ರಾಜ್ಯ

ಚುನಾವಣಾ ಆಯೋಗದ ಅನುಮತಿ ಕೇಳಿದ್ದನೇ ಜಯವೆಂದು ಸಿಎಂ ಸಿದ್ದರಾಮಯ್ಯ ಸುಳ್ಳು ಹೇಳಿದ್ದಾರೆ :  ಆರ್.ಅಶೋಕ ಆರೋಪ

  • ವಿಧಾನಸೌಧ ದುರ್ಬಳಕೆ, ಮುಖ್ಯ ಕಾರ್ಯದರ್ಶಿ ವಿರುದ್ಧ ದೂರು
  • ನೇಹಾ ಹತ್ಯೆ ಪ್ರಕರಣ ಸಿಬಿಐಗೆ ವಹಿಸಿ
  • ಪಿಕ್ ಪಾಕೇಟ್ ಕಾಂಗ್ರೆಸ್, ಕನ್ನಡಿಗರ ಕೈಗೆ ಚಿಪ್ಪು ಪೋಸ್ಟರ್ ಬಿಡುಗಡೆ

ಬೆಂಗಳೂರು : ಕೇಂದ್ರ ಸರ್ಕಾರ ಬರ ಪರಿಹಾರ ನೀಡಲು ಚುನಾವಣಾ ಆಯೋಗದ ಅನುಮತಿ ಕೇಳಿದ್ದು, ಇದನ್ನೇ ನ್ಯಾಯಾಲಯದಲ್ಲಿ ತಿಳಿಸಲಾಗಿದೆ. ಈ ವಿಷಯವನ್ನು ತಮಗೆ ಸಿಕ್ಕಿದ ಜಯ ಎಂದು ಸಿಎಂ ಸಿದ್ದರಾಮಯ್ಯ ಸುಳ್ಳು ಬಿಂಬಿಸುತ್ತಿದ್ದಾರೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಸರ್ಕಾರ ಬರ ಪರಿಹಾರ ಬಿಡುಗಡೆಗೆ ಅನುಮತಿಗಾಗಿ ಚುನಾವಣಾ ಆಯೋಗಕ್ಕೆ ಪತ್ರ ಬರೆದಿತ್ತು. ಆರ್ಥಿಕ ಸಚಿವೆ ನಿರ್ಮಲಾ ಸೀತಾರಾಮನ್‌ ಈ ಕುರಿತು ತಿಳಿಸಿದ್ದರು. ಸುಪ್ರೀಂ ಕೋರ್ಟ್‌ನಲ್ಲಿ ನಡೆಯುತ್ತಿರುವ ಪ್ರಕರಣದ ವಿಚಾರಣೆ ವೇಳೆಯೂ ಇದನ್ನು ತಿಳಿಸಲಾಗಿದೆ. ಆದರೆ ಕಾಂಗ್ರೆಸ್‌ ನಾಯಕರು ಜಯ ಸಿಕ್ಕಿದೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಹಣ ಬಿಡುಗಡೆಗಾಗಿಯೇ ಅನುಮತಿ ಕೇಳಿರುವಾಗ ಕಾಂಗ್ರೆಸ್‌ ಪಾತ್ರ ಇದರಲ್ಲಿ ಏನೂ ಇಲ್ಲ. ಜಯ ಸಿಗಲು ಕಾಂಗ್ರೆಸ್‌ನ ವಕೀಲರು ಏನೂ ವಾದ ಮಾಡಿಲ್ಲ ಎಂದರು.

ಮಲ್ಲಿಕಾರ್ಜುನ ಖರ್ಗೆ ಹಾಗೂ ಸುರ್ಜೇವಾಲಾ ಅವರು ಯಾವ ಮುಖ ಇಟ್ಟುಕೊಂಡು ಬೆಂಗಳೂರಿಗೆ ಬರುತ್ತಾರೆ? ಇಲ್ಲಿ ಬಾಂಬ್‌ ಸ್ಫೋಟ ಆಗಿರುವಾಗ ನಿಮಗೆ ಮತ ಕೇಳಲು ಯಾವ ಅಧಿಕಾರ ಇದೆ? ಕೇಂದ್ರ ಸರ್ಕಾರ ಕ್ರಮ ವಹಿಸಿದ್ದರಿಂದಲೇ ಬರ ಪರಿಹಾರ ಹಲವಾರು ರಾಜ್ಯಗಳಿಗೆ ದೊರೆಯುತ್ತಿದೆ. ಈಗಾಗಲೇ ಬರ ಪರಿಹಾರವನ್ನು ರಾಜ್ಯ ಸರ್ಕಾರದ ವತಿಯಿಂದ ನೀಡಬೇಕಿತ್ತು. ಎಸ್‌ಡಿಆರ್‌ಎಫ್‌ನಿಂದ 700 ಕೋಟಿ ರೂ. ಹಣವನ್ನು ಕೇಂದ್ರ ಸರ್ಕಾರ ನೀಡಿದೆ. ಆದರೆ ರಾಜ್ಯ ಸರ್ಕಾರವೇ ನೀಡಿದಂತೆ ಸಿಎಂ ಸಿದ್ದರಾಮಯ್ಯ ಹೇಳಿಕೊಳ್ಳುತ್ತಿದ್ದಾರೆ ಎಂದರು.

