Mysore
21
clear sky

Social Media

ಶುಕ್ರವಾರ, 16 ಜನವರಿ 2026
Light
Dark

22ನೇ ಚಿತ್ರಸಂತೆ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕಲಾಸಕ್ತರು ಚಿತ್ರಸಂತೆಗೆ ಭೇಟಿ ನೀಡಿ ಕಲಾಕೃತಿಯನ್ನು ಕೊಂಡು ಕಲಾವಿದರಿಗೆ ಬೆಂಬಲ ನೀಡಬೇಕು. ಮನೆಯಲ್ಲಿ ಕಲಾಕೃತಿಯಿದ್ದರೆ ಚಿತ್ರ ಸಂತೆ ಏರ್ಪಾಡು ಮಾಡಿದ್ದಕ್ಕೂ ಸಾರ್ಥಕವಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ಕರೆ ನೀಡಿದರು.

ಸಿಎಂ ಸಿದ್ದರಾಮಯ್ಯ ಅವರಿಂದು ಬೆಂಗಳೂರಿನ ಕುಮಾರ ಕೃಪಾ ರಸ್ತೆಯಲ್ಲಿ ಚಿತ್ರಕಲಾ ಪರಿಷತ್ತು ವತಿಯಿಂದ ಆಯೋಜಿಸಿದ್ದ 22ನೇ ಚಿತ್ರಸಂತೆಯನ್ನು ಉದ್ಘಾಟನೆ ಮಾಡಿ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.

ಏಳನೇ ಬಾರಿ ಚಿತ್ರಸಂತೆ ಉದ್ಘಾಟಿಸುತ್ತಿದ್ದು, ರಾಜ್ಯದ ಸಂಸ್ಕೃತಿ, ಪರಂಪರೆ, ಸಂಪ್ರದಾಯವನ್ನು ಚಿತ್ರದ ಮೂಲಕ ರಾಜ್ಯ ಮತ್ತು ಜಗತ್ತಿಗೆ ತಿಳಿಸಬೇಕೆಂಬ ಪ್ರಯತ್ನವನ್ನು ಚಿತ್ರ ಕಲಾ ಪರಿಷತ್ತು ಮಾಡುತ್ತಿದೆ ಎಂದು ತಿಳಿಸಿದರು. ಬಳಿಕ ಚಿತ್ರಸಂತೆ ಆಯೋಜಿಸಿದ್ದ ಎಲ್ಲಾ ಪದಾಧಿಕಾರಿಗಳನ್ನು ಅಭಿನಂದಿಸಿದರು.

ಚಿತ್ರಸಂತೆಯಲ್ಲಿ 22 ರಾಜ್ಯಗಳ ಕಲಾವಿದರು ಪಾಲ್ಗೊಳ್ಳುತ್ತಿರುವುದು ಶ್ಲಾಘನೀಯ. ಜಗತ್ತಿನ ಯಾವ ಭಾಗದಲ್ಲಿಯೂ ಚಿತ್ರಸಂತೆ ನಡೆಯುವುದನ್ನು ನಾನು ನೋಡಿಲ್ಲ. ಕರ್ನಾಟಕದಲ್ಲಿ ಅದರಲ್ಲೂ ಬೆಂಗಳೂರಿನಲ್ಲಿ ಚಿತ್ರನಟ ನಡೆಯುವುದು ಹೆಮ್ಮೆಯ ಸಂಗತಿ ಎಂದರು.

ಈ ಬಾರಿಯ ಚಿತ್ರಸಂತೆಯನ್ನು ಹೆಣ್ಣುಮಕ್ಕಳಿಗೆ ಸಮರ್ಪಣೆ ಮಾಡಿರುವುದು ವಿಶೇಷ. ಹೆಣ್ಣುಮಕ್ಕಳ ಪರವಾಗಿ ಕೆಲಸ ಮಾಡಿದ ಮಹಾತ್ಮ ಗಾಂಧಿ, ಅಂಬೇಡ್ಕರ್, ಸಾವಿತ್ರಿಬಾಯಿ ಫುಲೆ, ಫಾತಿಮಾ ಶೇಖ್, ಕಮಲಾ ಬಾಯಿ ಚಟ್ಟೋಪಾಧ್ಯಾಯ, ಯಶೋಧರಮ್ಮ ದಾಸಪ್ಪ, ದತ್ತಮ್ಮ ಮೊದಲಾದವರ ಚಿತ್ರಗಳನ್ನು ಪ್ರದರ್ಶಿಸಿದ್ದಾರೆ. ಒಬ್ಬ ಪುರುಷನಿಗೆ ಶಿಕ್ಷಣ ನೀಡಿದರೆ ಒಬ್ಬ ವ್ಯಕ್ತಿಗೆ ಶಿಕ್ಷಣ ನೀಡಿದಂತಾಗುತ್ತದೆ. ಒಬ್ಬ ಮಹಿಳೆಗೆ ಶಿಕ್ಷಣ ನೀಡಿದರೆ ಒಂದು ಕುಟುಂಬವೇ ಕಲಿತಂತಾಗುತ್ತದೆ ಎಂದರು.

ಇನ್ನು ಹೆಣ್ಣು ಮಕ್ಕಳು ಶೋಷಣೆ, ತಾರತಮ್ಯ, ಅನ್ಯಾಯಕ್ಕೆ ಒಳಗಾದವರು. ಅವರನ್ನು ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲರನ್ನಾಗಿಸಲು ಶಕ್ತಿ ಹಾಗೂ ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿ ಮಾಡಿದ್ದೇವೆ ಎಂದರು.

 

Tags:
error: Content is protected !!