಗಳ ಜೊತೆಯಲ್ಲಿ ಕೂಡಾ ಕಾರ್ಯಾಚರಣೆ ಮತ್ತು ಪ್ರಯಾಣ ದರದ ಬಗ್ಗೆ ಸಮಾಲೋಚನೆ ನಡೆಸಿತ್ತು. ಅಲ್ಲದೇ 2017ರ ಜೂನ್‌ನಲ್ಲಿ ಬೆಂಗಳೂರು ಮೆಟ್ರೋ ರೈಲಿಗೆ ನಿಗದಿಗೊಳಿಸಿದ್ದ ಪ್ರಯಾಣದರ, ಮೆಟ್ರೋದಲ್ಲಿ ಸಂಚರಿಸುತ್ತಿದ್ದ ಪ್ರಯಾಣಿಕರ ಅನುಭವಗಳನ್ನು ದರಪರಿಷ್ಕರಣ ಸಮಿತಿ ಕಲೆ ಹಾಕಿತ್ತು. ಇದರ ಜೊತೆಯಲ್ಲಿ ಬಿಎಂಆರ್‌ಸಿಎಲ್‌ನ ಹಣಕಾಸು ಸಾಮರ್ಥ್ಯವನ್ನು ಕೂಡಾ ಸಮಿತಿ ಅಧ್ಯಯನ ಮಾಡಿ 2024ರ ಡಿಸೆಬರ್ 16ರಂದು ಸಮಿತಿ ತನ್ನ ವರದಿನ್ನು ಸಲ್ಲಿಸಿತ್ತು ಎಂದಿದ್ದಾರೆ.

2017ರ ಜೂನ್ ತಿಂಗಳಲ್ಲಿ ಬಿಎಂಆರ್‌ಸಿಎಲ್ ಪ್ರಯಾಣ ದರ ನಿಗದಿಪಡಿಸಿದಾಗ ಮೆಟ್ರೋ ಪ್ರಥಮ ಹಂತದ 42.30 ಕಿ.ಮೀ ಮಾರ್ಗ ಮಾತ್ರ ಪೂರ್ಣಗೊಂಡಿತ್ತು. ಮೆಟ್ರೋ ಎರಡನೇ ಹಂತ ಭಾಗಶ: ಪೂರ್ಣಗೊಂಡ ನಂತರ ಈಗ ಮೆಟ್ರೋ ಮಾರ್ಗ 42.30 ಕಿ.ಮೀಟರ್ ಗೆ ವಿಸ್ತರಣೆ ಗೊಂಡಿದೆ. ಮೆಟ್ರೋ 2, 2ಎ, ಮತ್ತು 2ಬಿ ಮಾರ್ಗಗಳು (96.60 ಕಿ.ಮೀ.) 2026ರ ಡಿಸೆಂಬರ್ ತಿಂಗಳಲ್ಲಿ ಪೂರ್ಣಗೊಳ್ಳುವ ನಿರೀಕ್ಷೆ ಇದ್ದು ಆಗ ಬೆಂಗಳೂರು ಮೆಟ್ರೋ ಮಾರ್ಗ 175,55 ಕಿ.ಮೀ.ಗೆ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ.

ಬೆಂಗಳೂರು ಮೆಟ್ರೋ ರೈಲಿಗೆ ಸಂಬಂಧಿಸಿದ ಈ ಎಲ್ಲ ಅಂಶಗಳನ್ನು ಗಮನಕ್ಕೆ ತೆಗೆದುಕೊಂಡು ಚರ್ಚೆ ನಡೆಸಿದ ನಂತರ ಹತ್ತು ಅಧ್ಯಾಯಗಳಲ್ಲಿ ತನ್ನ ವರದಿ ನೀಡಿದೆ. ಸಮಿತಿ ದೇಶದ ಉಳಿದ ಮೆಟ್ರೋ ರೈಲಿನ ಪ್ರಯಾಣ ದರವನ್ನು ಅಧ್ಯಯನ ಮಾಡಿದೆ. ಸದ್ಯ ಬೆಂಗಳೂರು ಮೆಟ್ರೋ ಪ್ರಯಾಣ ದರ ಕನಿಷ್ಠ ರೂ.10 ಮತ್ತು ಗರಿಷ್ಠ ರೂ.60 ಆಗಿದೆ. ಮುಂಬೈ ಮೆಟ್ರೋ ರೈಲಿನ ಕನಿಷ್ಠ ಪ್ರಯಾಣದರ ರೂ.10 ಮತ್ತು ಗರಿಷ್ಠ ಪ್ರಯಾಣ ದರ ರೂ.80 ಆಗಿದೆ. ಇನ್ನೂ ದೆಹಲಿ ಮೆಟ್ರೋವನ್ನು ಹೊರತುಪಡಿಸಿ ಉಳಿದೆಲ್ಲ ರಾಜ್ಯಗಳಲ್ಲಿ ಮೊದಲ ಹಂತದ ಪ್ರಯಾಣದರವನ್ನು ಆಯಾ ರಾಜ್ಯಗಳ ಮೆಟ್ರೊ ನಿಗಮಗಳೇ ನಿಗದಿ ಪಡಿಸಿತ್ತು. ಆದರೆ ಈಗ ಪ್ರಯಾಣ ದರವನ್ನು ಕೇಂದ್ರ ಬಿಜೆಪಿ ಸರ್ಕಾರ ನೇಮಿಸುವ ಸಮಿತಿ ನಿಗದಿಪಡಿಸುತ್ತದೆ ಎಂದು ರಾಜ್ಯದ ಜನತೆಗೆ ಮಾಹಿತಿ ನೀಡಿದ್ದಾರೆ.