2013-14 ರಲ್ಲಿ ಬರ ಪರಿಹಾರ ನೀಡಲು ಸಿಎಂ ಸಿದ್ದರಾಮಯ್ಯ 9 ತಿಂಗಳು ತೆಗೆದುಕೊಂಡಿದ್ದರು. ಕೇಂದ್ರದಲ್ಲೀಗ ಬಿಜೆಪಿ ಇದೆ ಎಂಬ ಕಾರಣಕ್ಕೆ ಇಲ್ಲಸಲ್ಲದ ಆರೋಪ ಮಾಡಲಾಗುತ್ತಿದೆ. ಮೋದಿ ಸರ್ಕಾರ 7,940 ಕೋಟಿ ರೂ. ಪರಿಹಾರ ನೀಡಿದ್ದರೆ, ಮನಮೋಹನ್‌ ಸಿಂಗ್‌ ಸರ್ಕಾರ 3,000 ಕೋಟಿ ರೂ. ನೀಡಿದೆ. ಗ್ಯಾರಂಟಿಗಳಿಂದಾಗಿ ರಾಜ್ಯ ಸರ್ಕಾರದ ಬಳಿ ಹಣವಿಲ್ಲ. ಈ ಕಾರಣಕ್ಕಾಗಿಯೇ ಕೇಂದ್ರ ಸರ್ಕಾರದ ಮೇಲೆ ಆರೋಪ ಮಾಡಲಾಗುತ್ತಿದೆ ಎಂದರು.

ಸಿಬಿಐಗೆ ತನಿಖೆ ವಹಿಸಿ : ಕಾಂಗ್ರೆಸ್‌ ಸರ್ಕಾರ ಪಾಪರ್‌ ಆಗಿ ಬೀದಿಗೆ ಬಂದಿದ್ದು, ಮುಂದೆ ಸಂಬಳ ಕೊಡಲು ಹಣ ಇರುವುದಿಲ್ಲ. ಕಾಂಗ್ರೆಸ್‌ ವಿರುದ್ಧ ಹಿಂದೂಗಳು ಕೆರಳುತ್ತಿದ್ದಾರೆ. ಹಿಂದೂಗಳ ರಕ್ತವನ್ನು ಮತಾಂಧರು ಹರಿಸುತ್ತಿದ್ದು, ಇದನ್ನು ಮರೆಮಾಚಿಸಲು ಈ ರೀತಿ ಪ್ರತಿಭಟನೆ ಮಾಡುತ್ತಿದ್ದಾರೆ. ನೇಹಾ ಹತ್ಯೆಯ ತನಿಖೆಯನ್ನು ಸಿಬಿಐಗೆ ಕೊಡದೆ ಸಿಐಡಿಗೆ ನೀಡಿ ಮುಚ್ಚಿಹಾಕುವ ಕೆಲಸ ಮಾಡುತ್ತಿದ್ದಾರೆ. ಅವರ ತಂದೆಯೇ ಲವ್‌ ಜಿಹಾದ್‌ ಹೇಳಿದ್ದಾರೆ. ಈ ಪ್ರಕರಣವನ್ನು ಸೂಕ್ತವಾಗಿ ತನಿಖೆ ಮಾಡಲು ಸಿಬಿಐಗೆ ವಹಿಸಬೇಕು ಎಂದು ಆಗ್ರಹಿಸಿದರು.

ಪ್ರಧಾನಿ ನರೇಂದ್ರ ಮೋದಿ ಮಾಂಗಲ್ಯ ಕುರಿತು ನೀಡುವ ಹೇಳಿಕೆ ಸರಿಯಾಗಿಯೇ ಇದೆ. ಹಿಂದೆ ಮನಮೋಹನ್‌ ಸಿಂಗ್‌ ಅವರು ಮುಸ್ಲಿಮರಿಗೆ ಸಂಪತ್ತಿನ ಹಂಚಿಕೆ ಬಗ್ಗೆ ಹೇಳಿದ್ದರು ಎಂದರು.

ಇದೇ ಸಂದರ್ಭದಲ್ಲಿ ಸತ್ಯ ಸಂಗತಿ ಮರೆಮಾಚಿ ಜನರನ್ನು ವಂಚಿಸುತ್ತಿರುವ ಕಾಂಗ್ರೆಸ್ ಮುಖವಾಡ ಬಯಲು ಮಾಡುವ “ಪಿಕ್ ಪಾಕೇಟ್ ಕಾಂಗ್ರೆಸ್” ಮತ್ತು “ಕನ್ನಡಿಗರ ಕೈಗೆ ಚಿಪ್ಪು” ಪೋಸ್ಟರ್ ಗಳನ್ನು ಅಶೋಕ್ ಬಿಡುಗಡೆ ಮಾಡಿದರು.