ಮೆಟ್ರೋ ರೈಲ್ವೆ (ಕಾರ್ಯಾಚರಣೆ ಮತ್ತು ನಿರ್ವಹಣೆ) ಕಾಯಿದೆಯ ಸೆಕ್ಷನ್ 37ರ ಪ್ರಕಾರ ಪ್ರಯಾಣ ದರ ನಿಗದಿ ಸಮಿತಿ ನೀಡಿದ ವರದಿಯನ್ನು ಮೆಟ್ರೋ ರೈಲು ನಿಗಮಗಳು ( ಈ ಪ್ರಕರಣದಲ್ಲಿ ಬಿಎಂಆರ್ ಸಿಎಲ್ ) ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾಗಿ ಮಹಿಳೆ ಸಾವು: ಇಬ್ಬರಿಗೆ ಗಾಯ

ಹುಣಸೂರು: ಬೈಕ್‌ಗೆ ಕೆಎಸ್‌ಆರ್‌ಟಿಸಿ ಬಸ್‌ ಡಿಕ್ಕಿಯಾದ ಪರಿಣಾಮ ಮಹಿಳೆಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು ತಾಲ್ಲೂಕಿನ ಯಶೋಧರಪುರ ಗೇಟ್‌ ಬಳಿ…

25 mins ago

ಜನವರಿ 28 ಮತ್ತು 29ರಂದು ‘ತಟ್ಟೆ ಇಡ್ಲಿ ರಾದ್ಧಾಂತ’ ಹಾಸ್ಯ ನಾಟಕ ಪ್ರದರ್ಶನ

ಮೈಸೂರು: ರಂಗವಲ್ಲಿ ಸಂಸ್ಥೆಯು ಕನ್ನಡ ಮತ್ತು ಸಂಸ್ಕೃತಿ ನಿರ್ದೇಶನಾಲಯ, ಬೆಂಗಳೂರು ಇವರ ಸಹಯೋಗದೊಂದಿಗೆ ದಿನಾಂಕ: 28.01.2026 ಮತ್ತು 29.01.2026ರ ಸಂಜೆ…

43 mins ago

ರಾಜೀವ್‌ ಗೌಡಗೆ ಆಶ್ರಯ ನೀಡಿದ ಉದ್ಯಮಿಯೂ ಪೊಲೀಸರ ವಶಕ್ಕೆ

ಚಿಕ್ಕಬಳ್ಳಾಪುರ: ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾಗೌಡ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ಕಾಂಗ್ರೆಸ್‌ ಮುಖಂಡ ರಾಜೀವ್‌ ಗೌಡರನ್ನು…

1 hour ago

ಅಮೇರಿಕಾದಲ್ಲಿ ಭೀಕರ ಹಿಮ ಬಿರುಗಾಳಿ: 25 ಜನ ಸಾವು

ವಾಷಿಂಗ್ಟನ್:‌ ಅಮೇರಿಕಾದಾದ್ಯಂತ ಬೀಸುತ್ತಿರುವ ಭೀಕರ ಹಿಮಬಿರುಗಾಳಿ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಹಿಮಪಾತ ಹಾಗೂ ಮೈಕೊರೆಯುವ ಚಳಿಗೆ ಇದುವರೆಗೆ ಸುಮಾರು 25ಕ್ಕೂ ಹೆಚ್ಚು…

2 hours ago

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

3 hours ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

6 hours ago