ಚುನಾವಣಾ ಆಯೋಗಕ್ಕೆ ದೂರು : ವಿಧಾನಸೌಧದಲ್ಲಿ ಕಾಂಗ್ರೆಸ್‌ ಪ್ರತಿಭಟನೆಗೆ ಅವಕಾಶ ನೀಡಿದ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ಪ್ರತಿಭಟಿಸಿದ ಕಾಂಗ್ರೆಸ್‌ ನಾಯಕರ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ವಿಧಾನಸೌಧದ ಒಳಗೆ ಪಕ್ಷ ಸೇರ್ಪಡೆ ಕಾರ್ಯಕ್ರಮವನ್ನು ವಿರೋಧಿಸಿ ಚುನಾವಣಾ ಆಯೋಗಕ್ಕೆ ದೂರು ನೀಡಿದರೂ ಪ್ರಯೋಜನವಾಗಿಲ್ಲ. ಈಗ ವಿಧಾನಸೌಧದ ಮುಂಭಾಗ ಕಾಂಗ್ರೆಸ್‌ ನಾಯಕರು ಪ್ರತಿಭಟಿಸಲು ಅವಕಾಶ ಕೊಟ್ಟ ಮುಖ್ಯ ಕಾರ್ಯದರ್ಶಿಯ ವಿರುದ್ಧ ಕ್ರಮ ಕೈಗೊಳ್ಳಲು ಚುನಾವಣಾ ಆಯೋಗಕ್ಕೆ ದೂರ ನೀಡಲಾಗಿದೆ. ವಿಧಾನಸೌಧವನ್ನು ಈಗಾಗಲೇ ಮೂರು ನಾಲ್ಕು ಬಾರಿ ದುರ್ಬಳಕೆ ಮಾಡಿಕೊಳ್ಳಲಾಗಿದೆ ಎಂದು ಆರ್‌.ಅಶೋಕ ದೂರಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಶಿಕ್ಷಣವೇ ದೇಶ ಕಟ್ಟುವ ಹಾದಿ ಎಂದು ತಿಳಿದಿದ್ದ ದೇಶಪಾಂಡೆಯವರು

ಡಾ.ಎಂ.ಡಿ.ಉಮೇಶ್‌, ಉಪನ್ಯಾಸಕರು, ಗಾಂಧಿ ಅಧ್ಯಯನ ಕೇಂದ್ರ, ಮೈಸೂರು ವಿ.ವಿ ಬೆಳಗಾವಿ ಜಿಲ್ಲೆಯ ಹುದಲಿ ಗ್ರಾಮದಲ್ಲಿ ಬಾಲ ಕೃಷ್ಣ ಮತ್ತು ರಾಧಾಬಾಯಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಇಂಗ್ಲೆಂಡಿನಲ್ಲಿ ಶಾಕಾಹಾರದ ದಿನಗಳು

ಡಾಕ್ಟರ್ ಮೆಹತಾ ಮತ್ತು ನಾನು ಅವರ ಮಿತ್ರನ ಮನೆಗೆ ಹೋದೆವು. ಅವರು ನನ್ನ ವಿಷಯದಲ್ಲಿ ತುಂಬಾ ಕರುಣೆ ಮತ್ತು ಆದರವುಳ್ಳವರಾಗಿದ್ದರು.…

2 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಜುಲೈ 18 ಶನಿವಾರ

2 hours ago

ನಂಜನಗೂಡು | ಹಾಡಹಗಲೇ ಸ್ಕೂಟಿಯಲ್ಲಿದ್ದ ಹಣ ಕಳವು

ನಂಜನಗೂಡು : ಹಾಡಾ ಹಗಲೇ ಜನನಿಬಿಡ ಪ್ರದೇಶದಲ್ಲಿ ನಿಲ್ಲಿಸಿದ್ದ ಸ್ಕೂಟಿಯಿಂದ ಹಣ ಕದ್ದ ಘಟನೆ ಪಟ್ಟಣದ ಮಿನಿ ವಿಧಾನಸೌಧದ ಬಳಿ…

15 hours ago

ಮೈಸೂರು ದಸರಾ ವಸ್ತುಪ್ರದರ್ಶನಕ್ಕೆ ಜಾಗತಿಕ ಸ್ಪರ್ಶ : ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ

ಮೈಸೂರು : ದಸರಾ ವಸ್ತು ಪ್ರದರ್ಶನವನ್ನು ಜಾಗತಿಕ ಮಟ್ಟದಲ್ಲಿ ಮತ್ತಷ್ಟು ಆಕರ್ಷಣೀಯವಾಗಿಸಲು ಕರ್ನಾಟಕ ಪ್ರದರ್ಶನ ಪ್ರಾಧಿಕಾರವು ವಸ್ತು ಪ್ರದರ್ಶನ ಆವರಣವನ್ನು…

17 hours ago

ಇಂದಿನಿಂದ ಮೂರು ದಿನ ಮಳೆ ಸಾಧ್ಯತೆ: ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌

ಬೆಂಗಳೂರು: ಇಂದಿನಿಂದ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ…

20 hours ago